ಸಾರಿಗೆ ಇಲಾಖೆಯಿಂದ ರೈತರಿಗಾಗಿ ಸಹಾಯವಾಣಿ: ಡಿಸಿಎಂ ಲಕ್ಷ್ಮಣ ಸವದಿ

Update: 2020-04-13 11:48 GMT

ರಾಯಚೂರು, ಎ.13: ಸಾರಿಗೆ ಇಲಾಖೆಯಿಂದ ಕಂಟ್ರೋಲ್ ರೂಂ ತೆರೆಯಲಾಗಿದೆ. ದಿನದ 24 ಗಂಟೆಗಳ ಕಾಲ ಅದು ರೈತರು, ಸಾರ್ವಜನಿಕರಿಗಾಗಿ ಕಾರ್ಯನಿರ್ವಹಿಸಲಿದೆ. ಪ್ರತಿಯೊಬ್ಬರಿಗೂ ಅವಶ್ಯಕತೆಗೆ ಅನುಗುಣವಾಗಿ ವಾಹನಗಳ ಸೌಲಭ್ಯ ಒದಗಿಸಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷಣ ಸವದಿ ಹೇಳಿದ್ದಾರೆ.

ರಾಯಚೂರು ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ಮೇಲೆ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಲಕ್ಷಣ ಸವದಿ ಸಹಾಯವಾಣಿ ಸಂಖ್ಯೆ 080-22236698, 9449863214ಕ್ಕೆ ಅವಶ್ಯಕತೆ ಇರುವವರು ಕರೆ ಮಾಡಲು ತಿಳಿಸಿದರು. ಮುಖ್ಯಮಂತ್ರಿಗಳ ಆದೇಶದ ಹಿನ್ನೆಲೆ ನಾನು ಉಸ್ತುವಾರಿ ವಹಿಸಿಕೊಂಡು ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ್ದೇನೆ. ಕೊರೋನದ ಇಲ್ಲಿನ ವಸ್ತುಸ್ಥಿತಿ ಹಾಗೂ ಮುಂಜಾಗ್ರತೆ ಕ್ರಮಗಳ ಬಗ್ಗೆ ಚರ್ಚೆ ಮಾಡುತ್ತೇವೆ ಎಂದರು.

ಎ.14ಕ್ಕೆ ಮೊದಲ ಹಂತದ ಲಾಕ್‍ಡೌನ್ ಮುಗಿಯುತ್ತೆ. ಈ ಲಾಕ್‍ಡೌನ್ ಮುಗಿಯುತ್ತದೆಯೋ ಅಥವಾ ಇಲ್ಲವೊ ಎನ್ನುವ ಬಗ್ಗೆ ಚರ್ಚೆ ನಡೆಯುತ್ತಿದೆ. ಪ್ರಧಾನಿಗಳು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಮಾಡಿದ್ದಾರೆ. ಎಲ್ಲಾ ಮುಖ್ಯಮಂತ್ರಿಗಳು ಮುಂದುವರಿಸುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸೋಮವಾರ ಅಥವಾ ಮಂಗಳವಾರ ಪ್ರಧಾನಿಗಳು ಅದರ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಕೇಂದ್ರ ಸರಕಾರ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.

ಚೀನಾದಲ್ಲಿ ಹತೋಟಿಗೆ ಬಂದಿದ್ದ ಕೊರೋನ ಮತ್ತೆ ಪ್ರಾರಂಭವಾಗಿದೆ. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಪಾಸಿಟಿವ್ ಪ್ರಕರಣ ಇರಲಿಲ್ಲ. ಸದ್ಯ ಈಗ ಸಾಕಷ್ಟು ಜಿಲ್ಲೆಗಳಲ್ಲಿ ಪಾಸಿಟಿವ್ ಕೇಸಸ್ ಬರುತ್ತಿವೆ. ಈ ಸವಾಲನ್ನ ಅತ್ಯಂತ ಸಮರ್ಪಕವಾಗಿ ಎದುರಿಸಬೇಕಿದೆ. ರೈತರು ಸದ್ಯದ ಪರಿಸ್ಥಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನ ಬಳಕೆ ಮಾಡಿಕೊಳ್ಳಬೇಕು. ರೈತ ಬೆಳೆದಿರುವ ಬೆಳೆಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದರು.

ಸಾರಿಗೆ ವ್ಯವಸ್ಥೆ ಪ್ರಾರಂಭಿಸುವ ವಿಚಾರ ಒಂದು ಹಂತದಲ್ಲಿ ಚರ್ಚೆ ನಡೆದಿದೆ. ಲಾಕ್‍ಡೌನ್ ಎಲ್ಲಿ ಮಾಡಬೇಕು ಹಾಗೂ ಎಲ್ಲಿ ಮಾಡಬಾರದು ಎನ್ನುವ ಬಗ್ಗೆ ಚರ್ಚೆ ನಡಿತಿದೆ. ಪಾಸಿಟಿವ್ ಇಲ್ಲದ ಜಿಲ್ಲೆಗಳಲ್ಲಿ ಸಡಿಲಗೊಳಿಸುವ ಬಗ್ಗೆ ಚರ್ಚೆ ಯೋಚನೆಯಿದೆ. ಕೇಂದ್ರ ಹಾಗೂ ರಾಜ್ಯ ಸರಕಾರದ ನಿರ್ದೇಶನದ ಆಧಾರದಲ್ಲಿ ಚಿಂತಿಸಲಾಗುವುದು ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News