ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಅಪಹರಣ: ಕಾವೂರು ಠಾಣೆಯಲ್ಲಿ ದೂರು ದಾಖಲು

Update: 2020-02-16 18:33 GMT

ಮಂಗಳೂರು, ಫೆ.16: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯ ಅಪಹರಣ ಪ್ರಕರಣವೊಂದು ನಗರದ ಕಾವೂರು ಬಳಿಯ ಕುಂಜತ್ತಬೈಲಿನ ಜಪ್ಪಿನಗುತ್ತು ಎಂಬಲ್ಲಿ ನಡೆದ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫೆ.14ರಂದು ಸಂಜೆ 16 ವರ್ಷದ ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ಬಂದ ಕೂಡಲೇ ಆಕೆಯ ಸಮವಸ್ತ್ರ ಬದಲಿಸಿದ ಪರಶುರಾಮ (26) ಎಂಬಾತನು ಆಕೆಯನ್ನು ಕರೆದುಕೊಂಡು ಹೋಗಿದ್ದಾನೆ ಎಂದು ಆರೋಪಿಸಲಾಗಿದೆ.

ಈಕೆಯನ್ನು ಕರೆದೊಯುತ್ತಿದ್ದಾಗ ಆಸುಪಾಸಿನ ಜನರು ಗಮನಿಸಿದ್ದು, ಈ ಹಿನ್ನೆಲೆಯಲ್ಲಿ ವಿವಿಧೆಡೆ ಹುಡುಕಾಟ ನಡೆಸಿದ ಬಳಿಕ ಎಲ್ಲಿಯೂ ಪತ್ತೆಯಾಗದ ಕಾರಣ ರವಿವಾರ ಬಾಲಕಿಯ ತಂದೆ ಕಾವೂರು ಪೊಲೀಸ್ ಠಾಣೆಯಲ್ಲಿ ಪುತ್ರಿ ನಾಪತ್ತೆಯಾಗಿದ್ದಾಳೆ ಹಾಗೂ ಆಕೆಯನ್ನು ಅಪಹರಿಸಲಾಗಿದೆ ಎಂದು ದೂರು ನೀಡಿದ್ದಾರೆ.

ಅಪಹೃತ ವಿದ್ಯಾರ್ಥಿನಿಯ ಕುಟುಂಬ ಮತ್ತು ಅಪಹರಣ ಪ್ರಕರಣದ ಆರೋಪಿ ಪರಶುರಾಮ ಯಾನೆ ಪರಶು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಂಗಳೂರಿಗೆ ಕೂಲಿ ಕೆಲಸಕ್ಕಾಗಿ ಬಂದವರೆಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News