ಕೃತಕ ಅಭಾವ ಸೃಷ್ಠಿಸಿದಲ್ಲಿ ಕಠಿಣ ಕ್ರಮ: ಜಿಲ್ಲಾಧಿಕಾರಿ
ಉಡುಪಿ, ಮಾ.26: ಜಿಲ್ಲೆಯಾದ್ಯಂತ ತರಕಾರಿ, ದಿನಸಿ, ಮೀನು, ಮಾಂಸ, ಹಣ್ಣು ಹಂಪಲು, ಮೆಡಿಕಲ್ ಶಾಪ್, ಹಾಲು ಮುಂತಾದ ಜೀವನಾವಶ್ಯಕ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳ ಮಾಲಕರು ತಮ್ಮ ಅಂಗಡಿಗಳ ಎದುರಿನಲ್ಲಿ ಕನಿಷ್ಠ 6 ಅಡಿಗಳ ಅಂತರದಲ್ಲಿ ಕಡ್ಡಾಯವಾಗಿ ಪೇಂಟ್ ಅಥವಾ ಇನ್ನಿತರ ಬಣ್ಣದ ವಸ್ತುಗಳಿಂದ ಗುರುತನ್ನು ಹಾಕಬೇಕು. ಹಾಗೂ ಸಾರ್ವಜನಿಕರು /ಗ್ರಾಹಕರು ಈ ಗುರುತುಗಳ ಸರತಿಸಾಲಿನಲ್ಲಿ ನಿಂತು ವಸ್ತುಗಳನ್ನು ಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ನಿರ್ದೇಶನಗಳನ್ನು ಪಾಲಿಸದ ಅಂಗಡಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಸಿದ್ದಾರೆ.
ಅಲ್ಲದೇ ಯಾವುದೇ ಅಗತ್ಯ ವಸ್ತುಗಳನ್ನು ನಿಗದಿತ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಬಾರದು. ಕೃತಕ ಅಬಾವ ಸೃಷ್ಠಿಸಿ, ಹೆಚ್ಚಿನ ದರಕ್ಕೆ ಮಾರಾಟ ಮಾಡಲು, ಅನಾವಶ್ಯಕವಾಗಿ ಸಂಗ್ರಹಾಲಯಗಳಲ್ಲಿ ಇಂತಹ ವಸ್ತುಗಳನ್ನು ದಾಸ್ತಾನು ಮಾಡಕೂಡದು. ಇಂತಹ ಪ್ರಕರಣಗಳು ಕಂಡು ಬಂದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಈ ಎಲ್ಲಾ ನಿರ್ದೇಶನಗಳು ಪಾಲನೆಯಾಗುವಂತೆ ಸಂಬಂದಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಆಯುಕ್ತರು/ಮುಖ್ಯಾಧಿಕಾರಿಗಳು, ಗ್ರಾಮ ಪಂಚಾಯತ್ ಪಿಡಿಓಗಳು ಕ್ರಮವಹಿಸಬೇಕು. ತಪ್ಪಿದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜದೀಶ್ ಸೂಚಿಸಿದ್ದಾರೆ.