×
Ad

ಆರೋಗ್ಯವಂತರು ಮಾಸ್ಕ್ ಧರಿಸುವುದು ಬೇಡ : : ಜಿಲ್ಲಾಧಿಕಾರಿ ಸಿಂಧೂ ಸ್ಪಷ್ಟನೆ

Update: 2020-03-16 22:23 IST

ಮಂಗಳೂರು, ಮಾ.16: ವಿಶ್ವವನ್ನೇ ಸಂಕಷ್ಟಕ್ಕೆ ಈಡು ಮಾಡಿದ ಕೊರೋನವೈರಸ್ ಭೀತಿಯ ಹಿನ್ನಲೆಯಲ್ಲಿ ಸಾರ್ವಜನಿಕರು ಮಾಸ್ಕ್‌ಗಳನ್ನು ಧರಿಸುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ಆದರೆ ಆರೋಗ್ಯವಂತ ವ್ಯಕ್ತಿಗಳು ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸ್ಪಷ್ಟಪಡಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ‘ಕೊರೋನ ಸೋಂಕು ಹಿನ್ನೆಲೆ ಜಿಲ್ಲೆಯ ಕೈಗಾರಿಕೋದ್ಯಮಿಗಳ, ಉದ್ಯಮ ಸಂಸ್ಥೆಗಳ ಸಭೆಯಲ್ಲಿ ಅವರು ಮಾತನಾಡಿದರು.

ಮಾಸ್ಕ್ ಧರಿಸುವುದು ಎಲ್ಲರಿಗೂ ಕಡ್ಡಾಯವಲ್ಲ. ಅನಾರೋಗ್ಯ ಪೀಡಿತರು, ರೋಗ ಲಕ್ಷಣ ಇರುವವರು ಮಾಸ್ಕ್ ಧರಿಸಬೇಕು. ಆದಾಗ್ಯೂ, ಜಿಲ್ಲೆಯಲ್ಲಿ ಮಾಸ್ಕ್ ಸಂಗ್ರಹ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಔಷಧಿ ನಿಯಂತ್ರಣ ಇಲಾಖೆಯು ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಲಿದೆ. ಮಾಸ್ಕ್ ದರದ ಮೇಲೆ ನಿಗಾ ಇಡಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲೆಯ ಎಲ್ಲ ಕೈಗಾರಿಕಾ ಘಟಕಗಳು ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಕಾಯಿಲೆ ಸಾಂಕ್ರಾಮಿಕವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ದೇಶ ವಿದೇಶಗಳಲ್ಲಿ ಪ್ರವಾಸ ಕೈಗೊಂಡಿರುವವರ ಮೇಲೆ ವೈದ್ಯಕೀಯ ನಿಗಾ ಇಟ್ಟು ಅವರನ್ನು 28 ದಿನಗಳ ನಿಗಾ ಅವಧಿಯಲ್ಲಿ ಇಡಬೇಕು. ಅಲ್ಲದೇ ಅವರ ಕುಟುಂಬ ಸದಸ್ಯರು, ಅದರಲ್ಲೂ 60 ವರ್ಷ ಮೇಲ್ಪಟ್ಟವರ ಆರೋಗ್ಯದ ಮೇಲೆ ನಿಗಾ ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಕೊರೋನ ವ್ಯಾಪಿಸದಂತೆ ಎಲ್ಲ ರೀತಿಯ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ದಾಣ ಹಾಗೂ ನವ ಮಂಗಳೂರು ಬಂದರಿಗೆ ಆಗಮಿಸುವ ವಿದೇಶಿ ಯಾತ್ರಿಕರ ಮೇಲೆ ವೈದ್ಯಕೀಯ ನಿಗಾ ಇರಿಸಲಾಗಿದೆ. ಜಿಲ್ಲೆಯ ಬಹುತೇಕ ಆಸ್ಪತ್ರೆಗಳಲ್ಲಿ ಪ್ರತ್ಯೇಕ ‘ಐಸೊಲೇಷನ್ ವಾರ್ಡ್’ ಸಿದ್ಧಪಡಿಸಲಾಗಿದೆ. ಮಂಗಳೂರಿನ ಇಎಸ್‌ಐ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೋನ ನಿಯಂತ್ರಣಕ್ಕೆ ಬಳಸಿಕೊಳ್ಳಲಾಗುವುದು. ಇದೇ ರೀತಿ ಎನ್‌ಎಂಪಿಟಿ ಆಸ್ಪತ್ರೆಯಲ್ಲೂ ಅಗತ್ಯ ಸಿದ್ಧತೆ ಮಾಡಿ ಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಎಲ್ಲ ಕೈಗಾರಿಕಾ ಘಟಕಗಳು ತಮ್ಮ ಉದ್ಯೋಗಿಗಳ ಆರೋಗ್ಯದ ಮೇಲೆ ಗಮನ ಹರಿಸಬೇಕು. ಅನಾರೋಗ್ಯ ಪೀಡಿತರಿಗೆ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು. ಇದಕ್ಕಾಗಿ ಅವರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ತಾಕೀತು ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ನಗರಾಭಿವೃದ್ಧಿ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಕೈಗಾರಿಕಾ ಜಂಟಿ ನಿರ್ದೇಶಕ ಗೋಕುಲದಾಸ್ ನಾಯಕ್, ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.

ಕೈಗಾರಿಕೋದ್ಯಮಿಗಳು ದೇಶ ವಿದೇಶಗಳಿಗೆ ತಮ್ಮ ಪ್ರವಾಸವನ್ನು ಆದಷ್ಟು ನಿಯಂತ್ರಿಸಬೇಕು. ಅದೇ ರೀತಿ ವಿದೇಶಿ ವ್ಯಾವಹಾರಿಕ ಸಭೆಗಳನ್ನು ಮುಂದೂಡಬೇಕು.

- ಸಿಂಧೂ ಬಿ. ರೂಪೇಶ್, ದ.ಕ. ಜಿಲ್ಲಾಧಿಕಾರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News