ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ: ಶಾಸಕ ಝಮೀರ್ ಅಹ್ಮದ್ ಖಾನ್

Update: 2020-04-21 14:11 GMT

ಬೆಂಗಳೂರು, ಎ. 21: "ಧರ್ಮಾತೀತವಾಗಿ ಕೊರೋನ ವೈರಸ್ ಸೋಂಕಿನ ವಿರುದ್ಧ ದೇಶ ಹೋರಾಡುತ್ತಿದೆ. ಇದು ಒಂದಾಗಬೇಕಾದ ಸಮಯವೇ ಹೊರತು ಸಮಾಜ ಒಡೆಯುವ ಸಮಯವಲ್ಲ" ಎಂದು ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಕ್ಷೇತ್ರದ ಶಾಸಕ ಬಿ.ಝಡ್. ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

ಮಂಗಳವಾರ ಸರಣಿ ಟ್ವೀಟ್ ಮಾಡಿರುವ ಅವರು, "ನನ್ನ ಜನ ಈ ರೀತಿ ವರ್ತಿಸುತ್ತಾರೆ ಎಂದು ನಾನು ಎಂದು ಭಾವಿಸಿರಲಿಲ್ಲ. ಯಾರೋ ಒಂದಷ್ಟು ಜನರ ದುರ್ವತನೆಗೆ ಇಡೀ ಸಮುದಾಯವನ್ನು ದೂರುವುದು ಸರಿಯಲ್ಲ. ಮಾಧ್ಯಮ ಸ್ನೇಹಿತರು ಎಲ್ಲರೂ ಒಟ್ಟಾಗಿ ನನ್ನ ಮೇಲೆ ಮುಗಿಬಿದ್ದಿದ್ದರಿಂದ ಅನಿವಾರ್ಯವಾಗಿ ಉತ್ತರಿಸದೆ ಹೊರ ನಡೆಯಬೇಕಾಯಿತು" ಎಂದು ಸ್ಪಷ್ಟಣೆ ನೀಡಿದ್ದಾರೆ.

"ಘಟನೆಯ ಬಗ್ಗೆ ಮಾಧ್ಯಮ ಮಿತ್ರರಿಗಿದ್ದ ಆಕ್ರೋಶ, ನೋವಿನ ಅರಿವು ನನಗಿದೆ. ಇಂತಹ ಒಂದು ದುರ್ಘಟನೆ ನಡೆದ ನಂತರ ಈ ರೀತಿ ಆಕ್ರೋಶಭರಿತ ಮಾತುಗಳು ಬರುವುದು ಸಹಜ. ಪಾದರಾಯನಪುರದಲ್ಲಿ ಇಂತಹದೊಂದು ಘಟನೆ ನಡೆದಿದೆ ಎಂದು ನನ್ನಿಂದ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ. ತಮ್ಮನ್ನೇ ಉಳಿಸಲು ಬಂದವರ ಮೇಲೆ ಜನ ಹಲ್ಲೆಗೆ ಮುಂದಾಗಿರುವುದು ಅತ್ಯಂತ ನೋವಿನ ಸಂಗತಿ" ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

"ನಾನು ಯಾರಿಗೂ ನನ್ನ ಅಪ್ಪಣೆ ಪಡೆದು ಚಾಮರಾಜಪೇಟೆ ಕ್ಷೇತ್ರಕ್ಕೆ ಬರಬೇಕು ಎಂದು ಎಲ್ಲಿಯೂ ಹೇಳಿಲ್ಲ, ಹೇಳುವುದು ಇಲ್ಲ. ನನ್ನ ಕ್ಷೇತ್ರವೂ ಇತರೆ ಕ್ಷೇತ್ರಗಳಂತೆ ಒಂದು ಸಾಮಾನ್ಯ ಕ್ಷೇತ್ರ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಂಡಿರುವುದಕ್ಕೆ ಸಾಕಷ್ಟು ನೋವಾಗಿದೆ' ಎಂದು ಝಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

"ಲಾಕ್‍ಡೌನ್ ಪ್ರಾರಂಭವಾದ ದಿನದಿಂದ ಹಿಡಿದು ನಿನ್ನೆಯ ಸಂಜೆಯವರೆಗೂ ಹಗಲು ರಾತ್ರಿಯೆನ್ನದೆ ನಾನು ಕ್ಷೇತ್ರದಲ್ಲಿದ್ದು, ಅಧಿಕಾರಿಗಳಿಗೆ ಸ್ಪಂದಿಸಿ, ಜನರು ಮತ್ತು ಸರಕಾರದ ನಡುವಿನ ಕೊಂಡಿಯಾಗಿ ನಿಂತು ಯಾವುದೇ ರೀತಿಯ ಗೊಂದಲ ಆಗದಂತೆ ನೋಡಿಕೊಂಡಿದ್ದು, ನಗರದಲ್ಲಿ ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ಬರಬೇಕೆಂದು. ಆದರೆ, ನಿನ್ನೆಯ ಘಟನೆ ನಡೆಯಬಾರದಿತ್ತು, ನಡೆದಿದೆ. ಅದಕ್ಕೆ ನನ್ನ ವಿಷಾದವಿದೆ. ತಪ್ಪಿತಸ್ಥರ ವಿರುದ್ಧ ಸರಕಾರ ಕಠಿಣ ಕ್ರಮ ಕೈಗೊಳ್ಳಲಿ. ಮುಂದೆ ಇಂತಹ ಘಟನೆಗಳು ನನ್ನ ಕ್ಷೇತ್ರ ಮಾತ್ರವಲ್ಲ, ಇಡೀ ರಾಜ್ಯದಲ್ಲಿ ನಡೆಯದಂತೆ ಎಲ್ಲರೂ ಒಟ್ಟಾಗಿ ಶ್ರಮಿಸೋಣ" ಎಂದು ಝಮೀರ್ ಅಹ್ಮದ್ ಖಾನ್ ಮನವಿ ಮಾಡಿದ್ದಾರೆ.

