ಹೆಚ್ಚು ಅಂಕ ಪಡೆಯುವ 10 ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್ಸೈಟ್ನಲ್ಲಿ ಪ್ರಕಟ: ಸಚಿವ ಸುರೇಶ್ ಕುಮಾರ್
ಮಡಿಕೇರಿ ಫೆ.29 : ‘ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿಕಸನ ಸಂಸ್ಥೆ ವತಿಯಿಂದ ನಾಪೋಕ್ಲುವಿನ ಕೊಡವ ಸಮಾಜದಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳೊಂದಿಗೆ ಸಚಿವರು ಶನಿವಾರ ಸಂವಾದ ನಡೆಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಎಸ್ಎಸ್ಎಲ್ಸಿ ಪರೀಕ್ಷೆ ಎದುರಿಸುವುದು ಹೇಗೆ? ಹೆಚ್ಚಿನ ಅಂಕ ಪಡೆಯುವುದು, ಓದಿನ ಕಡೆ ಗಮನ ನೀಡುವುದು ಮತ್ತಿತರ ಬಗ್ಗೆ ಸಚಿವರು ಹಲವು ಸಲಹೆ ನೀಡಿದರು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಓದಿನ ಕಡೆ ಗಮನ ಹರಿಸುವುದು, ಭಯವಿದ್ದಲ್ಲಿ ಓದಿರುವುದು ಸಹ ಮರೆತು ಹೋಗುತ್ತದೆ. ಭಯ ಒಂದು ರೀತಿ ಶತ್ರು ಇದ್ದಂತೆ, ಆದ್ದರಿಂದ ಭಯವನ್ನು ಮನಸ್ಸಿನಿಂದ ತೆಗೆದುಹಾಕಿ ಎಂದು ಸಚಿವರು ಸಲಹೆ ಮಾಡಿದರು.
ಎಸ್ಎಸ್ಎಲ್ಸಿ ಪರೀಕ್ಷೆ ಜೀವನದ ಕೊನೆಯ ಹಂತವಲ್ಲ. ಜೀವನದಲ್ಲಿ ಹಲವು ಪರೀಕ್ಷೆಗಳನ್ನು ನಿರಂತರವಾಗಿ ಎದುರಿಸಬೇಕಾಗುತ್ತದೆ. ಅದರಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಒಂದು ಪರೀಕ್ಷೆಯಾಗಿದೆ. ಆದ್ದರಿಂದ ಓದಿನ ಕಡೆ ಹೆಚ್ಚಿನ ಗಮನ ಹರಿಸುವಂತಾಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹೇಳಿದರು.
ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ಶತ್ರುವಲ್ಲ. ಬದಲಾಗಿ ಭಯವೇ ಮೊದಲ ಶತ್ರುವಾಗಿದೆ. ಆದ್ದರಿಂದ ಭಯಕ್ಕೆ ಗುಡ್ಬೈ ಹೇಳಬೇಕು. ವರ್ಷಪೂರ್ತಿ ಆಯಾಯ ದಿನದ ಪಾಠವನ್ನು ಅಂದೇ ಅಧ್ಯಯನ ಮಾಡಿದ್ದಲ್ಲಿ ಭಯ ಬೀಳುವ ಅಗತ್ಯವಿಲ್ಲ ಎಂದು ಸುರೇಶ್ ಕುಮಾರ್ ಅವರು ತಿಳಿಸಿದರು.
ಎಸ್ಎಸ್ಎಲ್ಸಿ ಪರೀಕ್ಷೆಗೆ ಇನ್ನೂ ಇಪ್ಪತ್ತೇಳು ದಿನವಿದ್ದು, ಮೊಬೈಲ್ ಮತ್ತು ಟಿವಿ ನೋಡುವುದರಿಂದ ದೂರವಿರಬೇಕು ಎಂದು ಸಚಿವರು ಹೇಳಿದರು.
