×
Ad

ಅನರ್ಹ ಶಾಸಕ ಮುನಿರತ್ನ ಆಯ್ಕೆ ಅಸಿಂಧು ಕೋರಿ ಅರ್ಜಿ: ಪ್ರತಿಕ್ರಿಯೆ ನೀಡಲು ಬಿಜೆಪಿ ಅಭ್ಯರ್ಥಿಗೆ ಹೈಕೋರ್ಟ್ ಸೂಚನೆ

Update: 2020-02-11 22:26 IST

ಬೆಂಗಳೂರು, ಫೆ.11: ರಾಜರಾಜೇಶ್ವರಿನಗರ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಆಯ್ಕೆ ಅಸಿಂಧು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನಿಮಗೆ ಒಟ್ಟು ಎಷ್ಟು ಮತಗಳು ಬೀಳಲಿದ್ದವು ಎಂಬುದರ ಬಗ್ಗೆ ಪ್ರತಿಕ್ರಿಯಿಸಲು ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡಗೆ ಸೂಚನೆ ನೀಡಿದೆ. 

ಈ ಕುರಿತು ಮುನಿರಾಜುಗೌಡ ಸಲ್ಲಿಸಿದ್ದ ಚುನಾವಣೆ ತಕರಾರು ಅರ್ಜಿ ವಿಚಾರಣೆ ಹೈಕೋರ್ಟ್ ನ್ಯಾಯಪೀಠದಲ್ಲಿ ನಡೆಯಿತು. ಮುನಿರತ್ನ ಪರ ವಾದಿಸಿದ ವಕೀಲರು, ಮುನಿರಾಜುಗೌಡನಿಗೆ ತಮಗೆ ಒಟ್ಟು ಎಷ್ಟು ಮತಗಳು ಬೀಳಲಿದ್ದವು ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ. ಚುನಾವಣಾ ಅಕ್ರಮ ಕೇಳಿ ಬಂದ ಹಿನ್ನೆಲೆಯಲ್ಲಿ ಎಷ್ಟು ಮತದಾರರು ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ಹೇಳಿಲ್ಲ. ಹೀಗಾಗಿ, ಅರ್ಜಿಯನ್ನು ವಜಾಗೊಳಿಸಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಕೆಲಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠವು ಮುನಿರಾಜುಗೌಡನಿಗೆ ಪ್ರತಿಕ್ರಿಯಿಸಲು ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿತು.

2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರು ರಾಜರಾಜೇಶ್ವರಿ ನಗರದಲ್ಲಿ ನಕಲಿ ವೋಟರ್ ಐಡಿ ಕಾರ್ಡ್‌ಗಳನ್ನು ಮುದ್ರಿಸಿ ಹಂಚುತ್ತಿದ್ದಾರೆ ಎಂದು ಮುನಿರತ್ನ ವಿರುದ್ಧ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ತುಳಸಿ ಮುನಿರಾಜುಗೌಡ ಆರೋಪಿಸಿದ್ದರು. ಈ ಬಗ್ಗೆ ಅವರು ಚುನಾವಣೆ ಆಯೋಗಕ್ಕೂ ದೂರು ನೀಡಿದ್ದರು. ಇದನ್ನು ಪರಿಗಣಿಸಿದ್ದ ಆಯೋಗ ಕೆಲಕಾಲ ಕ್ಷೇತ್ರದ ಚುನಾವಣೆಯನ್ನೂ ಮುಂದೂಡಿತ್ತು. ಬಳಿಕ ಮುನಿರತ್ನ ಅವರು ಗೆಲುವು ಸಾಧಿಸಿದ್ದರು.

ಇದೀಗ ಮುನಿರತ್ನ ಬಿಜೆಪಿಗೆ ಸೇರ್ಪಡೆಯಾಗಿದ್ದು, ಪರಾಜಿತ ಅಭ್ಯರ್ಥಿ ಮುನಿರಾಜುಗೌಡ ಚುನಾವಣಾ ತಕರಾರು ಅರ್ಜಿ ವಿಚಾರಣೆ ಕೋರ್ಟ್‌ನಲ್ಲಿ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News