ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆ ಸಂಗ್ರಹಿಸಲು ಕುಮಾರಸ್ವಾಮಿ ಸಲಹೆ

Update: 2020-04-27 11:31 GMT

ಬೆಂಗಳೂರು, ಎ. 27: 'ಅನೇಕ ಖಾಸಗಿ ಕಂಪೆನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಸರಕಾರ ಜನ ಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗಿರುವುದರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆಯನ್ನು ಸಂಗ್ರಹಿಸಲಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಸಲಹೆ ಮಾಡಿದ್ದಾರೆ.

ಸೋಮವಾರ ಸರಣಿ ಟ್ವೀಟ್ ಮಾಡಿರುವ ಅವರು, 'ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ' ಎಂದು ಸೂಚಿಸಿದ್ದಾರೆ.

ಈ ಹಠಾತ್ ಶಾಕ್‍ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲ್/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ. ಲಾಕ್‍ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ' ಎಂದು ಕುಮಾರಸ್ವಾಮಿ ಅಭಿಪ್ರಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News