‘ಪಿಯು ಪರೀಕ್ಷೆ’ ನಿಯಂತ್ರಣ ಕೊಠಡಿಗಳಲ್ಲಿ ಸಿಸಿಟಿವಿ: ಸಚಿವ ಸುರೇಶ್ ಕುಮಾರ್

Update: 2020-02-12 16:36 GMT

ಬೆಂಗಳೂರು, ಫೆ.12: ದ್ವಿತೀಯ ಪಿಯು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸುರಕ್ಷಿತ ರವಾನೆ ಮತ್ತು ಸಂರಕ್ಷಣೆ ದೃಷ್ಟಿಯಿಂದ ರಾಜ್ಯಮಟ್ಟದಲ್ಲಿ ವಿಶೇಷ ವಿಚಕ್ಷಣೆಯೊಂದಿಗೆ ಜಿಲ್ಲಾ ಮಟ್ಟದಲ್ಲೂ ನಿಯಂತ್ರಣ ಕೊಠಡಿಗಳಲ್ಲಿ ಸಿಸಿಟಿವಿ ಮೂಲಕ 24 ಗಂಟೆಯೂ ನಿರಂತರವಾಗಿ ನಿಗಾವಹಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಹೇಳಿದ್ದಾರೆ.

ಬುಧವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಶ್ರೀ ರೇಣುಕಾಚಾರ್ಯ ಕಾನೂನು ಕಾಲೇಜು ಸಭಾಂಗಣದಲ್ಲಿ ನಡೆದ ಬೆಂಗಳೂರು ವಿಭಾಗದ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಮತ್ತು ಸೂಪರಿಂಟೆಂಡೆಂಟ್‌ಗಳ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪರೀಕ್ಷೆ ಕೆಲಸಗಳಿಗೆ ನಿಯೋಜಿತರಾದ ಪ್ರತಿಯೊಬ್ಬರೂ ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷಾ ಪಾವಿತ್ರ್ಯತೆ ಕಾಪಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮುಖ್ಯ ಅಧೀಕ್ಷಕರು ಮಾತ್ರ ಒಂದು ಸಾಮಾನ್ಯ ಮೊಬೈಲ್ ಬಳಸಲು ಅವಕಾಶವಿದ್ದು, ಇತರರಿಗೆ ಮೊಬೈಲ್ ಬಳಕೆಯನ್ನು ನಿಷೇಧ ಮಾಡಲಾಗಿದೆ ಎಂದು ಅವರು ಹೇಳಿದರು.

ವಿಶೇಷ ರಕ್ಷಣಾ ಲಕ್ಷಣಗಳನ್ನೊಳಗೊಂಡ 40 ಪುಟಗಳ ಉತ್ತರಪತ್ರಿಕೆಗಳನ್ನು ಈಗಾಗಲೇ ಸರಬರಾಜು ಮಾಡಲಾಗಿದೆ. ಈ ಬಾರಿ ಪರೀಕ್ಷೆಗೆ ಅನುಭವಿ ಪ್ರಾಚಾರ್ಯರನ್ನು ಮುಖ್ಯ ಅಧೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಪರೀಕ್ಷಾ ಕೊಠಡಿ ಮೇಲ್ವಿಚಾರಕರು, ಪರೀಕ್ಷಾ ಕೆಲಸಗಳಲ್ಲಿ ತೊಡಗಿದವರಿಗೆ ಪರೀಕ್ಷಾ ಗುರುತಿನ ಚೀಟಿ ನೀಡಲಾಗುತ್ತದೆ. ಗುರುತಿನ ಚೀಟಿ ಹೊಂದಿದವರನ್ನು ಹೊರತು ಪಡಿಸಿ ಯಾರಿಗೂ ಪರೀಕ್ಷಾ ಕೇಂದ್ರದೊಳಗೆ ಇಲ್ಲವೇ ಪರೀಕ್ಷಾ ಕೇಂದ್ರದ ಸುತ್ತಮುತ್ತ ಅವಕಾಶಗಳಿರುವುದಿಲ್ಲ ಎಂದು ಅವರು ತಿಳಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷಾ ಸಾಮಗ್ರಿ ರವಾನೆ ಮತ್ತು ಪರೀಕ್ಷಾ ಕೇಂದ್ರಗಳಿಂದ ಸಂಬಂಧಿಸಿದ ಮೌಲ್ಯಮಾಪನ ಕೇಂದ್ರಕ್ಕೆ ಉತ್ತರಪತ್ರಿಕೆ ರವಾನೆಯ ವಾಹನಗಳ ಚಲನವಲನಗಳ ಮೇಲೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಾಪಿಸಲಾಗುವ ವಿಚಕ್ಷಣಾ ಕೇಂದ್ರದಿಂದಲೇ ವೀಕ್ಷಣೆ ಹಾಗೂ ನಿಯಂತ್ರಣ ಮಾಡಲಾಗುತ್ತದೆ ಎಂದು ಸುರೇಶ್ ಕುಮಾರ್ ಹೇಳಿದರು.

