ಪ್ರತಿಷ್ಠೆ ಬಿಟ್ಟು ಕೆಲಸ ಮಾಡದಿದ್ದರೆ ವಿವಿಗಳ ಅಸ್ತಿತ್ವಕ್ಕೆ ಧಕ್ಕೆ: ಡಿಸಿಎಂ ಅಶ್ವಥ್ ನಾರಾಯಣ

Update: 2020-02-24 17:21 GMT

ಕಲಬುರಗಿ, ಫೆ.24: ನಮ್ಮ ಶಿಕ್ಷಣ ವ್ಯವಸ್ಥೆ ವಿದ್ಯಾರ್ಥಿ ಹಾಗೂ ಸಮಾಜ ಕೇಂದ್ರಿತವಾಗಿರಬೇಕು. ಅವರನ್ನೆ ನಿರ್ಲಕ್ಷಿಸಿದರೆ ವಿಶ್ವವಿದ್ಯಾಲಯಗಳು ಅಸ್ತಿತ್ವ ಕಳೆದುಕೊಳ್ಳುತ್ತವೆ. ಜನ ಈಗ ಸರಕಾರಿ ವಿಶ್ವವಿದ್ಯಾಲಯಗಳನ್ನೆ ನೆಚ್ಚಿಕೊಂಡಿಲ್ಲ, ಪರ್ಯಾಯ ವ್ಯವಸ್ಥೆಗಳೂ ಇವೆ. ಈ ವಿಷಯವನ್ನು ಗಮನದಲ್ಲಿಟ್ಟುಕೊಂಡು ಒಳ್ಳೆಯ ಕೆಲಸ ಮಾಡಬೇಕು ಎಂದು ಉಪಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ ಎಚ್ಚರಿಸಿದ್ದಾರೆ.

ಸೋಮವಾರ ಗುಲ್ಬರ್ಗ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಕುಲಪತಿ, ಆಡಳಿತ ಮಂಡಳಿ, ಸಿಂಡಿಕೇಟ್ ಸದಸ್ಯರೊಂದಿಗೆ ಮಾತುಕತೆ ನಡೆಸಿದ ಅವರು, ಗುಲ್ಬರ್ಗ ವಿವಿ ಬಗ್ಗೆ ಜನ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅದಕ್ಕೆ ತಕ್ಕಂತೆ ಕಾರ್ಯ ನಿರ್ವಹಿಸಬೇಕು ಎಂದರು. ಈಗ ಆನ್‌ಲೈನ್ ಶಿಕ್ಷಣ ವ್ಯವಸ್ಥೆ ಇದ್ದು, ಗುಣಮಟ್ಟ ಕಾಯ್ದುಕೊಳ್ಳಲು ಈ ಸಂಸ್ಥೆಗಳು ಇತರ ಉದ್ಯಮಗಳ ಜತೆ ಸಹಯೋಗಕ್ಕೆ ಸಿದ್ಧವಾಗಿರುತ್ತವೆ. ಇಂತಹ ಪರಿಸ್ಥಿತಿಯಲ್ಲಿ ನಾವು ಎಲ್ಲರೂ ನಮ್ಮ ಬಳಿಯೆ ಬರಲಿ ಎಂದು ಪ್ರತಿಷ್ಠೆ ಮಾಡುವುದು ಸರಿಯಲ್ಲ. ಈ ರೀತಿಯ ದೊಡ್ಡಸ್ತಿಕೆಯಿಂದ ವಿವಿ ತನ್ನ ಅಸ್ತಿತ್ವವನ್ನೆ ಕಳೆದುಕೊಳ್ಳಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ನಮ್ಮ ಶಿಕ್ಷಣ ವ್ಯವಸ್ಥೆ ಪ್ರಸ್ತುತವಾಗಿರಬೇಕು. ಇಲ್ಲದಿದ್ದರೆ ವ್ಯವಸ್ಥೆಯಲ್ಲಿ ಉಳಿಯುವುದೇ ಕಷ್ಟ. ಈ ನಿಟ್ಟಿನಲ್ಲಿ ಸುಧಾರಣೆಗೆ ಶ್ರಮಿಸೋಣ. ವಿಶ್ವವಿದ್ಯಾಲಯಗಳು ಆನ್‌ಲೈನ್ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಕಾಲೇಜುಗಳಿಗೆ ಕನಿಷ್ಠ ಮಾನದಂಡ ರೂಪಿಸಬೇಕು ಮತ್ತು ಖಾಲಿ ಹುದ್ದೆಗಳ ಬಗ್ಗೆ ರಾಜ್ಯ ಪರೀಕ್ಷಾ ಪ್ರಾಧಿಕಾರಕ್ಕೆ ಮಾಹಿತಿ ನೀಡುವ ಕೆಲಸ ಮಾಡಬೇಕು. ಎಲ್ಲ ವಿಷಯಗಳಲ್ಲಿ ಉತ್ತರದಾಯಿತ್ವ ಬಹಳ ಮುಖ್ಯ. ಬೇಜವಾಬ್ದಾರಿಯನ್ನು ಜನ ಸಹಿಸುವುದಿಲ್ಲ ಎಂದು ಅವರು ಹೇಳಿದರು.

