ಕೊರೋನ ನಿಯಂತ್ರಣಕ್ಕೆ ಸಾಮಾಜಿಕ ಅಂತರ, ನೈರ್ಮಲ್ಯ ಅಗತ್ಯ: ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ

Update: 2020-04-08 14:52 GMT

ಉಡುಪಿ, ಎ.8: ನೋವೆಲ್ ಕೊರೋನವನ್ನು ನಿಯಂತ್ರಿಸಲು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು ಮತ್ತು ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡಿ ಕೊಳ್ಳುವುದು ಅತ್ಯಂತ ಅಗತ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.

ಬುಧವಾರ ಅಜ್ಜರಕಾಡಿನಲ್ಲಿರುವ ಉಡುಪಿ ರೆಡ್‌ಕ್ರಾಸ್ ಭವನದ ಎದುರು, ಕಾರ್ಮಿಕ ಇಲಾಖೆ ಉಡುಪಿ ಹಾಗೂ ಭಾರತೀಯ ರೆಡ್‌ಕ್ರಾಸ್ ಘಟಕ ಉಡುಪಿ ಇವರವತಿಯಿಂದ ಕೊರೋನ ಕುರಿತು ಜಾಗೃತಿ ಮೂಡಿಸುವ ಸಂಚಾರಿ ವಾಹನಕ್ಕೆ ಚಾಲೆ ನೀಡಿ ಅವರು ಮಾತನಾಡುತಿದ್ದರು.

ಕೊರೋನ ಹರಡುವಿಕೆಯನ್ನು ನಿಯಂತ್ರಿಸುವಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ ಮತ್ತು ನೈರ್ಮಲ್ಯ ಕಾಪಾಡಿಕೊಳ್ಳುವ ವಿಧಾನಗಳು ಹೆಚ್ಚು ಪರಿಣಾಮಕಾರಿಯಾಗಿವೆ. ಆದರೆ ನಮ್ಮಲ್ಲಿ ಸಾಮಾಜಿಕ ಅಂತರ ಕಾಯ್ದು ಕೊಳ್ಳುವಲ್ಲಿ ಇನ್ನೂ ಹಿಂದಿದ್ದೇವೆ. ಸಾರ್ವಜನಿಕರು ಅನಗತ್ಯ ವಾಗಿ ಮನೆಯಿಂದ ಹೊರಗೆ ಬರದೆ, ಸರಕಾರದ ಅದೇಶಗಳನ್ನು ಪಾಲನೆ ಮಾಡುವ ಮೂಲಕ, ಕೊರೋನವನ್ನು ದೇಶದಿಂದ ನಿರ್ಮೂಲನೆ ಮಾಡುವಲ್ಲಿ ಅಗತ್ಯ ಸಹಕಾರ ನೀಡುವಂತೆ ಡಿಹೆಚ್‌ಓ ತಿಳಿಸಿದರು.

ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಮಾತನಾಡಿ, ವಿಶ್ವದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನ ಹರಡುವಿಕೆ ಪ್ರಮಾಣ ಕಡಿಮೆ ಇದೆ. ಜನರ ಸಹಕಾರದಿಂದ ಇದು ಸಾದ್ಯವಾಗಿದೆ. ಉಡುಪಿ ಜಿಲ್ಲೆಯಲ್ಲಿ 3 ಪ್ರಕರಣ ಮಾತ್ರ ಇದೆ ಎಂದು ಆಲಸ್ಯ ತೋರಬಾ ರದು. ಪಕ್ಕದ ಜಿಲ್ಲೆಗಳಲ್ಲಿ ಕೊರೋನ ಪ್ರಕರಣಗಳು ಅಧಿಕವಾಗಿದ್ದು, ಜಿಲ್ಲೆಯ ಜನತೆ ಸಾಮಾಜಿಕ ಅಂತರ ಮತ್ತು ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಮನವಿ ಮಾಡಿದರು.

ಜಿಲ್ಲಾ ಕಾರ್ಮಿಕ ಅಧಿಕಾರಿ ಬಾಲಕೃಷ್ಣ ಮಾತನಾಡಿ, ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯ 15,000 ಅಸಂಘಟಿತ ಕಾರ್ಮಿಕರಿಗೆ ಕೊರೋನ ನಿಯಂತ್ರಣ ಕುರಿತಂತೆ ಮುನ್ನೆಚ್ಚರಿಕಾ ಕ್ರಮವಾಗಿ ಮಾಸ್ಕ್‌ಗಳು, ಕೈ ತೊಳೆಯುವ ಸೋಪುಗಳು ಮತ್ತು ಕರಪತ್ರಗಳನ್ನು ಹಂಚುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಡುಪಿ ರೆಡ್‌ಕ್ರಾಸ್ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಉಪಸಭಾಪತಿ ವೈ.ಜಿ. ಅಶೋಕ್‌ಕುಮಾರ್, ಕಾರ್ಯದರ್ಶಿ ಬಾಲಕೃಷ್ಣ, ಕಾರ್ಮಿಕ ನಿರೀಕ್ಷಕ ಪ್ರವೀಣ್‌ಕುಮಾರ್, ಉಡುಪಿ ಜಿಲ್ಲೆಯ ಕೊರೋನಾ ಸೈನಿಕರು ಮತ್ತಿತರರು ಉಪಸ್ಥಿತರಿದ್ದರು. ಜಯರಾಮ ಆಚಾರ್ಯ ಸಾಲಿಗ್ರಾಮ ಸ್ವಾಗತಿಸಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News