'ಸಂಪುಟ ಪುನಾರಚನೆ' ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟನೆ
Update: 2020-02-04 14:39 GMT
ಬೆಂಗಳೂರು, ಫೆ.4: ಬಿಜೆಪಿ ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟಕ್ಕೆ ಹೊಸಬರನ್ನು ನೇಮಕ ಮಾಡಿಕೊಂಡು ಸಂಪುಟ ವಿಸ್ತರಣೆ ಮಾಡಲಾಗುತ್ತಿದೆಯೇ ಹೊರತು, ಪುನಾರಚನೆ ಮಾಡುವ ಪ್ರಸ್ತಾವ ಹೈಕಮಾಂಡ್ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು, ಸಂಪುಟದಲ್ಲಿರುವ ಯಾವ ಹಿರಿಯ ನಾಯಕರನ್ನೂ ಕೈ ಬಿಡುವುದಿಲ್ಲ. ಊಹಾಪೋಹಗಳಿಗೆಲ್ಲ ತಲೆಕೆಡಿಸಿಕೊಳ್ಳಬೇಡಿ, ನಿಮಗೆ ವಹಿಸಿರುವ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸುವ ಕಡೆ ಗಮನ ಹರಿಸಿ ಎಂದು ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ನಮ್ಮ ಸರಕಾರ ಅಧಿಕಾರಕ್ಕೆ ಬಂದು ಇನ್ನು ಒಂದು ವರ್ಷವೂ ಆಗಿಲ್ಲ. ಮುಂದಿನ ಆರು ತಿಂಗಳವರೆಗೆ ಸಚಿವ ಸಂಪುಟವನ್ನು ಪುನಾರಚನೆ ಮಾಡುವುದಿಲ್ಲ. ಆನಂತರ ಹೈಕಮಾಂಡ್ ನೀಡುವ ಸೂಚನೆಯಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ ಎನ್ನಲಾಗಿದೆ.