ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಅಪಪ್ರಚಾರ: ಸೈಬರ್ ಠಾಣೆಗೆ ಆಡಳಿತ ಮಂಡಳಿ ದೂರು
Update: 2020-02-13 18:22 GMT
ಮುಂಗಳೂರು, ಫೆ.13: ನಗರದ ಹೊರವಲಯದ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ವೈರಸ್ ತಗುಲಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ನಗರದ ಸೈಬರ್ ಪೊಲೀಸ್ ಠಾಣೆಗೆ ಕಾಲೇಜಿನ ಆಡಳಿತ ಮಂಡಳಿ ದೂರು ನೀಡಿದೆ.
ಇತ್ತೀಚೆಗೆ ಚೀನಾ ಸೇರಿದಂತೆ ಜಗತ್ತನ್ನೇ ಬೆಚ್ಚಿ ಬೀಳಿಸಿದ ಕೊರೋನಾ ವೈರಸ್ ಸೋಂಕು ಭಾರತಕ್ಕೂ ವ್ಯಾಪಿಸಿತ್ತು. ಕೇರಳದಲ್ಲೂ ಈ ಸೋಂಕು ಪತ್ತೆಯಾಗಿ ಬಳಿಕ ವಿದ್ಯಾರ್ಥಿನಿ ಗುಣಮುಖರಾಗಿದ್ದರು. ಈ ವೇಳೆ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳಲ್ಲೂ ಕೊರೋನಾ ಸೋಂಕು ಪತ್ತೆಯಾಗಿರುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು. ಈ ವಿಚಾರ ಆಡಳಿತ ಮಂಡಳಿ ಗಮನಕ್ಕೆ ಬಂದ ಬಳಿಕ ಕಾಲೇಜಿನ ಪ್ರಾಂಶುಪಾಲ ಡಾ.ಶ್ರೀನಿವಾಸ ರಾವ್ ಮಂಗಳೂರು ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿ ತನಿಖೆಗೆ ಒತ್ತಾಯಿಸಿದ್ದಾರೆ.