ನನ್ನ ಹುಮ್ಮಸ್ಸು ಮುಗಿದು ಹೋಗಿದೆ ಎಂದು ಭಾವಿಸಬೇಡಿ: ರಾಜಕೀಯ ಪಕ್ಷಗಳಿಗೆ ಎಚ್ಚರಿಸಿದ ದೇವೇಗೌಡ

Update: 2020-02-16 12:23 GMT

ಹುಬ್ಬಳ್ಳಿ, ಫೆ.16: ರಾಜಕೀಯದಲ್ಲಾದ ಅನೇಕ ಬದಲಾವಣೆಯ ಪರಿಣಾಮ ನಾನು ಹಾಗೂ ನಮ್ಮ ಪಕ್ಷ ನೆಲಕಚ್ಚಿದೆ. ಆದರೆ, ಮರಳಿ ಅಧಿಕಾರ ಹೇಗೆ ಪಡೆಯಬೇಕು ಎಂಬುದು ನನಗೆ ಗೊತ್ತಿದೆ. ಈ ನಿಟ್ಟಿನಲ್ಲಿ ಪ್ರಯತ್ನ ಆರಂಭಿಸಿದ್ದೇನೆಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾನು ಸೋತಿದ್ದೇನೆ. ಪಕ್ಷವೂ ಸೋತಿದೆ. ಮುಂಬರುವ ತಾಲೂಕು, ಜಿಲ್ಲಾ ಮಟ್ಟದ ಚುನಾವಣೆಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಸೋತ ಮಾತ್ರಕ್ಕೆ ದೇವೇಗೌಡರ ಹುಮ್ಮಸ್ಸು ಮುಗಿದು ಹೋಗಿದೆ ಎಂದು ಭಾವಿಸಬೇಡಿ ಎಂದು ಎಚ್ಚರಿಕೆ ನೀಡಿದರು.

ಜೀವನಪೂರ್ತಿ ಹೋರಾಟದ ಹಾದಿಯಲ್ಲಿಯೇ ಬಂದ ನನಗೆ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಗುರಿಯಿದೆ. ಮೊದಲು ತಳಮಟ್ಟದಿಂದ ಪಕ್ಷವನ್ನು ಸಂಘಟಿಸಲಾಗುವುದು. ಇದಕ್ಕಾಗಿ ಒಂಬತ್ತು ಸದಸ್ಯರನ್ನು ಒಳಗೊಂಡ ಕೋರ್ ಕಮಿಟಿ ರಚನೆ ಮಾಡಲಾಗಿದ್ದು, ಪಕ್ಷದ ನಾಯಕರು ಈ ಕಮಿಟಿಯಲ್ಲಿರುತ್ತಾರೆ. ಅವರು ಪ್ರತಿ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಿಗೆ ಹೋಗಿ ಪಕ್ಷವನ್ನು ಬಲಗೊಳಿಸುತ್ತಾರೆ ಎಂದು ಅವರು ಮಾಹಿತಿ ನೀಡಿದರು.

ಜೆಡಿಎಸ್ ಹಾಗೂ ಕಾಂಗ್ರೆಸ್‌ನ ಶಾಸಕರನ್ನು ಬಿಜೆಪಿಗೆ ಕರೆದುಕೊಂಡು ಹೋದವರು ಯಾರು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಪಕ್ಷಗಳಿಂದ ಹೋದವರೇ ಇದನ್ನು ಬಹಿರಂಗವಾಗಿ ಹೇಳಿದ್ದಾರೆ. ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಕುಮಾರಸ್ವಾಮಿ ಜಾರಿಗೆ ತಂದಿದ್ದ ಯೋಜನೆಗಳನ್ನು ಈಗಿನ ರಾಜ್ಯ ಸರಕಾರ ಉದ್ದೇಶಪೂರ್ವಕವಾಗಿ ರದ್ದು ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಪತ್ರಕರ್ತ ಪಾಟೀಲ ಪುಟ್ಟಪ್ಪರವರ ಆರೋಗ್ಯ ವಿಚಾರಿಸಲು ದೇವೇಗೌಡ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ದೇವೇಗೌಡರು, ಪುಟ್ಟಪ್ಪ ಅವರ ಎದೆ ಮೇಲೆ ಕೈ ಇಟ್ಟು ನಮಗಾಗಿ ಹಾಗೂ ಈ ನಾಡಿನ ಜನರಿಗಾಗಿ ಇನ್ನೂ ಚೆನ್ನಾಗಿ ಬದುಕಬೇಕು. ಬೇಗ ಚೇತರಿಸಿಕೊಳ್ಳಿ ಎಂದು ಹಾರೈಸಿದರು

ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರಕಾರ ರಚಿಸಲು ನನಗೆ ಇಷ್ಟವಿರಲಿಲ್ಲ. ಈ ವಿಷಯವನ್ನು ಕೇಂದ್ರದ ಕಾಂಗ್ರೆಸ್ ನಾಯಕರಿಗೆ ಅತ್ಯಂತ ಕಠಿಣವಾಗಿ ಹೇಳಿದ್ದೆ. ಮಲ್ಲಿಕಾರ್ಜುನ ಖರ್ಗೆ ಅವರನ್ನೇ ಮುಖ್ಯಮಂತ್ರಿ ಮಾಡಿ ಎಂದಿದ್ದೆ. ಇದಕ್ಕೆ ಗುಲಾಂ ನಬಿ ಆಝಾದ್ ಸೇರಿದಂತೆ ಕೆಲ ಕಾಂಗ್ರೆಸ್ ನಾಯಕರೇ ಒಪ್ಪಲಿಲ್ಲ. ಬೇಡವೆಂದರೂ ನನ್ನ ಮಗನನ್ನೇ ಮುಖ್ಯಮಂತ್ರಿ ಮಾಡಿದರು.

-ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News