ಕಾವು : ಲಾರಿ - ಕಾರು ನಡುವೆ ಅಪಘಾತ; ಓರ್ವ ಮೃತ್ಯು

Update: 2020-02-23 15:51 GMT

ಪುತ್ತೂರು : ಲಾರಿ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿ, ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕಾವು ಎಂಬಲ್ಲಿ ರವಿವಾರ ಸಂಭವಿಸಿದೆ.

ಪುತ್ತೂರು ತಾಲೂಕಿನ ಕೊಡಿಪ್ಪಾಡಿ ನಿವಾಸಿ ನಾರಾಯಣ ಜೋಯಿಸ (64) ಮೃತರು ಎಂದು ಗುರುತಿಸಲಾಗಿದೆ. ಪೆರ್ಲಂಪಾಡಿ ಎಂಬಲ್ಲಿ ನಡೆದ ಕಾರ್ಯಕ್ರಮವೊಂದಕ್ಕೆ ನಾರಾಯಣ ಜೋಯಿಸ ಅವರು ತೆರಳುತ್ತಿದ್ದ ಸಂದರ್ಭ ಈ ಅವಘಡ ಸಂಭವಿಸಿದೆ.

ಕಾವು ಜಂಕ್ಷನ್‍ನಲ್ಲಿ ಸುಳ್ಯ ಕಡೆಯಿಂದ ಬರುತ್ತಿದ್ದ ಲಾರಿ ಇವರು ಪ್ರಯಾಣಿಸುತ್ತಿದ್ದ ಕಾರಿಗೆ ಮುಖಾಮುಖಿ ಢಿಕ್ಕಿಯಾಗಿತ್ತು. ಈ ಸಂದರ್ಭ ನಾರಾಯಣ ಜೋಯಿಸರು ಗಂಭೀರ ಗಾಯಗೊಂಡಿದ್ದರು. ಅವರ ಕಾರಿನ ಹಿಂದಿನಿಂದ ಬರುತ್ತಿದ್ದ ಅವರ ಸಂಬಂಧಿಕರು ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News