ಚಿಕ್ಕಮಗಳೂರಿನಲ್ಲಿ 438 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಕಾಲೇಜು: ಸಚಿವ ಸಿ.ಟಿ.ರವಿ

Update: 2020-04-22 18:11 GMT

ಚಿಕ್ಕಮಗಳೂರು, ಎ.22: ಕೇಂದ್ರ ಸರಕಾರ ಜಿಲ್ಲೆಗೆ ಮಂಜೂರು ಮಾಡಿರುವ ವೈದ್ಯಕೀಯ ವಿಜ್ಞಾನ ಕಾಲೇಜು ನಿರ್ಮಾಣಕ್ಕೆ ರಾಜ್ಯ ಸರಕಾರದ ಸಚಿವ ಸಂಪುಟ ಅನುಮೋದನೆ ನೀಡಿದ್ದು, 438.75 ಕೋಟಿ ರೂ. ವೆಚ್ಚದಲ್ಲಿ ಮೆಡಿಕಲ್ ಕಾಲೇಜನ್ನು ನಿರ್ಮಾಣ ಮಾಡಲಾಗುವುದು ಎಂದು ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2019, ಆ.24ರಂದು ತಾನು ರಾಜ್ಯ ಸರಕಾರದ ಸಚಿವ ಸಂಪುಟದಲ್ಲಿ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದು, ಈ ವೇಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 5 ಪ್ರಮುಖ ಯೋಜನೆಗಳನ್ನು ಜಾರಿ ಮಾಡುವ ಸಂಕಲ್ಪ ಮಾಡಿದ್ದೆ. ಈ ಪೈಕಿ 2019ರ ಅಕ್ಟೋಬರ್ ನಲ್ಲಿ ಕೇಂದ್ರ ಪುರಸ್ಕೃತ ಯೋಜನೆಯಡಿಯಲ್ಲಿ ಜಿಲ್ಲೆಗೆ ಮೆಡಿಕಲ್ ಕಾಲೇಜು ಮಂಜೂರಾಗಿತ್ತು. ಸದ್ಯ ರಾಜ್ಯದ ಸಚಿವ ಸಂಪುಟವು 438.75 ಕೋ. ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಅನುಮೋದನೆ ನೀಡಿದೆ. ಕಾಲೇಜು ನಿರ್ಮಾಣಕ್ಕೆ ನಗರದ ತೇಗೂರು ಗ್ರಾಮದಲ್ಲಿ ಗುರುತಿಸಲಾಗಿರುವ ಜಾಗದ ಸಮಸ್ಯೆ ಸಂಬಂಧ ಇರುವ ಅಡೆತಡೆಗಳನ್ನು ನಿವಾರಿಸಿ ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕ್ರಮಕೈಗೊಳ್ಳಲಾಗುವುದು.

ನಗರದಲ್ಲಿ ಇಂಜಿನಿಯರಿಂಗ್ ಕಾಲೇಜು ನಿರ್ಮಾಣಕ್ಕೆ 58 ಕೋಟಿ ರೂ. ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಜಾಗದ ಸಮಸ್ಯೆ ಬಗೆಹರಿದ ಬಳಿಕ ಕಾಮಗಾರಿ ಆರಂಭವಾಗಲಿದೆ ಎಂದ ಸಿ.ಟಿ.ರವಿ, ನಗರದಲ್ಲಿರುವ ಜಿಲ್ಲಾಸ್ಪತ್ರೆಯನ್ನು ಸಾವಿರ ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಉನ್ನತೀಕರಿಸಲಾಗುವುದು. ಇದಕ್ಕೆ ರಾಜ್ಯ ಸರಕಾರ 170 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಆಸ್ಪತ್ರೆಯನ್ನು ಕೆಎಚ್‍ಎಸ್‍ಆರ್‍ಡಿಪಿ ಸಹಯೋಗದೊಂದಿಗೆ ನಿರ್ಮಿಸಲು ರಾಜ್ಯ ಸರಕಾರ ಆದೇಶ ನೀಡಿದೆ. ಜಿಲ್ಲೆಯಲ್ಲಿ ಹಾಲು ಒಕ್ಕೂಟ ರಚನೆ ಸಂಬಂಧ ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಸ್ಥಳ ಪರಿಶೀಲನೆ ನಡೆಸಲಾಗಿದ್ದು, ಪರಿಶೀಲನೆಯ ವರದಿಯನ್ನು ಸರಕಾರಕ್ಕೆ ಕಳಿಸಲಾಗಿದೆ. ಲಾಕ್‍ಡೌನ್‍ನಿಂದಾಗಿ ಮಿಲ್ಕ್ ಯೂನಿಯನ್‍ಗೆ ಅನುಮೋದನೆ ನೀಡುವುದು ವಿಳಂಬವಾಗಿದೆ ಎಂದು ತಿಳಿಸಿದರು. 

