ಸಾಮಾನ್ಯ ಶೀತ, ಜ್ವರ, ಕೆಮ್ಮಿಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೇ ಚಿಕಿತ್ಸೆ ನೀಡಲು ಸೂಚನೆ

Update: 2020-04-11 16:05 GMT

ಬೆಂಗಳೂರು, ಎ.11: ಸಾಮಾನ್ಯ ಶೀತ, ಜ್ವರ, ಕೆಮ್ಮು ಹಾಗೂ ಇತರೆ ತೊಂದರೆಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲೇ ಚಿಕಿತ್ಸೆ ನೀಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸೂಚನೆ ನೀಡಿದ್ದಾರೆ.

ರಾಜ್ಯದಾದ್ಯಂತ ಕೋವಿಡ್-19 ಹರಡುತ್ತಿರುವ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸಾಮಾನ್ಯ ಆರೋಗ್ಯ ಸಮಸ್ಯೆಗೆ ಸೂಕ್ತ ಚಿಕಿತ್ಸೆ ನೀಡದೆ ಮೇಲ್ದರ್ಜೆಯ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ. ಇದರಿಂದ ತಾಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಅನವಶ್ಯಕವಾಗಿ ಜನದಟ್ಟಣೆ ಉಂಟಾಗುತ್ತಿದೆ. ಗಂಭೀರ ಸ್ಥಿತಿಯಲ್ಲಿ ಇರುವವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿಲ್ಲ ಎಂದು ನಿರ್ದೇಶಕರು ಸುತ್ತೋಲೆಯಲ್ಲಿ ವಿಷಾದಿಸಿದ್ದಾರೆ.

ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಹೆಚ್ಚಿನ ಖ್ಯೆಯಲ್ಲಿ ರೋಗಿಗಳು ಮತ್ತು ರೋಗಿಗಳ ಸಹಾಯಕರು ಆಗಮಿಸುವುದರಿಂದ ವಿವಿಧ ರೀತಿಯ ತೊಂದರೆಗಳು ಎದುರಾಗುತ್ತಿವೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯಾದ್ಯಂತ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಜನಸಾಮಾನ್ಯರು ಅನಗತ್ಯ ತೊಂದರೆಗಳಿಗೆ ಒಳಗಾಗಬೇಕಾಗುತ್ತದೆ. ಆದ್ದರಿಂದ ಚಿಕಿತ್ಸೆಗಾಗಿ ಬರುವ ಎಲ್ಲಾ ರೋಗಿಗಳನ್ನು ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆಯನ್ನು ಕೆಳ ಹಂತದಲ್ಲಿಯೇ ನೀಡಬೇಕು. ಒಂದು ವೇಳೆ ಹೆಚ್ಚಿನ ಚಿಕಿತ್ಸೆಯ ಅವಶ್ಯವಿದ್ದಲ್ಲಿ ಹತ್ತಿರದ ಮೇಲ್ದರ್ಜೆಯ ಆಸ್ಪತ್ರೆಗೆ ಶಿಫಾರಸ್ಸು ಮಾಡುವಂತೆ ಸಲಹೆ ನೀಡಲಾಗಿದೆ. ಒಂದು ವೇಳೆ ಕೋವಿಡ್-19ರ ಲಕ್ಷಣಗಳು ಕಂಡು ಬಂದರೆ ತಪಾಸಣೆ ನಡೆಸಿ, ಕೂಡಲೇ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಬೇಕು. ಎಚ್ಚರಿಕೆ ಕ್ರಮಗಳೊಂದಿಗೆ ರೋಗಿಯನ್ನು ನಿರ್ದಿಷ್ಟ ಆಸ್ಪತ್ರೆಗೆ ರವಾನಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News