ಮಕ್ಕಳಿಗೆ ಭಯ ಬೀಳಿಸುವವರು ಪೋಷಕರು ಎಂದರೆ ತಪ್ಪಾಗಲಾರದು. ಮಕ್ಕಳಿಗೆ ಒತ್ತಡ ಹೇರುವುದನ್ನು ಕಡಿಮೆ ಮಾಡಬೇಕು. ಮನೆಯಲ್ಲಿ ಪೋಷಕರು ಟಿವಿ ನೋಡುವುದನ್ನು ಮೊದಲು ಬಿಡಬೇಕು. ಪರೀಕ್ಷೆ ಒಂದು ರೀತಿಯಲ್ಲಿ ಹಬ್ಬದ ರೀತಿಯಲ್ಲಿ ಕಾಣಬೇಕು. ಪರೀಕ್ಷಾ ಸಮಯದಲ್ಲಿ ಆರೋಗ್ಯದ ಕಡೆಯೂ ಸಹ ಹೆಚ್ಚಿನ ಗಮನಹರಿಸಬೇಕಿದೆ ಎಂದು ಸಚಿವರು ತಿಳಿಸಿದರು.
ಪರೀಕ್ಷೆ ಬರೆಯಲು ಸಮಯ ಸಾಕಾಗುವುದಿಲ್ಲ ಎಂಬ ದೃಷ್ಟಿಯಿಂದ ಈ ಬಾರಿ ಪರೀಕ್ಷಾ ಸಮಯವನ್ನು ಅರ್ಧ ಗಂಟೆ ಹೆಚ್ಚಿಸಲಾಗಿದೆ ಎಂದರು.
ಪರೀಕ್ಷಾ ಕೊಠಡಿಗೆ ತೆರಳಿದ ಸಂದರ್ಭದಲ್ಲಿ ಪ್ರಶಾಂತವಾಗಿರಬೇಕು. ಪ್ರಶ್ನೆ ಪತ್ರಿಕೆಯನ್ನು ಪೂರ್ಣವಾಗಿ ಓದಬೇಕು. ಎರಡನೇ ಬಾರಿ ಓದಿ, ಉತ್ತರ ಗೊತ್ತಿರುವ ಪ್ರಶ್ನೆಗೆ ಮೊದಲು ಉತ್ತರಿಸಬೇಕು ಎಂದು ಸಚಿವರು ಸಲಹೆ ಮಾಡಿದರು.
ರಾಜ್ಯದ ಕಟ್ಟಕಡೆಯ ಮಕ್ಕಳು ಸಹ ಶಿಕ್ಷಣ ಪಡೆಯಬೇಕು. ಆ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತದೆ. ಶಿಕ್ಷಣ ಸಚಿವರಾದ ನಂತರ ರಾಜ್ಯದ 300 ರಿಂದ 400 ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಅವರು ತಿಳಿಸಿದರು.
ವಿದ್ಯಾರ್ಥಿಗಳೊಂದಿಗೆ ರಸಪ್ರಶ್ನೆ, ಸಂವಾದ ಕಾರ್ಯಕ್ರಮ ಏರ್ಪಡಿಸುವುದರಿಂದ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚುತ್ತದೆ. ಇದರಿಂದ ಪರೀಕ್ಷೆ ಬರೆಯಲು ಇನ್ನಷ್ಟು ಸಹಕಾರಿಯಾಗಲಿದೆ. ವಿದ್ಯಾರ್ಥಿಗಳು ಪಠ್ಯ ಪುಸ್ತಕವನ್ನು ಓದುವುದರಿಂದ ಶೇಕಡಾವಾರು ಫಲಿತಾಂಶ ಪಡೆಯಬಹುದಾಗಿದೆ. ಎಂದು ಸುರೇಶ್ ಕುಮಾರ್ ಅವರು ನುಡಿದರು.
ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ಹತ್ತು ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗುವುದು ಎಂದು ಸುರೇಶ್ ಕುಮಾರ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ಈ ಉತ್ತರ ಪತ್ರಿಕೆ ಪ್ರಕಟಿಸುವುದರಿಂದ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೇಗೆ ಉತ್ತರಿಸಬೇಕು ಎಂಬ ಬಗ್ಗೆ ಮಾಹಿತಿ ದೊರೆಯಲಿದೆ ಎಂದರು.
ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯು ಜಿಲ್ಲಾಧಿಕಾರಿ ಅವರ ನಿಯಂತ್ರಣದಲ್ಲಿ ನಡೆಯಲಿದ್ದು, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧಿಸಿದಂತೆ ತಲೆಕೆಡಿಸಿಕೊಳ್ಳದೆ ವಿಶ್ವಾಸದಿಂದ ಓದಿ ಪರೀಕ್ಷೆ ಬರೆಯಬೇಕು ಎಂದು ಅವರು ತಿಳಿಸಿದರು.
