ಕೊರೋನ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು: ಡಿಸಿ ಜಗದೀಶ್
ಉಡುಪಿ, ಮಾ.20: ಕೊರೋನಾ ವೈರಸ್ ಮತ್ತು ಅದರ ನಿಯಂತ್ರಣ ಕ್ರಮಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮತ್ತು ಜಾಗೃತಿ ಕಾರ್ಯ ಕ್ರಮಗಳನ್ನು ಆಯೋಜಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ರೆಡ್ಕ್ರಾಸ್ ಉಡುಪಿ ಜಿಲ್ಲಾ ಘಟಕ ವತಿಯಿಂದ ಕೊರೋನಾ ವೈರಸ್ ಜಾಗೃತಿ ಅಭಿಯಾನದ ಪ್ರಯುಕ್ತ ಸಿದ್ದಪಡಿಸಿರುವ ಕರಪತ್ರ, ಮಾಸ್ಕ್ ಮತ್ತು ಸ್ಯಾನಿಟೈಸರ್ಗಳನ್ನು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಡುಗಡೆಗೊಳಿಸಿ ಅವರು ಮಾತನಾಡುತಿದ್ದರು.
ಜಿಲ್ಲೆಯಲ್ಲಿ 158 ಗ್ರಾಪಂಗಳಲ್ಲಿ ಕೊರೋನಾ ನಿಯಂತ್ರಣ ಕ್ರಮಗಳ ಕುರಿತ ಕರಪತ್ರಗಳನ್ನು ಮನೆ ಮನೆಗೆ ತಲುಪುವಂತೆ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳ ಬೇಕು. ಮಾಸ್ಕ್ ಮತ್ತು ಸ್ಯಾನಿಟೈಸರ್ಗಳನ್ನು ಎಲ್ಲಾ ಆರೋಗ್ಯ ಕೇಂದ್ರಗಳಿಗೆ ವಿತರಿಸಬೇಕು ಎಂದು ಅವರು ರೆಡ್ಕ್ರಾಸ್ ಸಂಸ್ಥೆಗೆ ಸೂಚಿಸಿದರು.
ರೆಡ್ಕ್ರಾಸ್ ಸಂಸ್ಥೆಯ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್ ಕ್ರಾಸ್ ಸಂಸ್ಥೆಯು ದೇಶದ 29 ರಾಜ್ಯ ಮತ್ತು ಎಲ್ಲಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸಾವಿರಾರು ಯುವಕರಿಗೆ, ಕೊರೋನಾ ಜನಜಾಗೃತಿ ಮೂಡಿಸುವ ಕುರಿತು ತರಬೇತಿ ನೀಡಿದ್ದು, ಈ ಪಿಡುಗನ್ನು ಬೇರು ಸಮೇತ ತೊಲಗಿಸಲು ಎಲ್ಲಾ ನಾಗರಿಕರು ಸಹಕರಿಸಬೇಕು ಮತ್ತು ಮಾ.22ರ ಜನತಾ ಕರ್ಪ್ಯೂನಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕು ಎಂದರು.
ಉಪ ಸಭಾಪತಿ ಡಾ.ಅಶೋಕ್ ಕುಮಾರ್ ವೈ.ಜಿ., ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ, ಡಾ.ಉಮೇಶ್ ಪ್ರಭು ಮತ್ತು ಕಾರ್ಯಕಾರಿ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.