ಶಿವಮೊಗ್ಗ: ಅಡುಗೆ ಅನಿಲ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಶಿವಮೊಗ್ಗ, ಫೆ.20: ಗ್ಯಾಸ್ ಸಿಲಿಂಡರ್ ಹಾಗೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಮಹಾವೀರ ಸರ್ಕಲ್ ಬಳಿ ಗುರುವಾರ ಪ್ರತಿಭಟನೆ ನಡೆಸಿದರು.
ಯುಪಿಎ ನೇತೃತ್ವದ ಕೇಂದ್ರ ಸರ್ಕಾರ ಆಡಳಿತದಲ್ಲಿದ್ದಾಗ ಗ್ಯಾಸ್ ಸಿಲಿಂಡರ್ ಬೆಲೆ 400 ರೂ.ಗಳಿತ್ತು. ಆದರೆ ಕೇಂದ್ರ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ದಿನಬಳಕೆ ವಸ್ತುಗಳು ಸೇರಿದಂತೆ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್ ಹೀಗೆ ಪ್ರತಿಯೊಂದರ ದರ ಗಗನಕ್ಕೆರಿದ್ದರೂ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಹಾಗಾಗಿ ಕೂಡಲೇ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಿನ ಬಳಕೆ ವಸ್ತುಗಳ ಬೆಲೆಯನ್ನು ತಗ್ಗಿಸಿ ಜನ ಸಾಮಾನ್ಯರಿಗೆ ಅನೂಕೂಲ ಮಾಡಿಕೊಡದೇ ಹೋದರೆ ಮುಂದಿನ ದಿನಗಳಲ್ಲಿ ದೇಶಾದ್ಯಂತ ಉಗ್ರ ಪ್ರತಿಭಟನೆ ಮಾಡುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್, ವಿಶ್ವನಾಥ ಕಾಶಿ, ರಾಜಪ್ಪ, ನಾಗರಾಜ್ ಸೇರಿದಂತೆ ಹಲವರು ಭಾಗವಹಿಸಿದ್ದರು.