ವಿದ್ಯಾರ್ಥಿ ಶಾಲಾ ಶಿಕ್ಷಕರನ್ನು ವಿವಿಧ ತರಬೇತಿಗೆ ನಿಯೋಜಿಸಿದ್ದಲ್ಲಿ ವಿದ್ಯಾರ್ಥಿಗಳ ವಿದ್ಯಾರ್ಜನೆಗೆ ತೊಂದರೆಯಾಗಲಿದೆ ಎಂದು ಸಚಿವರ ಗಮನ ಸೆಳೆದರು.
ಮುಂದಿನ ವರ್ಷದಿಂದ ಶಿಕ್ಷಕರನ್ನು ತರಬೇತಿಗೆ ನಿಯೋಜಿಸುವುದನ್ನು ಕಡಿಮೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಮತ್ತೊಬ್ಬ ವಿದ್ಯಾರ್ಥಿನಿ ಪರೀಕ್ಷೆ ಸಂಬಂಧಿಸಿದಂತೆ 8ನೇ ತರಗತಿಯಿಂದಲೇ ಅಗತ್ಯ ಜಾಗೃತಿ ಮೂಡಿಸಬೇಕು. ತರಬೇತಿ, ಮಾರ್ಗದರ್ಶನ ಮಾಡುವಂತಾಗಬೇಕು ಎಂದು ಅವರು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು 7 ನೇ ತರಗತಿಯಿಂದಲೇ ಪಬ್ಲಿಕ್ ಪರೀಕ್ಷೆಯಲ್ಲಿ ‘ಸಾಮಾನ್ಯ ಮೌಲ್ಯ ಅಂಕ ಪರೀಕ್ಷೆ’ ನಡೆಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು. ಇದರಿಂದ 8ನೇ ತರಗತಿಯಿಂದ ಸಹಾಯವಾಗುತ್ತದೆ ಎಂದು ಸಚಿವರು ಹೇಳಿದರು.
ಮತ್ತೊಬ್ಬ ವಿದ್ಯಾರ್ಥಿನಿ ಶಾಲೆಗಳಲ್ಲಿ ಎಲ್ಲಾ ಮಕ್ಕಳು ಒಂದೇ ಎಂದು ಹೇಳುತ್ತಾರೆ. ಆದರೆ ಜಾತಿ ಪ್ರಮಾಣ ಪತ್ರ ಕೇಳುತ್ತಾರೆ. ಇದು ಸರಿಯೇ ಎಂದು ಪ್ರಶ್ನಿಸಿದರು. ಸಮಾಜದಲ್ಲಿ ಇನ್ನೂ ಬಡತನದಲ್ಲಿರುವವರಿಗೆ ಸರ್ಕಾರಿ ಸೌಲಭ್ಯಗಳನ್ನು ತಲುಪಿಸಲು ಜಾತಿ ಪ್ರಮಾಣ ಪತ್ರವನ್ನು ಪಡೆಯಲಾಗುತ್ತದೆ ಎಂದು ಸಚಿವರು ನುಡಿದರು.
ಮತ್ತೊಬ್ಬ ವಿದ್ಯಾರ್ಥಿನಿ ಸರ್ಕಾರಿ ಶಾಲೆಯಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿ ಆರಂಭಿಸಬೇಕು ಎಂದು ಮನವಿ ಮಾಡಿದರು. ಸರ್ಕಾರಿ ಶಾಲೆಯಲ್ಲಿಯೂ ಸಹ ಇಂಗ್ಲೀಷ್ ಭಾಷೆಯನ್ನು ಒಂದು ಭಾಷೆಯಾಗಿ ಕಲಿಸಲಾಗುತ್ತದೆ ಎಂದು ಸಚಿವರು ವಿವರಿಸಿದರು.
