'ಜನತಾ ಕರ್ಫ್ಯೂ'ಗೆ ಬೆಂಬಲ: ಮಾ.22ರಂದು ಬೆಂಗಳೂರಿನಲ್ಲಿ ಮೆಟ್ರೋ ಸಂಚಾರ ರದ್ದು

Update: 2020-03-20 16:38 GMT

ಬೆಂಗಳೂರು, ಮಾ.20: ಕೊರೋನ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ, ಪ್ರಧಾನಿ ಕರೆಯ ಮೇರೆಗೆ ಮಾ. 22ರಂದು ದೇಶದಾದ್ಯಂತ ಜನತಾ ಕರ್ಫ್ಯೂ ಹೇರಿರುವ ಕಾರಣ ಅಂದು ನಗರದಲ್ಲಿ ಮೆಟ್ರೊ ರೈಲು ಸಂಚಾರ ರದ್ದು ಮಾಡಲಾಗಿದೆ.

ಸೋಂಕು ಹರಡುವುದನ್ನು ತಡೆಯಲು ಅಂದು ಸಾರ್ವಜನಿಕರು ಮನೆಯಲ್ಲಿಯೇ ಉಳಿಯಬೇಕು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ ಟ್ವೀಟ್ ಮಾಡಿದೆ. ಮಾ.22 ರಂದು ಮಾತ್ರವಲ್ಲದೆ, ಉಳಿದ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ನಿಗಮದಿಂದ ತೆಗೆದುಕೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆಯೂ ಬಿಎಂಆರ್‌ಸಿಎಲ್ ಪ್ರಕಟಣೆ ಹೊರಡಿಸಿದೆ.

ಅನಗತ್ಯ ಪ್ರಯಾಣ ಬೇಡ: ತೀರಾ ಅಗತ್ಯವಿದ್ದಲ್ಲಿ ಮೆಟ್ರೊ ರೈಲು ಬಳಸಿ. ಅನಗತ್ಯ ಪ್ರಯಾಣ ಬೇಡ. ಈ ನಿಟ್ಟಿನಲ್ಲಿ ಸಂಚರಿಸುವ ರೈಲುಗಳ ಸಂಖ್ಯೆಯನ್ನೂ ಕಡಿಮೆ ಮಾಡಲಾಗಿದೆ. 60 ವರ್ಷ ಮೇಲ್ಪಟ್ಟವರು ಹಾಗೂ 10 ವರ್ಷ ವಯಸ್ಸಿನೊಳಗಿರುವವರಿಗೆ ಸೋಂಕು ಬೇಗ ಹರಡುವ ಕಾರಣ, ಮೆಟ್ರೊ ರೈಲಿನಲ್ಲಿ ಇವರ ಪ್ರಯಾಣಕ್ಕೆ ನಿರ್ಬಂಧ ವಿಧಿಸಲಾಗಿದೆ.

ಉಷ್ಣಾಂಶ ಪರೀಕ್ಷೆ: ಮೆಟ್ರೊ ನಿಲ್ದಾಣಗಳಲ್ಲಿ ಮುಂದೆ, ಪ್ರಯಾಣಿಕರ ದೇಹದ ಉಷ್ಣಾಂಶ ಪರೀಕ್ಷೆ (ಥರ್ಮಲ್ ಸ್ಕಾನಿಂಗ್) ಮಾಡಲಾಗುವುದು. ಯಾರಾದರೂ ಜ್ವರದಿಂದ ಬಳಲುತ್ತಿದ್ದರೆ ಅಥವಾ ಕೋವಿಡ್-19 ಲಕ್ಷಣ ಹೊಂದಿದ್ದರೆ ಅವರನ್ನು ವೈದ್ಯರ ಬಳಿ ಕಳಿಸಲಾಗುವುದು ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು.

ನಿಗದಿತ ಅಂತರವಿರಲಿ: ಮೆಟ್ರೊದಲ್ಲಿ ಪ್ರಯಾಣಿಸುವ ವೇಳೆ ಅಥವಾ ಭದ್ರತಾ ಸಿಬ್ಬಂದಿಯಿಂದ ತಪಾಸಣೆಗೆ ಒಳಗಾಗುವ ಸಂದರ್ಭದಲ್ಲಿ ಸಾರ್ವಜನಿಕರು ಕನಿಷ್ಠ 1 ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ನಿಗಮ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News