ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ: ಯಡಿಯೂರಪ್ಪ ಮನವಿ
Update: 2020-04-02 17:15 GMT
ಬೆಂಗಳೂರು. ಎ.2: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹ ಹಾಗೂ ಸಮೀಕ್ಷೆ ನಡೆಸುವ ಮಹತ್ವದ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ತಮ್ಮ ಜೀವಕ್ಕಿರುವ ಅಪಾಯ ಲೆಕ್ಕಿಸದೆ ಅವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರಿಗೆ ಸೂಕ್ತ ಮಾಹಿತಿ ನೀಡಿ ಸಹಕರಿಸುವುದು ನಾಗರಿಕರ ಕರ್ತವ್ಯ. ಈ ಸೋಂಕು ತಡೆಗಟ್ಟಲು ಸಮುದಾಯದ ಸಹಕಾರ, ಸಹಭಾಗಿತ್ವ ಅತಿ ಮುಖ್ಯವಾದದ್ದು ಎಂದು ಅವರು ಹೇಳಿದ್ದಾರೆ.
ಆದುದರಿಂದ, ಸರಕಾರದ ಸೂಚನೆಗಳನ್ನು ಪಾಲಿಸಿ, ಜೊತೆಗೆ ತಳ ಹಂತದಲ್ಲಿ ಕಾರ್ಯ ನಿರ್ವಹಿಸುವ ಆರೋಗ್ಯ ಕಾರ್ಯಕರ್ತರೊಂದಿಗೆ ಸೌಜನ್ಯದಿಂದ ವರ್ತಿಸಿ. ಅವರು ನಿಮ್ಮೆಲ್ಲರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂಬುದನ್ನು ಮರೆಯದಿರಿ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.