ಲಾಕ್‍ಡೌನ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಬಿಎಸ್‌ವೈಗೆ ಪ್ರಧಾನಿ ಮೋದಿ ಸೂಚನೆ

Update: 2020-04-02 11:57 GMT
ಫೈಲ್ ಚಿತ್ರ

ಬೆಂಗಳೂರು, ಎ. 2: ಕೊರೋನ ವೈರಸ್ ಸೋಂಕು ತಡೆಗಟ್ಟುವ ದೃಷ್ಟಿಯಿಂದ ಘೋಷಿಸಿರುವ ಲಾಕ್‍ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಪೂರೈಕೆಗೆ ಅಡಚಣೆಯಾಗದಂತೆ ಕ್ರಮ ಕೈಗೊಳ್ಳಬೇಕು. ಜತೆಗೆ ಲಾಕ್ ಡೌನ್ ಅನ್ನು ಕಟ್ಟನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಉಲ್ಲಂಘಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚನೆ ನೀಡಿದ್ದಾರೆ.

ಗುರುವಾರ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಕೊರೋನ ವೈರಸ್ ಸೋಂಕು ನಿಯಂತ್ರಣ ಸಂಬಂಧದ ವಿಡಿಯೋ ಸಂವಾದದಲ್ಲಿ ಮೇಲ್ಕಂಡ ಸೂಚನೆ ನೀಡಿದ ಅವರು, ವಲಸೆ ಕಾರ್ಮಿಕರನ್ನು ಪ್ರತ್ಯೇಕವಾಗಿರಿಸಿ ಅವರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಪ್ರಧಾನಿ ಮೋದಿಯವರು ನಿರ್ದೇಶನ ನೀಡಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು.

ಲಾಕ್‍ಡೌನ್ ಅನುಷ್ಟಾನವನ್ನು ಪರಿಣಾಮಕಾರಿಯಾಗಿ ಮಾಡಿರುವು ರಾಜ್ಯಗಳನ್ನು ಶ್ಲಾಘಿಸಿದ ಅವರು, ಕರ್ನಾಟಕ ರಾಜ್ಯದಲ್ಲಿ ಈವರೆಗೂ ಕೊರೋನ ವೈರಸ್ ಸೋಂಕಿತರ 124 ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ ಕರ್ನಾಟಕ 9ನೆ ಸ್ಥಾನದಲ್ಲಿದೆ. ಕೊರೋನಾ ಸೋಂಕಿನಿಂದಾಗಿ ಜಾಗತಿಕ ಮಟ್ಟದಲ್ಲಿಯೇ ಪರಿಸ್ಥಿತಿ ಬಹಳ ಚಿಂತಾಜನಕವಾಗಿದೆ. ಕೊರೋನ ವೈರಸ್ ಸೋಂಕನ್ನು ಎಲ್ಲರೂ ಒಟ್ಟಾಗಿ ನಿರ್ವಹಿಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಅವರು ಪ್ರತಿಪಾದಿಸಿದ್ದಾರೆಂದು ಯಡಿಯೂರಪ್ಪ ತಿಳಿಸಿದರು.

ಔಷಧಿ, ಆಹಾರ ಮತ್ತಿತರ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಆಗಬಾರದು. ರಾಜ್ಯಗಳು ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಪ್ರತ್ಯೇಕ ಆಸ್ಪತ್ರೆಗಳನ್ನು ಅಧಿಸೂಚಿಸಿ, ಜನರಿಗೆ ಈ ಕುರಿತು ಮಾಹಿತಿ ನೀಡಬೇಕು. ಮುಂದಿನ ದಿನಗಳಲ್ಲಿ ವೈದ್ಯರ ಕೊರತೆ ಉಂಟಾಗದಂತೆ ಸಾಧ್ಯ ಇರುವವರೆಲ್ಲ ಆಯುಷ್ ವೈದ್ಯರ ಸೇವೆಯನ್ನು ಪಡೆದುಕೊಳ್ಳುವಂತೆ ಹಾಗೂ ಇದಕ್ಕಾಗಿ ಅವರಿಗೆ ಆನ್‍ಲೈನ್ ತರಬೇತಿ ನೀಡುವಂತೆ ಪ್ರಧಾನಿ ಮೋದಿ ಅವರು ಸಲಹೆ ನೀಡಿದರು ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.

ನಮ್ಮ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಜನಪ್ರಿಯಗೊಳಿಸಿ, ಜನರು ಅವುಗಳನ್ನು ಪಾಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ ಪ್ರಧಾನಿ ಮೋದಿ, ಪಿಎಂ ಗರೀಬ್ ಕಲ್ಯಾಣ್ ಪ್ಯಾಕೇಜ್ ಧನ ಸಹಾಯದ ಮೊತ್ತವನ್ನು ಪಡೆಯಲು ಬ್ಯಾಂಕುಗಳಲ್ಲಿ ನೂಕು ನುಗ್ಗಲು ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.

ಕೃಷಿ ಚಟುವಟಿಕೆಗಳಿಗೆ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಲಾಗಿದೆ. ಆದರೆ, ರೈತರು ಕೊರೋನ ವೈರಸ್ ಸೋಂಕು ಹರಡದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದನ್ನು ಮರೆಯಬಾರದು. ಬೆಳೆ ಕಟಾವು ಸಂದರ್ಭದಲ್ಲಿ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಅವರು ಇದೇ ವೇಳೆ ಸೂಚನೆ ನೀಡಿದರು ಎಂದು ಯಡಿಯೂರಪ್ಪ ವಿವರ ನೀಡಿದರು.

ಕರ್ನಾಟಕವು ಪ್ರಧಾನಿ ಮಂತ್ರಿಯವರು ನೀಡಿದ ಬಹುತೇಕ ಸಲಹೆಗಳನ್ನು ಹಾಗೂ ಮಾರ್ಗಸೂಚಿಗಳನ್ನು ಈಗಾಗಲೇ ಕಾರ್ಯಾನುಷ್ಟಾನಗೊಳಿಸಿದೆ. ಲಾಕ್ ಡೌನ್ ನಂತರ ಕ್ರಮ ಕೈಗೊಳ್ಳಬೇಕಾದ ಮುನ್ನಚ್ಚರಿಕೆ ಕ್ರಮಗಳ ಕುರಿತು ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಅಲ್ಲದೆ, ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಯಡಿಯೂರಪ್ಪ ಕೋರಿದರು.

ವಿಡಿಯೋ ಸಂವಾದದಲ್ಲಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ ಬಿ.ಶ್ರೀರಾಮುಲು. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ಸೇರಿದಂತೆ ವಿವಿಧ ಇಲಾಖೆ ಮುಖ್ಯಸ್ಥರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News