ದೇಶದ್ರೋಹ ಪ್ರಕರಣ: ಬೀದರ್ ನ ಶಾಹೀನ್ ಶಾಲೆಯ ಮುಖ್ಯಸ್ಥರಿಗೆ ನಿರೀಕ್ಷಣಾ ಜಾಮೀನು

Update: 2020-03-03 14:08 GMT
ಡಾ. ಅಬ್ದುಲ್ ಖದೀರ್

ಬೀದರ್, ಮಾ.3: ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ದಾಖಲಾಗಿದ್ದ ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಸೆಷನ್ಸ್ ಕೋರ್ಟ್ ಶಾಹೀನ್ ಶಾಲೆಯ ಮುಖ್ಯಸ್ಥ ಡಾ.ಅಬ್ದುಲ್ ಖದೀರ್ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಈ ಕುರಿತು ನಿರೀಕ್ಷಣಾ ಜಾಮೀನು ಕೋರಿ ಡಾ. ಅಬ್ದುಲ್ ಖದೀರ್ ಅವರು ಬೀದರ್ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಲಯವು ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಮಹಿಳೆಯರನ್ನು ಬಂಧಿಸಲಾಗಿತ್ತು. ಬಳಿಕ ಅವರು ಜಾಮೀನಿನ ಮೂಲಕ ಜೈಲಿನಿಂದ ಹೊರಬಂದಿದ್ದಾರೆ.

ಪ್ರಕರಣವೇನು: ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧ ದೇಶವ್ಯಾಪಿ ಹೋರಾಟಗಳು ಮತ್ತು ಪ್ರತಿಭಟನೆಗಳು ನಡೆಯುತ್ತಿರುವಂತೆಯೇ ಜ.21ರಂದು ಬೀದರ್‌ನ ಶಾಹೀನ್ ಶಾಲೆಯಲ್ಲಿ ಮಕ್ಕಳಿಂದ ನಾಟಕ ಪ್ರದರ್ಶನ ನಡೆದಿತ್ತು. ಅದರಲ್ಲಿ ಸಿಎಎ ಮತ್ತು ಎನ್‌ಆರ್‌ಸಿ ವಿರುದ್ಧದ ಹೇಳಿಕೆಗಳನ್ನು ಮಕ್ಕಳಿಂದ ಹೇಳಿಸಲಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ ನಾಟಕದ ವಿಡಿಯೋ ವೈರಲ್ ಆಗಿತ್ತು. ಐದು ದಿನಗಳ ನಂತರ ಎಬಿವಿಪಿ ಕಾರ್ಯಕರ್ತ ನೀಲೇಶ್ ಎಂಬವರು ಪೊಲೀಸ್ ಠಾಣೆಯಲ್ಲಿ ದೇಶದ್ರೋಹದ ದೂರು ದಾಖಲಿಸಿದ್ದರು.

ಈ ದೂರಿನ ಮೇರೆಗೆ ಕಾರ್ಯಾಚರಣೆ ಮಾಡಿದ ಪೊಲೀಸರು ಶಾಹೀನ್ ಶಾಲೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ಬಾಲಕಿಯ ತಾಯಿ ನಜುಮುನ್ನೀಸಾ ಎಂಬಿಬ್ಬರನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಡಾ. ಅಬ್ದುಲ್ ಖದೀರ್ ಅವರು ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ನಾಳೆಯಿಂದ (ಮಾರ್ಚ್ 4) ದ್ವಿತೀಯ ಪಿ.ಯು.ಸಿ. ಪರೀಕ್ಷೆ ಪ್ರಾರಂಭವಾಗಲಿದೆ. ಬೀದರ್ ಜಿಲ್ಲೆಯಲ್ಲಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸುತ್ತೇನೆ. ಈ ಬಾರಿ ಬೀದರ್ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ತರಲಿ ಎಂದು ಆಶಿಸುತ್ತೇನೆ

- ಡಾ. ಅಬ್ದುಲ್ ಖದೀರ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News