ನೂತನ ಶಾಸಕರಾಗಿ ರಿಝ್ವಾನ್ ಅರ್ಶದ್ ನಾಳೆ ಪ್ರಮಾಣ ವಚನ

Update: 2020-02-02 14:31 GMT

ಬೆಂಗಳೂರು, ಫೆ. 2: ಬೆಂಗಳೂರಿನ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಆಯ್ಕೆಯಾದ ರಿಝ್ವಾನ್ ಅರ್ಶದ್ ಅವರು ನಾಳೆ(ಫೆ.3) ಮಧ್ಯಾಹ್ನ 12:30ಕ್ಕೆ ವಿಧಾನಸೌಧದ ಮೊದಲನೆ ಮಹಡಿಯಲ್ಲಿನ ಸ್ಪೀಕರ್ ಕಚೇರಿಯಲ್ಲಿ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಶಾಸಕ ರಿಝ್ವಾನ್ ಅರ್ಶದ್ ಅವರಿಗೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಶಾಸಕರ ಕರ್ತವ್ಯಕ್ಕೆ ಸಂಬಂಧಿಸಿದ ಗೌಪ್ಯತೆ ಪ್ರಮಾಣ ವಚನ ಬೋಧನೆ ಮಾಡಲಿದ್ದಾರೆಂದು ಕಾಂಗ್ರೆಸ್ ಪಕ್ಷದ ಮಾಧ್ಯಮ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.

ಆರ್.ರೋಷನ್‌ ಬೇಗ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಶಿವಾಜಿನಗರ ಕ್ಷೇತ್ರಕ್ಕೆ ಡಿ.5ರಂದು ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಿಝ್ವಾನ್ ಅರ್ಶದ್ ಅವರು ಬಿಜೆಪಿ ಅಭ್ಯರ್ಥಿ ಎಂ.ಸರವಣ ಅವರನ್ನು 13,521 ಮತಗಳ ಅಂತರದಿಂದ ಸೋಲಿಸಿ ಭರ್ಜರಿ ಜಯಗಳಿಸಿದ್ದರು.

ಡಿ.9ರ ಉಪಚುನಾವಣೆ ಫಲಿತಾಂಶದ ಬಳಿಕ ಕ್ಷೇತ್ರದ ಜನರೊಂದಿಗೆ ಸಂಪರ್ಕ, ಪಕ್ಷದ ವರಿಷ್ಠರ ಭೇಟಿ ಹಿನ್ನೆಲೆಯಲ್ಲಿ ಆಯ್ಕೆಯಾಗಿ ಒಂದು ತಿಂಗಳು 23 ದಿನಗಳ ಬಳಿಕ ನೂತನ ಶಾಸಕರಾಗಿ ರಿಝ್ವಾನ್ ಅರ್ಶದ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿರುವುದು ವಿಶೇಷವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News