ಮುಂದಿನ ವರ್ಷ 10 ಲಕ್ಷ ಮನೆಗಳ ನಿರ್ಮಾಣ ಗುರಿ: ಸಚಿವ ವಿ.ಸೋಮಣ್ಣ

Update: 2020-02-25 18:42 GMT

ಬಳ್ಳಾರಿ,ಫೆ.25: ರಾಜ್ಯದ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ರಹಿತರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ರಾಜೀವ್‌ಗಾಂಧಿ ವಸತಿ ನಿಗಮದಿಂದ ಮುಂದಿನ ವರ್ಷದಲ್ಲಿ 10 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಮಂಗಳವಾರ ನಗರದ ಹೊರವಲಯದ ಮುಂಡರಗಿ ಹತ್ತಿರದ ರಾಜೀವ್‌ಗಾಂಧಿ ವಸತಿ ನಿಗಮದಿಂದ ಎನ್‌ಎಂಡಿಸಿ ಮಹಾತ್ಮಗಾಂಧಿ ವಸತಿ ಯೋಜನೆಯಡಿ 338 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 5616 ಮನೆಗಳ ಕಾಮಗಾರಿ ಪರಿಶೀಲನೆ ಮಾಡಿದ ನಂತರ ಅವರು ಮಾತನಾಡಿದರು.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 5 ಲಕ್ಷ ಮನೆ, ಕೊಳಚೆ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 1.20 ಲಕ್ಷ ಮನೆ, ರಾಜೀವ್‌ಗಾಂಧಿ ವಸತಿ ನಿಗಮದಿಂದ ಬೆಂಗಳೂರಿನಲ್ಲಿ 1 ಲಕ್ಷ ಮತ್ತು ಬಳ್ಳಾರಿ, ಬೆಳಗಾವಿ, ಬಾಗಲಕೋಟೆ, ಗದಗ, ಧಾರವಾಡ ಮೊದಲಾದ ನಗರಗಳಲ್ಲಿ 1.5 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಸೋಮಣ್ಣ ಮಾಹಿತಿ ನೀಡಿದರು.

ಮನೆಗಳನ್ನು ಪಡೆಯುವ ಕೆಲ ಫಲಾನುಭವಿಗಳು ಅರ್ಹರಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ ಫಲಾನುಭವಿಗಳ ಪಡಿತರ ಚೀಟಿ, ಆಧಾರ್‌ಕಾರ್ಡ್ ಲಿಂಕ್ ಮಾಡಿ ನಕಲಿ ಫಲಾನುಭವಿಗಳ ಪತ್ತೆ ಕಾರ್ಯಕ್ಕೆ ತಹಶೀಲ್ದಾರ್ ಮತ್ತು ತಾಲೂಕು ಮತ್ತು ಗ್ರಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರಧಾನಮಂತ್ರಿ ಆಶಯದಂತೆ ಪ್ರತಿಯೊಬ್ಬ ಬಡವರಿಗೆ ಸೂರು ಕಲ್ಪಿಸಲು ಉದ್ದೇಶಿಸಲಾಗಿದೆ. ಮನೆಗಳ ನಿರ್ಮಾಣ ಗುಣಮಟ್ಟ ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. 5616 ಮನೆಗಳನ್ನು ಮುಂದಿನ ವರ್ಷದ ಮಾರ್ಚ್ ಅಂತ್ಯದೊಳಗೆ ಜನರಿಗೆ ಒದಗಿಸಲಾಗುವುದು ಎಂದು ಸೋಮಣ್ಣ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮಾತನಾಡಿ, ಬಳ್ಳಾರಿಯಲ್ಲಿ ನಿರ್ಮಿಸಲಾಗುತ್ತಿರುವ ಮನೆಗಳು ಕ್ಯೂರಿಂಗ್ ಕಾಂಪೌಂಡ್ ಪ್ರಕ್ರಿಯೆಯಿಂದ ಕೂಡಿದ್ದು, ಇವುಗಳಿಗೆ ನೀರು ಹಾಕಿ ಕ್ಯೂರಿಂಗ್ ಮಾಡಬೇಕಿಲ್ಲ. ಇವು 100 ವರ್ಷ ಬಳಕೆಗೆ ಬರಲಿದೆ ಎಂದರು. ಈ ಪ್ರದೇಶಲ್ಲಿ ಶಾಲೆ, ಆಸ್ಪತ್ರೆ, ಅಂಗನವಾಡಿ ಕೇಂದ್ರ, ವಾಣಿಜ್ಯ ಮಳಿಗೆ, ಕ್ರೀಡಾಂಗಣ, ಕುಡಿಯುವ ನೀರು, ಬೀದಿ ದೀಪ, ಉದ್ಯಾನವನ, ಒಳಚರಂಡಿ ಎಲ್ಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ಸಂಸದ ವೈ.ದೇವೇಂದ್ರಪ್ಪ, ರಾಜೀವ್‌ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾದ್ ಮನೋಹರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News