"ಈ ಘಟನೆ ಸಂಭವಿಸದಂತೆ ಕೈಗೊಳ್ಳಬಹುದಾಗಿದ್ದ ಮುಂಜಾಗ್ರತೆ ಕ್ರಮಗಳ ಬಗ್ಗೆ ನಾನು ಆಡಿದ ಮಾತುಗಳಿಗೆ ಬೇರೆಯದೇ ಅರ್ಥ ನೀಡಿ ಕೆಲ ಸಚಿವರು ನನ್ನ ವಿರುದ್ಧ ಏನೇನು ಪದಗಳನ್ನು ಬಳಸಬಹುದೋ ಅವೆಲ್ಲವನ್ನೂ ಬಳಸಿ ನನ್ನನ್ನು ಹಾಡಿ ಹೊಗಳಿದ್ದಾರೆ, ಸಂತೋಷವಾಗಿದೆ. ಅವರಿಗೆ ಧನ್ಯವಾದ" ಎಂದು ಅವರು ಪರೋಕ್ಷವಾಗಿ ಲೇವಡಿ ಮಾಡಿದ್ದಾರೆ.

"ನಾನು ಏನು ಹೇಳಲು ಬಯಸಿದ್ದೆ ಅದನ್ನು ಹೇಳಲು ಎಲ್ಲಿಯೂ ನನಗೆ ಅವಕಾಶ ಸಿಗಲಿಲ್ಲ. ಹಿಂದೂ-ಮುಸ್ಲಿಂ ಇರಲಿ ಎಲ್ಲರೂ ಒಂದಾಗಿ ಬಾಳಬೇಕು, ಎಲ್ಲರೂ ಒಂದೇ ತಾಯಿಯ ಮಕ್ಕಳು. ನಮ್ಮ ದೇಶವನ್ನು, ರಾಜ್ಯವನ್ನು ಕೊರೋನ ಸೋಂಕಿನಿಂದ ಕಾಪಾಡಬೇಕು. ಇದಕ್ಕೆ ನನ್ನ ಕ್ಷೇತ್ರದ ಜನರ ಸಂಪೂರ್ಣ ಸಹಕಾರ ದೊರೆಯಲಿದೆ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

"ಆ ಒಂದು ಘಟನೆಯಿಂದ ನನ್ನ ಹೆಸರಿಗೆ ಮಸಿ ಬಳಿಯಲು ಎಷ್ಟೇ ಪ್ರಯತ್ನಿಸಿದರೂ ನಾನು ಜನಸೇವೆಯಿಂದ ಹಿಂದೆ ಸರಿಯುವವನಲ್ಲ. ಮಾನವೀಯತೆಯೇ ನನ್ನ ಧರ್ಮ. ಹಣ, ಅಧಿಕಾರ ಯಾವುದೂ ಶಾಶ್ವತವಲ್ಲ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲರೂ ನನ್ನ ಸಹೋದರ, ಸಹೋದರಿಯರಿದ್ದಂತೆ. ಇವರೆಲ್ಲರ ಜೊತೆ ಸದಾ ಇರುತ್ತೇನೆ' ಎಂದು ಅವರು ತಿಳಿಸಿದ್ದಾರೆ.

"ಮುಂದೆ ಇಂತಹ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಲು ಅಗತ್ಯ ಮುಂಜಾಗ್ರತೆ ವಹಿಸಲಾಗುತ್ತದೆ. ನನ್ನ ಕ್ಷೇತ್ರದ ಜನತೆ ಎಂದಿನಂತೆ ಮುಂದೆಯೂ ಸರಕಾರ, ವೈದ್ಯಕೀಯ ಸಿಬ್ಬಂದಿಗಳಿಗೆ ಸಂಪೂರ್ಣ ಸಹಕಾರ ನೀಡುತ್ತಾರೆ ಎಂಬ ಭರವಸೆ ನನಗಿದೆ. ನಮ್ಮೆಲ್ಲರ ಗುರಿ ಕೊರೋನ ಸೋಂಕು ನಿರ್ಮೂಲನೆಯೊಂದೇ ಆಗಿರಲಿ" ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News