ಕೆಪಿಎಸ್‍ಸಿ ಮೂಲಕ ಎಂಜಿನಿಯರ್ ಹುದ್ದೆಗಳ ನೇಮಕ: ಸರಕಾರದ ತೀರ್ಮಾನ ರದ್ದುಪಡಿಸಿದ ಕೆಎಟಿ

Update: 2020-04-07 12:48 GMT
Photo: kpsc.kar.nic.in

ಬೆಂಗಳೂರು, ಎ.7: ಕರ್ನಾಟಕ ಲೋಕಸೇವಾ ಆಯೋಗದ(ಕೆಪಿಎಸ್‍ಸಿ) ಮೂಲಕ 900 ಎಂಜಿನಿಯರ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಡೆಸುವ ಲೋಕೋಪಯೋಗಿ ಇಲಾಖೆಯ ತೀರ್ಮಾನವನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ(ಕೆಎಟಿ) ರದ್ದುಪಡಿಸಿದೆ.

ಲೋಕೋಪಯೋಗಿ ಇಲಾಖೆಯಲ್ಲಿ 870 ಎಂಜಿನಿಯರ್‍ಗಳ ನೇಮಕಾತಿಗಾಗಿ ಮೈತ್ರಿ ಸರಕಾರದ ಅವಧಿಯಲ್ಲಿ ಆರಂಭಿಸಿದ್ದ ಪ್ರಕ್ರಿಯೆಯನ್ನು ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ 2019 ಅ.31ರಂದು ರದ್ದುಪಡಿಸಿತ್ತು. ಈ ಹುದ್ದೆಗಳೂ ಸೇರಿ ಒಟ್ಟು 900 ಹುದ್ದೆಗಳ ನೇಮಕಾತಿಯನ್ನು ಕೆಪಿಎಸ್‍ಸಿ ಮೂಲಕ ನಡೆಸಲು ತೀರ್ಮಾನಿಸಿತ್ತು. ಇದನ್ನು ಪ್ರಶ್ನಿಸಿ ಮೂವರು ಅಭ್ಯರ್ಥಿಗಳ ಕೆಎಟಿ ಮೊರೆ ಹೋಗಿದ್ದರು.

ಕೆಪಿಎಸ್‍ಸಿ ಮೂಲಕ ನೇಮಕಾತಿ ಮಾಡಿಕೊಂಡರೆ ವಿಳಂಬವಾಗುತ್ತದೆ ಎಂಬ ನೆಪವೊಡ್ಡಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕ ಮಾಡಿಕೊಳ್ಳಲು ಈ ಹಿಂದಿನ ಸಮ್ಮಿಶ್ರ ಸರಕಾರ ನಿರ್ಧರಿಸಿತ್ತು.

ಈ ಸಲುವಾಗಿ ಲೋಕೋಪಯೋಗಿ ಇಲಾಖೆಯ ಸೇವಾ ನಿಯಮಗಳು-2019(ವಿಶೇಷ ನೇಮಕಾತಿ) ಸಿದ್ಧಪಡಿಸಿ, 570 ಸಹಾಯಕ ಎಂಜಿನಿಯರ್‍ಗಳು ಹಾಗೂ 300 ಕಿರಿಯ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಈ ವರ್ಷದ ಮಾರ್ಚ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು. ಇದಕ್ಕಾಗಿ ಇಲಾಖೆಯಲ್ಲಿ ವಿಶೇಷ ಆಯ್ಕೆ ಸಮಿತಿ ರಚಿಸಲಾಗಿತ್ತು. 

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜೂನ್‍ನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗಿತ್ತು. ಬಳಿಕ ಸಮ್ಮಿಶ್ರ ಸರಕಾರ ಪತನವಾಗಿತ್ತು. ಬಿಜೆಪಿ ಸರಕಾರವು ಫಲಿತಾಂಶ ಪ್ರಕಟಣೆಯನ್ನು ತಡೆಹಿಡಿದಿತ್ತು. ಫಲಿತಾಂಶದ ನಿರೀಕ್ಷೆಯಲ್ಲಿದ್ದ ಸಾವಿರಾರು ಅಭ್ಯರ್ಥಿಗಳು ಆತಂಕಕ್ಕೆ ಒಳಗಾಗಿದ್ದರು. ಬಳಿಕ, ಇಡೀ ನೇಮಕ ಪ್ರಕ್ರಿಯೆಯನ್ನೇ ರದ್ದುಪಡಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು.

ಸರಕಾರದ ತೀರ್ಮಾನಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಈ ಬಗ್ಗೆ ಕೆಎಟಿಯಲ್ಲಿ ಪ್ರಶ್ನೆ ಮಾಡುವಂತೆ ಅಭ್ಯರ್ಥಿಗಳಿಗೆ ಸೂಚಿಸಿತ್ತು. ಅಭ್ಯರ್ಥಿಗಳು ಕೆಎಟಿ ಮೆಟ್ಟಿಲೇರಿದ್ದರು. ಈ ನಡುವೆ, ಕೆಪಿಎಸ್‍ಸಿ ಮೂಲಕ ನೇಮಕ ಪ್ರಕ್ರಿಯೆಗೆ ಲೋಕೋಪಯೋಗಿ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿ, ಆಕ್ಷೇಪಗಳನ್ನು ಆಹ್ವಾನಿಸಿತ್ತು. 

350 ಮಂದಿ ಆಕ್ಷೇಪಣೆ ಸಲ್ಲಿಸಿದ್ದರು. ತಡೆಯಾಜ್ಞೆ ಇದ್ದಾಗಲೂ ಇಲಾಖೆ ಕರಡು ಅಧಿಸೂಚನೆ ಪ್ರಕಟಿಸಿದೆ ಎಂದು ಅಭ್ಯರ್ಥಿಗಳು ಕೆಎಟಿ ಗಮನಕ್ಕೆ ತಂದಿದ್ದರು. ಇದನ್ನು ಸಹ ಕೆಎಟಿ ರದ್ದುಪಡಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News