ತನ್ನ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿಗಳಲ್ಲಿ ಬಿಎಸ್‌ವೈ ವಿಶೇಷ ಮನವಿ

Update: 2020-02-26 14:29 GMT

ಬೆಂಗಳೂರು, ಫೆ. 26: ‘ನಾಳಿನ ನನ್ನ ಹುಟ್ಟುಹಬ್ಬದ ಸಂದರ್ಭದಲ್ಲಿ ಯಾರೂ ಫಲಪುಷ್ಪ, ಪೇಟ, ಶಾಲು, ಹಾರ, ತುರಾಯಿ, ಸಿಹಿತಿಂಡಿ ಹಾಗೂ ನೆನಪಿನ ಕಾಣಿಕೆಗಳನ್ನು ತರಬಾರದೆಂದು ವಿನಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ನಾಡಿನ ಸಮಸ್ತ ಜನತೆ, ಸಹೋದ್ಯೋಗಿಗಳು, ಸ್ನೇಹಿತರು ಹಾಗೂ ಬಂಧುಗಳಲ್ಲಿ ವಿನಯಪೂರ್ವಕ ಮನವಿ. ಎಲ್ಲರ ಹಾರೈಕೆ, ಹರಕೆ ಹಾಗೂ ಆಶೀರ್ವಾದಗಳಿಂದಲೇ ನಿಮ್ಮೆಲ್ಲರ ಸೇವೆ ಮಾಡುವ ಸ್ಥಾನದ ಸೌಭಾಗ್ಯವನ್ನು ಪಡೆದಿದ್ದೇನೆ ಎಂದು ಸ್ಮರಿಸಿದ್ದಾರೆ.

ದುಂದು ವೆಚ್ಚ ಬೇಡ: ನನ್ನ ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ, ವಿನೀತನಾಗಿದ್ದೇನೆ ಎಂದಿರುವ ಅವರು, ಪಟಾಕಿ ಸಿಡಿಸುವುದಾಗಲಿ ಇನ್ನಿತರ ದುಂದುವೆಚ್ಚ ಮಾಡಬಾರದು ಎಂದು ಬಿ.ಎಸ್. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಅಭಿಮಾನಿಗಳ ಶುಭಹಾರೈಕೆಗಿಂತ ದೊಡ್ಡ ಉಡುಗೊರೆ ಯಾವುದೂ ಇಲ್ಲ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಯಾರೂ ತಮ್ಮ ಹುಟ್ಟುಹಬ್ಬದ ಆಚರಣೆ ನಿಮಿತ್ತ ಯಾರೂ ಯಾವುದೇ ಕಾರಣಕ್ಕೂ ದುಂದುವೆಚ್ಚಕ್ಕೆ ಮುಂದಾಗಬಾರದು ಎಂದು ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News