ಬೆಂಗಳೂರು ವಿಭಾಗದ 10 ಶೈಕ್ಷಣಿಕ ಜಿಲ್ಲೆಗಳಿಗೆ ಸಂಬಂಧಿಸಿದ ಅಧೀಕ್ಷಕರು ಮತ್ತು ಸೂಪರಿಂಟೆಂಡೆಂಟ್‌ಗಳ ತರಬೇತಿ ಶಿಬಿರದಂತೆಯೇ ಉಳಿದ ಮೂರು ಕಂದಾಯ ವಿಭಾಗಗಳಲ್ಲೂ ಶಿಬಿರ ನಡೆಸಲಾಗುವುದು. ಫೆ.14ರಂದು ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಸ್ಥರು, ಪೊಲೀಸ್ ಆಯುಕ್ತರು, ಖಜಾನಾಧಿಕಾರಿಗಳು ಮತ್ತು ಪಿಯು ಉಪನಿರ್ದೇಶಕರೊಂದಿಗೆ ವಿಡಿಯೋ ಕಾನ್ಫೆರೆನ್ಸ್ ನಡೆಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಈಗಾಗಲೇ ಪೊಲೀಸ್ ಮಹಾನಿರ್ದೇಶಕರು ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸುಗಮ ಪರೀಕ್ಷಾ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದರು.

ಪಿಯು ಪರೀಕ್ಷೆಗೆ ರಾಜ್ಯದಲ್ಲಿ ಒಟ್ಟು 1016 ಪರೀಕ್ಷಾ ಕೇಂದ್ರಗಳಿದ್ದು, 6.80 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. 2.17 ಲಕ್ಷ ವಿಜ್ಞಾನ, 2.61 ಲಕ್ಷ ವಾಣಿಜ್ಯ, 2.01 ಲಕ್ಷ ಕಲಾ ವಿಭಾಗದಲ್ಲಿ ಪರೀಕ್ಷಾರ್ಥಿಗಳಿದ್ದಾರೆ. ಈಗಾಗಲೇ ಹಾಲ್ ಟಿಕೆಟ್‌ಗಳನ್ನು ಒದಗಿಸಲಾಗಿದೆ ಎಂದು ಸಚಿವರು ತಿಳಿಸಿದರು. ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಯಾವುದೇ ರೀತಿಯ ದೂರುಗಳು ಬರದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು. ನಾನು ಶಿಕ್ಷಣ ಸಚಿವನಾಗಿ ಮಕ್ಕಳೊಂದಿಗೆ ಮಾತನಾಡುವಾಗ ಮಕ್ಕಳು, ಪ್ರಶ್ನೆ ಪತ್ರಿಕೆ ಸೋರಿಕೆ, ಮೌಲ್ಯಮಾಪನದಲ್ಲಾಗುವ ತೊಂದರೆ ಮತ್ತು ನಕಲು ತಡೆಯ ಕುರಿತು ಕೇಳುತ್ತಿದ್ದಾರೆ. ಮಕ್ಕಳ ಈ ಮೂರು ಕೋರಿಕೆಗಳು ಪರೀಕ್ಷೆಗಳ ಪಾವಿತ್ರ್ಯವನ್ನೆ ಬಯಸುವುದರಿಂದ ಪ್ರತಿಯೊಬ್ಬರೂ ಈ ಕುರಿತು ಹೆಚ್ಚಿನ ಗಮನ ಹರಿಸಬೇಕು ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪದವಿ ಪೂರ್ವ ಇಲಾಖೆ ನಿರ್ದೇಶಕಿ ಎಂ.ಕನಗವಲ್ಲಿ, ಪಿಯು ಪರೀಕ್ಷಾ ಮಂಡಳಿಯ ಹಿರಿಯ ಅಧಿಕಾರಿಗಳು, ಉಪ ನಿರ್ದೇಶಕರು ಪಾಲ್ಗೊಂಡಿದ್ದರು.

ಪ್ರವೇಶ ಪತ್ರ ಡೌನ್‌ಲೋಡ್‌ಗೆ ಅನುಮತಿ

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾ.4ರಿಂದ 24ರವರೆಗೆ ನಡೆಯಲಿದ್ದು, ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಆಯಾ ಕಾಲೇಜುಗಳ ಹಂತದಲ್ಲಿ ಇಂದಿನಿಂದ(ಫೆ.12) ಡೌನ್‌ಲೋಡ್ ಮಾಡಿಕೊಳ್ಳಲು ಪ್ರಾಂಶುಪಾಲರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯು ಅನುಮತಿ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News