ನಮ್ಮ ಆರ್ಥಿಕತೆ ನಿಂತಿರುವುದೇ ಜ್ಞಾನದ ಮೇಲೆ. ಸಾಮಾಜಿಕ, ಆರ್ಥಿಕ ಮುಂತಾದ ಎಲ್ಲ ಸಮಸ್ಯೆಗಳಿಗೆ ಜ್ಞಾನವೆ ಪರಿಹಾರ. ಶಿಕ್ಷಣ ವ್ಯವಸ್ಥೆಯ ಸುಧಾರಣೆ ಕಾರ್ಯ ಇಲ್ಲಿಂದಲೆ ಆಗಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರಕಾರ ಇದಕ್ಕೆ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಇದನ್ನು ಬಳಸಿಕೊಂಡು ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಕೆಲಸ ಆಗಬೇಕು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಸಂಬಳ ಮತ್ತು ಸ್ಥಾನಮಾನವೇ ಹೆಚ್ಚಲ್ಲ. ಕೊಟ್ಟ ಸ್ಥಾನಮಾನಕ್ಕೆ ಚ್ಯುತಿ ಬರದಂತೆ ನಡೆದುಕೊಳ್ಳಬೇಕು. ಜವಾಬ್ದಾರಿ ಅರಿತು ಎಲ್ಲರೂ ಒಟ್ಟಿಗೆ ಕೆಲಸ ಮಾಡೋಣ. ಈ ಕುರಿತು ವಿಶ್ವವಿದ್ಯಾಲಯದ ಸಲಹೆ ಸೂಚನೆಗಳನ್ನು ಕೇಳಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಆದರೆ, ಅಭಿವೃದ್ಧಿ ಕಾರ್ಯಕ್ಕೆ ನೆಪ ಹೇಳಬಾರದು ಎಂದು ಅವರು ಹೇಳಿದರು.

ಶೀಘ್ರದಲ್ಲೇ ಕುಲಪತಿ ನೇಮಕ: ಗುಲ್ಬರ್ಗ ವಿವಿಯ ಪ್ರಭಾರಿ ಕುಲಪತಿಯಾಗಿ ದೇವಿದಾಸ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ವಿವಿಯ ಕುಲಪತಿಯ ನೇಮಕ ತ್ವರಿತವಾಗಿ ಆಗಬೇಕಿದೆ. ಈ ಸಂಬಂಧ ಆದಷ್ಟು ಬೇಗ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಶ್ವಥ್ ನಾರಾಯಣ ತಿಳಿಸಿದರು.

ಕಲಬುರಗಿಯಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ: ಈ ಭಾಗದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕಾದರೆ ಶಿಕ್ಷಣದ ವ್ಯವಸ್ಥೆಯಲ್ಲಿ ಗುಣಮಟ್ಟ ಸುಧಾರಣೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಶಿಕ್ಷಕರು, ಸಮಾಜ, ರಾಜಕಾರಣಿಗಳು ಎಲ್ಲರೂ ಕೈ ಜೋಡಿಸಿ ಒಟ್ಟಿಗೆ ಕೆಲಸ ಮಾಡಬೇಕು ಎಂದು ಅವರು ಹೇಳಿದರು. ವಿವಿ ಮಾಡುವ ಎಲ್ಲ ಉತ್ತಮ ಕೆಲಸಗಳಿಗೆ ಸರಕಾರದ ನೆರವು ಇರುತ್ತದೆ. ಕಲಬುರಗಿಯಲ್ಲಿ ಮಾಹಿತಿ ತಂತ್ರಜ್ಞಾನ ಕೇಂದ್ರ ಸ್ಥಾಪಿಸಲು ನಮ್ಮ ಸರಕಾರ ಸಿದ್ಧವಾಗಿದ್ದು, ಸ್ಟಾರ್ಟ್ ಅಪ್‌ಗಳ ಸ್ಥಾಪನೆ, ಅಭಿವೃದ್ಧಿಗೂ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಶ್ವಥ್ ನಾರಾಯಣ ಭರವಸೆ ನೀಡಿದರು.

ಸಭೆಯಲ್ಲಿ ಲೋಕಸಭೆ ಸದಸ್ಯ ಉಮೇಶ್ ಜಾಧವ್, ಶಾಸಕರಾದ ಬಸವರಾಜ್ ಮತ್ತಿಮೂಡ್, ಡಾ.ಅವಿನಾಶ್ ಜಾಧವ್, ದತ್ತಾತ್ರೇಯ ಪಾಟೀಲ ರೇವೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News