ಶಾಹೀನ್ ಶಾಲೆಯ ಘಟನೆ ಬಗ್ಗೆ ಸರ್ಕಾರದಿಂದ ಸೂಕ್ತ ನಿರ್ಧಾರ: ಸಚಿವ ಶ್ರೀರಾಮಲು
ದಾವಣಗೆರೆ, ಫೆ.16: ಸಿಎಂ ಪುತ್ರ ಬಿ.ವೈ. ವಿಜಯೇಂದ್ರ ಯಾವುದೇ ಇಲಾಖೆಯಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ. ಕಾಂಗ್ರೆಸ್ ನವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮಲು ಆರೋಪಿಸಿದ್ದಾರೆ.
ನಗರದಲ್ಲಿಂದು ಮಾತನಾಡಿದ ಅವರು, ನನ್ನ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿಲ್ಲ. ಈಗ ಅಧಿವೇಶನ ಆರಂಭ ಅಗುತ್ತಿದೆ. ಮುಖ್ಯಮಂತ್ರಿ ರಾಜ್ಯದ ಜನತೆ ಕಲ್ಯಾಣಕ್ಕಾಗಿ ಕೆಲ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ. ಅಧಿವೇಶನ ಮುಗಿದ ಬಳಿಕ ಕೆಲ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ನೇಮಕ ಪ್ರಕ್ರಿಯೆ ನಡೆಯಲಿದೆ ಎಂದರು.
ಬೀದರ್ ನ ಶಾಹೀನ್ ಶಾಲೆಯ ವಾರ್ಷಿಕೋತ್ಸವದಲ್ಲಿ ನಡೆದ ಘಟನೆ ಬಗ್ಗೆ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಜಾರಿಗೆ ತಂದ ಕಾನೂನಿನ ಬಗ್ಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಎಂದ ಅವರು, ಬಳ್ಳಾರಿ ಜಿಲ್ಲೆಯ ಮರಿಯಮ್ಮಹಳ್ಳಿ ಕಾರು ದುರಂತ ಪ್ರಕರಣ ಈಗ ಮುಗಿದಿದೆ. ಕಾರಿನಲ್ಲಿ ಯಾರು ಇದ್ದರು ಎಂಬ ವರದಿ ಸಹ ಪೊಲೀಸರು ನೀಡಿದ್ದಾರೆ. ಹೀಗಾಗಿ ಪ್ರಕರಣ ಮುಕ್ತಾಯವಾಗಿದೆ ಎಂದು ತಿಳಿಸಿದರು.