ರಾಜ್ಯ ಪೊಲೀಸ್ ವಶಕ್ಕೆ ಭೂಗತ ಪಾತಕಿ ರವಿ ಪೂಜಾರಿ
ಬೆಂಗಳೂರು, ಫೆ.24: ಕುಖ್ಯಾತ ಭೂಗತ ಪಾತಕಿ ರವಿ ಪೂಜಾರಿಯನ್ನು ಸೋಮವಾರ ಮುಂಜಾನೆ ಬೆಂಗಳೂರಿಗೆ ಕರೆತರಲಾಗಿದೆ.
ಎಡಿಜಿಪಿ ಅಮರ್ ಕುಮಾರ್ ಪಾಂಡೆ, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಪೊಲೀಸ್ ತಂಡವು ರವಿ ಪೂಜಾರಿಯನ್ನು ಸೆನೆಗಲ್ ನಿಂದ ಬೆಂಗಳೂರಿಗೆ ಕರೆ ತರುವಲ್ಲಿ ಸಫಲರಾಗಿದ್ದಾರೆ.
ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಿದ್ದ ರವಿಪೂಜಾರಿ 1990ರಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಹಲವಾರು ಪ್ರಕರಣಗಳು ಪೂಜಾರಿ ವಿರುದ್ದ ದಾಖಲಾಗಿವೆ. ಮಂಗಳೂರು ನಗರ, ಬರ್ಕೆ, ಉರ್ವ, ಕಾವೂರು, ಮುಲ್ಕಿ, ಮೂಡುಬಿದಿರೆ, ಕೊಣಾಜೆ ಸೇರಿದಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ 33ಕ್ಕೂ ಹೆಚ್ಚು ಪ್ರಕರಣಗಳು ಈತನ ಮೇಲಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಆಫ್ರಿಕಾದ ಸೆನೆಗಲ್ ನಲ್ಲಿ ಬಂಧಿತನಾಗಿದ್ದ ರವಿ ಪೂಜಾರಿಯನ್ನು ಭಾರತಕ್ಕೆ ಕರೆತರಲು ಸುಮಾರು ಒಂದು ವರ್ಷದಿಂದ ರಾಜ್ಯ ಪೊಲೀಸ್ ಇಲಾಖೆ ಹಾಗೂ ಕೇಂದ್ರದ ತನಿಖಾ ಸಂಸ್ಥೆಗಳು ನಿರಂತರ ಪ್ರಯತ್ನ ಮಾಡಿತ್ತು.
90ರ ದಶಕದಲ್ಲಿ ಭೂಗತ ಲೋಕದಲ್ಲಿ ದೊಡ್ಡಮಟ್ಟದಲ್ಲಿ ಹೆಸರು ಮಾಡಿದ್ದ ರವಿ ಪೂಜಾರಿ ದುಬೈನಿಂದ ಮುಂಬೈ, ಮಂಗಳೂರು ಮತ್ತು ಬೆಂಗಳೂರಿನ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದ. ರವಿ ಪೂಜಾರಿ ವಿರುದ್ಧ ಬೆಂಗಳೂರಿನಲ್ಲಿ 26, ಮಂಗಳೂರಿನಲ್ಲಿ 29 ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.
2019ರ ಜ.19ರಂದು ಸೆನೆಗಲ್ ನಲ್ಲಿ ರವಿ ಪೂಜಾರಿಯನ್ನು ಅಲ್ಲಿನ ಪೊಲೀಸರು ಬಂಧಿಸಿದ್ದರು.