ಗದ್ದಲ, ಧರಣಿ ನಡುವೆ 8 ವಿಧೇಯಕ ಮಂಡನೆ
ಬೆಂಗಳೂರು, ಮಾ.2: ಹಿರಿಯ ಹೋರಾಟಗಾರ ದೊರೆಸ್ವಾಮಿ ವಿರುದ್ಧದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವಹೇಳನಕಾರಿ ಹೇಳಿಕೆ ವಿಚಾರದಲ್ಲಿ ನಡೆಯುತ್ತಿದ್ದ ಧರಣಿ, ಗದ್ದಲ ನಡುವೆಯೇ ಎಂಟು ಮಸೂದೆಗಳನ್ನು ಸೋಮವಾರ ವಿಧಾನಸಭೆಯಲ್ಲಿ ಮಂಡಿಸಲಾಯಿತು.
ವಿಧಾನಸಭಾಧ್ಯಕ್ಷ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಗದ್ದಲದ ನಡುವೆ ವಿಧೇಯಕಗಳ ಮಂಡನೆಗೆ ಅನುಮತಿ ನೀಡಿದ್ದು, ಮುಖ್ಯಮಂತ್ರಿ ಸೇರಿದಂತೆ ಸಂಪುಟ ಸಚಿವರು ಗದ್ದಲದ ಮಧ್ಯೆಯೇ ಎಂಟು ವಿಧೇಯಕಗಳನ್ನು ಮಂಡಿಸಿದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ತಿದ್ದುಪಡಿ ವಿಧೇಯಕ, 2020ನೇ ಸಾಲಿನ ಕರ್ನಾಟಕ ಪೌರ ಸೇವೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಬಹಿರಂಗ ಸ್ಥಳಗಳ ವಿರೂಪಗೊಳಿಸುವುದನ್ನು ಪ್ರತಿಬಂಧಿಸುವ ತಿದ್ದುಪಡಿ ವಿಧೇಯಕ, ಕರ್ನಾಟಕ ರೇಸ್ ಕೋರ್ಸ್ಗಳಿಗೆ ಪರವಾನಗಿ ನೀಡುವ ತಿದ್ದುಪಡಿ ವಿಧೇಯಕಗಳಿಗೂ ಸದನದಲ್ಲಿ ಅನುಮೋದನೆ ಪಡೆದುಕೊಂಡರು. ಉಪಮುಖ್ಯಮಂತ್ರಿ ಡಾ. ಸಿ.ಎಸ್. ಅಶ್ವತ್ಥ ನಾರಾಯಣ್ ಅವರು, ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಮಂಡನೆ, ಉನ್ನತ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವೇತನ ಮತ್ತು ನಿವೃತ್ತಿ ವೇತನಗಳ ತಿದ್ದುಪಡಿ ವಿಧೇಯಕಗಳನ್ನು ಮಂಡಿಸಿದರು.
ಕಂದಾಯ ಸಚಿವ ಆರ್. ಅಶೋಕ್ ಅವರು, ಕರ್ನಾಟಕ ಭೂ ಸುಧಾರಣೆಗಳ ತಿದ್ದುಪಡಿ ವಿಧೇಯಕ, ಕರ್ನಾಟಕ ಸರ್ವಜ್ಞ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ವಿಧೇಯಕ ಮಂಡಿಸಿ ಅನುಮೋದನೆ ಪಡೆದುಕೊಂಡರು.
ಈ ವೇಳೆ ಆಕ್ಷೇಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾವುದೇ ಚರ್ಚೆ ಇಲ್ಲ ಮಂಡನೆ ಸರಿಯಲ್ಲ.ಇನ್ನೂ ನೀವು ಬಜೆಟ್ ಅನ್ನು ಮಂಡಿಸಿ, ಅನುಮೋದನೆ ಪಡೆದುಕೊಳ್ಳಿ ಎಂದು ಟೀಕಿಸಿದರು.