ಜಿಲ್ಲೆಯ ಬಯಲು ಭಾಗದಲ್ಲಿನ ನೀರಿನ ಸಮಸ್ಯೆ ನೀಗಿಸಲು ದಾಸರಹಳ್ಳಿ ಕೆರೆ, ಮಾದರಸ ಕೆರೆಗೆ ನೀರು ತುಂಬಿಸುವ ಯೋಜನೆ ಜಾರಿಗೆ ಟೆಂಡರ್ ಕರೆಯಲಾಗಿದ್ದು, ಕರಗಡ ಯೋಜನೆಯ ಕಾಮಗಾರಿಯೂ ಟೆಂಡರ್ ಪ್ರಕ್ರಿಯೆ ಹಂತದಲ್ಲಿದೆ. ಗೊಂದಿ ಹಳ್ಳದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸಂಬಂಧ ಸಿಎಂ ಬಳಿ ಚರ್ಚಿಸಿದ್ದು, ಏತ ನೀರಾವರಿ ಯೋಜನೆಗಳಿಗೆ ಮೀಸಲಿಟ್ಟ 500 ಕೋ. ರೂ. ಅನುದಾನದಲ್ಲಿ ಈ ಯೋಜನೆಗೆ ಅನುದಾನ ನೀಡಲು ಸಿಎಂ ಸಮ್ಮತಿಸಿದ್ದಾರೆ, ಜೂನ್ ತಿಂಗಳೊಳಗೆ ಗೊಂದಿ ಯೋಜನೆಗೆ ಅನುಮೋದನೆ ಸಿಗಲಿದೆ ಎಂದರು ಸಿ.ಟಿ.ರವಿ ತಿಳಿಸಿದರು.

630 ಕೋ. ರೂ. ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ಚಿಕ್ಕಮಗಳೂರು ತಾಲೂಕಿನ 74 ಗ್ರಾಮಗಳು, ಕಡೂರು ತಾಲೂಕಿನ 40 ಹಾಗೂ ತರೀಕೆರೆ ತಾಲೂಕಿನ 273 ಗ್ರಾಮಗಳಿಗೆ ನೀರು ಪೂರೈಕೆ ಮಾಡಲಾಗುವುದು. ಈ ಯೋಜನೆಗೆ ಸರಕಾರ ಅನುಮೋದನೆ ನೀಡಿದ್ದು, ಅನುದಾನಕ್ಕಾಗಿ ನಬಾರ್ಡ್‍ಗೆ ಪ್ರಸ್ತಾವ ಸಲ್ಲಿಸಲಾಗಿದೆ. 130 ಕೋ. ರೂ. ವೆಚ್ಚದ ಕೆರೆಗಳಿಗೆ ನೀರು ತುಂಬಿಸುವ ರಣಘಟ್ಟ ಯೋಜನೆಯನ್ನು ಸಂಬಂಧ ಸಚಿವ ಸಂಪುಟದಲ್ಲಿ ಮಂಡನೆ ಮಾಡಲಾಗಿದೆ ಎಂದರು.

ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಕಟ್ಟಡ ಕಾಮಗಾರಿ ವಿಳಂಬಾಗುತ್ತಿರುವ ಬಗ್ಗೆ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ಅಧಿಕಾರಿಗಳು ಮಾಡಿದ ಯಡವಟ್ಟಿನಿಂದಾಗಿ ಕಟ್ಟಡ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ಖಾಸಗಿ ಜಾಗದಲ್ಲಿ ಕಟ್ಟಡ ನಿರ್ಮಾಣ ಮಾಡಿದ್ದರಿಂದ ಸಮಸ್ಯೆ ಎದುರಾಗಿದೆ. ಜಾಗದ ಮಾಲಕರು ಈಗ ಎರಡು ಪಟ್ಟು ಜಾಗ ಕೇಳುತ್ತಿರುವುದರಿಂದ ಸಮಸ್ಯೆ ಹೆಚ್ಚಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಡೂರು ಶಾಸಕ ಬೆಳ್ಳಿ ಪ್ರಕಾಶ್, ಬಿಜೆಪಿ ಮುಖಂಡರಾದ ಮಧುಕುಮಾರ್, ವೇಣುಗೋಪಾಲ್, ಎಚ್.ಡಿ.ತಮ್ಮಯ್ಯ ಉಪಸ್ಥಿತರಿದ್ದರು.

ನಗರದಲ್ಲಿ ಕೈಗೊಂಡಿರುವ ಒಳಚರಂಡಿ ಕಾಮಗಾರಿಗಳು ಇನ್ನೂ ಅಪೂರ್ಣವಾಗಿರುವುದು ಹಾಗೂ ಅವೈಜ್ಞನಿಕ ಕಾಮಗಾರಿಗಳನ್ನು ಕೈಗೊಂಡಿರುವುದರಿಂದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ ತನಿಖೆ ನಡೆಸಲು ಈಗಾಗಲೇ ಆದೇಶಿಸಲಾಗಿದೆ. ಈ ಕಾಮಗಾರಿಗಳ ಗುತ್ತಿಗೆದಾರರು ಆಂಧ್ರಮೂಲದವರಾಗಿದ್ದು, ಚಿಕ್ಕಮಗಳೂರು ಸೇರಿದಂತೆ ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲೂ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಳಿಸಿಲ್ಲ. ಇದೊಂದು ಮಾಫಿಯಾ ಆಗಿದ್ದು, ಗುತ್ತಿಗೆದಾರರ ಹಿನ್ನೆಲೆ ಗಮನಿಸದೇ ಗುತ್ತಿಗೆ ನೀಡಿರುವುದರಿಂದ ಸಮಸ್ಯೆ ಸೃಷ್ಟಿಯಾಗಿದೆ.
- ಸಿ.ಟಿ.ರವಿ, ಜಿಲ್ಲಾ ಉಸ್ತುವಾರಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News