ಕಲಬುರಗಿಯಲ್ಲಿ ಒಂದು ವಾರ ಶಾಲಾ-ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ
ಕಲಬುರಗಿ, ಮಾ.13: ಸೌದಿ ಅರೇಬಿಯಾ ಪ್ರವಾಸ ಮುಗಿಸಿಕೊಂಡು ಹಿಂದಿರುಗಿದ ಮತ್ತು ವಯೋ ಸಹಜವಾಗಿ ಶ್ವಾಸಕೋಶ, ಕೆಮ್ಮು, ಜ್ವರದಿಂದ ಬಳಲುತ್ತಿದ್ದ ಮುಹಮ್ಮದ್ ಹುಸೇನ್ ಸಿದ್ದೀಕಿ(76) ಮಾ.10ರಂದು ಕೊರೋನ ವೈರಸ್ನಿಂದ ಮೃತಪಟ್ಟಿದ್ದು ದೃಢಪಟ್ಟಿದ್ದು, ಕಲಬುರ್ಗಿ ಜಿಲ್ಲೆಯಾದ್ಯಂತ ರೋಗ ಹರಡದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಹೇಳಿದರು.
ಶುಕ್ರವಾರ ನಗರದಲ್ಲಿ ತುರ್ತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೃತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ತಪಾಸಣೆಗೆ ಒಳಪಡಿಸಿದ್ದು 31 ಜನರನ್ನು ‘ಹೈ ರಿಸ್ಕ್’ ಮತ್ತು 15 ಜನರನ್ನು ‘ಲೋ ರಿಸ್ಕ್’ ಎಂದು ಪರಿಗಣಿಸಿ ಇಎಸ್ಐ ಆಸ್ಪತ್ರೆಯಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ನಲ್ಲಿ ಚಿಕಿತ್ಸೆಗೆ ಕ್ರಮ ವಹಿಸಲಾಗಿದೆ ಎಂದರು.
ಕೆಮ್ಮು, ಜ್ವರ ಅತಿಯಾಗಿ ಕಾಣಿಸಿದ್ದರಿಂದ ಮಾ.9ರಂದು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆನಂತರ ಅದೇ ದಿನದಂದು ರಾತ್ರಿ ವೈದ್ಯಕೀಯ ಸಲಹೆ ಕಡೆಗಣಿಸಿ ಕುಟುಂಬಸ್ಥರು ರೋಗಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು ಹೈದರಾಬಾದ್ನ ‘ಕೇರ್ ಹಾಸ್ಪಿಟಲ್’ ಎಂಬ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದರು ಎಂದು ಶರತ್ ತಿಳಿಸಿದರು.
ಕೆಮ್ಮು, ಜ್ವರದಿಂದ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾದ ಕೂಡಲೆ ಇದನ್ನು ಶಂಕಿತ ಕೊರೋನ ವೈರಸ್ ಪ್ರಕರಣ ಎಂದು ಭಾವಿಸಿ, ಮಾ.9ರಂದೆ ವ್ಯಕ್ತಿಯ ಗಂಟಲು ದ್ರವ್ಯ ಸ್ಯಾಂಪಲ್ ಪಡೆದು ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿತ್ತು ಎಂದು ಅವರು ಹೇಳಿದರು.
ಇಎಸ್ಐ ಆಸ್ಪತ್ರೆಯಲ್ಲಿ ಇದಕ್ಕಾಗಿ 200 ಹಾಸಿಗೆಗಳ ಕ್ವಾರಂಟಯನ್ ವಾರ್ಡ್, 50 ಹಾಸಿಗೆಗಳ ಐಸೋಲೇಷನ್ ವಾರ್ಡ್ ಸ್ಥಾಪಿಸಿ ವೈದ್ಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಗಡಿಗಳಲ್ಲಿ ತಪಾಸಣಾ ಕೇಂದ್ರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದಲ್ಲದೆ, ಎಲ್ಲ ತಾಲೂಕುಗಳ ಹಂತದಲ್ಲಿಯೂ ಐಸೋಲೇಷನ್ ವಾರ್ಡ್ ಸ್ಥಾಪಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕೊರೋನ ಭೀತಿಯಿಂದ ಶುಕ್ರವಾರ ನಡೆಯಬೇಕಿದ್ದ ಪ್ರಸಿದ್ಧ ಶ್ರೀ ಶರಣಬಸವೇಶ್ವರ ಜಾತ್ರೆಯನ್ನು ರದ್ದುಪಡಿಸಲಾಗಿದ್ದು, ಇದೇ ಮಾದರಿಯನ್ನು ಎಲ್ಲ ಧಾರ್ಮಿಕ ಸಂಸ್ಥೆಗಳು ಜನಸಂದಣಿ ಸೇರುವುದನ್ನು ತಡೆಗಟ್ಟಬೇಕು ಎಂದು ಶರತ್ ಹೇಳಿದರು.
ಕಲಬುರಗಿ ನಗರದ ಶಾಲಾ-ಕಾಲೇಜು(ಪರೀಕ್ಷೆಗಳನ್ನು ಹೊರತುಪಡಿಸಿ) ಮತ್ತು ಸಿನಿಮಾ ಚಿತ್ರಮಂದಿರಗಳನ್ನು ಒಂದು ವಾರಗಳ ಕಾಲ ಮುಚ್ಚಲು ಆದೇಶಿಸಲಾಗಿದೆ. ಸಾರ್ವಜನಿಕ ಸ್ಥಳದಲ್ಲಿ ಜನ ಸೇರುವುದನ್ನು ನಿರ್ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.
ಜಿಮ್ಸ್ ಆಸ್ಪತ್ರೆಯಲ್ಲಿ ಕೊರೋನ ವೈರಸ್ ಕುರಿತು ಪರೀಕ್ಷಿಸಲು ಲ್ಯಾಬ್ ತೆರೆಯಲು ಈಗಾಗಲೆ ರಾಜ್ಯ ಸರಕಾರಕ್ಕೆ ಮನವಿ ಮಾಡಲಾಗಿದೆ. ಇದಕ್ಕೆ ಅಗತ್ಯವಿರುವ ಕಿಟ್ಸ್ ಕೂಡಲೆ ಸರಬರಾಜಿಗೆ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಕೇಂದ್ರ ಆರೋಗ್ಯ ಸಚಿವರ ಜೊತೆ ಮಾತನಾಡಿದ್ದಾರೆ ಎಂದು ಶರತ್ ಹೇಳಿದರು.
ಖಾಸಗಿ ಆಸ್ಪತ್ರೆಯಲ್ಲಿ ಕೆಮ್ಮು, ನೆಗಡಿ, ಜ್ವರ ಉಸಿರಾಟ ತೊಂದರೆಯಿಂದ ಯಾರೆ ದಾಖಲಾದರೂ ಅದರ ಬಗ್ಗೆ ಪ್ರತಿ ದಿನ ಮೂರು ಬಾರಿ ಜಿಲ್ಲಾಡಳಿತಕ್ಕೆ ಮತ್ತು ಆರೋಗ್ಯ ಇಲಾಖೆಗೆ ಖಾಸಗಿ ಆಸ್ಪತ್ರೆಗಳು ಮಾಹಿತಿ ನೀಡಬೇಕೆಂದು ಸೂಚಿಸಲಾಗಿದೆ. ಅಲ್ಲದೇ, ಸರಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಅವರು ತಿಳಿಸಿದರು.