ಸಭೆಯ ಆರಂಭದಲ್ಲಿ ಎಷ್ಟು ಮಂದಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬಗ್ಗೆ ಭಯ ಇದೆ ಎಂದು ಸಚಿವರು ಪ್ರಶ್ನಿಸಿದರು. ಮತ್ತೊಬ್ಬ ವಿದ್ಯಾರ್ಥಿ ಪಠ್ಯ ಪುಸ್ತಕ ಹೊರತುಪಡಿಸಿ ಬೇರೆ ಪ್ರಶ್ನೆಗಳು ಬರುತ್ತವೆ ಎಂದರು. ಪಠ್ಯ ಪುಸ್ತಕದಲ್ಲಿನ ವಿಷಯವನ್ನೇ ಪ್ರಶ್ನೆ ಕೇಳಲಾಗುತ್ತದೆ. ಯಾವುದೇ ತರಹದ ಗೊಂದಲವಿರುವುದಿಲ್ಲ ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವ್ಯಾಸಂಗಕ್ಕೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಬಹು ಮಾದರಿ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂದು ಸಚಿವರು ತಿಳಿಸಿದರು.
ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಅವರು ಮಾತನಾಡಿ ನಾಪೋಕ್ಲು ಸರ್ಕಾರಿ ಶಾಲೆಯಲ್ಲಿ ಓದಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಆದರೆ ಇತ್ತೀಚೆಗೆ ಈ ಭಾಗದಲ್ಲಿ ಫಲಿತಾಂಶ ಕಡಿಮೆಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಪಿ.ಎಸ್.ಮಚ್ಚಾಡೋ ಅವರು ಮಾತನಾಡಿ ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಮತ್ತು ಧೈರ್ಯ ತುಂಬುವ ನಿಟ್ಟಿನಲ್ಲಿ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಅವರು ಹೇಳಿದರು.
ಮಡಿಕೇರಿ ಪ್ರೆಸ್ಕ್ಲಬ್ ಅಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರು ಮಾತನಾಡಿ ಶಿಕ್ಷಣ ಸಚಿವರು ಬೆಂಗಳೂರಿನ ರಾಜಾಜಿನಗರ ಕ್ಷೇತ್ರದಲ್ಲಿ ಆರಂಭಿಸಿ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸುತ್ತಿದ್ದಾರೆ ಎಂದು ಅವರು ಹೇಳಿದರು.
ವಿಕಸನ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಮತ್ತು ಪ್ರೇರಣೆ ನೀಡುವ ನಿಟ್ಟಿನಲ್ಲಿ ಅಂತರರಾಷ್ಟ್ರೀಯ ಖ್ಯಾತ ಕ್ರೀಡಾಪಟು ಅರ್ಜುನ್ ದೇವಯ್ಯ ಅವರಿಂದ ಮಾಹಿತಿ ನೀಡಲಾಗಿದೆ ಎಂದರು.
ಮನಸ್ಸು ಮಾಡಿದ್ದಲ್ಲಿ ಏನನ್ನಾದರೂ ಸಾಧಿಸಬಹುದು. ಆ ನಿಟ್ಟಿನಲ್ಲಿ ಯಾರೂ ಸಹ ಅನುತ್ತೀರ್ಣರಾಗಬಾರದು. ಓದಿನ ಕಡೆ ಗಮನಹರಿಸಬೇಕು. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದರೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಿ.ವಿ.ಸ್ನೇಹ, ವಿಕಸನ ಸಂಸ್ಥೆಯ ಅಧ್ಯಕ್ಷರಾದ ಚೆಯ್ಯಂಡ ಸತ್ಯ, ಕೂಡಿಗೆ ಡಯಟ್ ಸಂಸ್ಥೆಯ ಪ್ರಾಂಶುಪಾಲರಾದ ಶ್ರೀಧರನ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಚ್.ಕೆ.ಪಾಂಡು, ಅಕ್ಷರ ದಾಸೋಹ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ವಿವಿಧ ಶಾಲೆಯ ವಿದ್ಯಾರ್ಥಿಗಳು ಇತರರು ಇದ್ದರು.
ವಿಕಸನ ಸಂಸ್ಥೆಯ ಸದಸ್ಯರಾದ ಕಿಶೋರ್ ರೈ ನಿರೂಪಿಸಿದರು. ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷರಾದ ಮನುಮುತ್ತಪ್ಪ ಸ್ವಾಗತಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್.ಗಾಯತ್ರಿ ವಂದಿಸಿದರು. ಫೋಟೋ :: ನಾಪೋಕ್ಲು ಸಂವಾದ