×
Ad

ಕಳಪೆ ಗುಣಮಟ್ಟದ ಬೀಜ, ಕೀಟನಾಶಕದ ವಿರುದ್ಧ ಕ್ರಮ: ಬಿ.ಸಿ.ಪಾಟೀಲ್

Update: 2020-05-04 21:53 IST

ಉಡುಪಿ, ಮೇ 4: ರೈತರಿಗೆ ವಿತರಿಸಲಾಗುವ ಬಿತ್ತನೆ ಬೀಜ, ಕೀಟನಾಶಕ ಗಳು ಉತ್ತಮ ಗುಣಮಟ್ಟದಿಂದ ಕೂಡಿರಬೇಕು. ಈ ಕುರಿತು ಬಿತ್ತನೆ ಬೀಜ ಮತ್ತು ಕೀಟನಾಶಕಗಳ ಮಾದರಿಯನ್ನು ಕೃಷಿ ಇಲಾಖೆಯ ಅಧಿಕಾರಿಗಳು ಪ್ರಯೋಗಾಲಯಗಳ ಮೂಲಕ ಪರೀಕ್ಷಿಸಿ, ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳು ದೊರೆಯುವಂತೆ ಮಾಡಬೇಕು ಎಂದು ರಾಜ್ಯದ ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಕೋವಿಡ್-19 ಸಂಬಂಧ ಲಾಕ್‌ಡೌನ್ ಹಿನ್ನೆಲೆಯಲ್ಲಿ ಉಡುಪಿ ಜಿಪಂ ಸಭಾಂಗಣದಲ್ಲಿ ಸೋಮವಾರ ಉಡುಪಿ ಜಿಲ್ಲೆಯಲ್ಲಿ ಬೀಜ ರಸಗೊಬ್ಬರಗಳ ಲಭ್ಯತೆ ಮತ್ತು ಕೃಷಿ ಉತ್ಪನ್ನಗಳ ಸರಕು ಸಾಗಾಗಣಿಕೆ ಬಗ್ಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ರೈತರಿಗೆ ವಿವಿಧ ಮಳಿಗೆಗಳಲ್ಲಿ ವಿತರಿಸಲಾಗುವ ಬಿತ್ತನೆ ಬೀಜ, ಕೀಟನಾಶಕ ಗಳನ್ನು ಪರೀಕ್ಷಿಸಿ, ಕಳಪೆ ಗುಣಮಟ್ಟದ ಬಿತ್ತನೆ ಬೀಜ, ಅವಧಿ ಮೀರಿದ ಕೀಟ ನಾಶಕಗಳನ್ನು ಸರಬರಾಜು ಮಾಡುವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುವುದು. ಈ ಬಗ್ಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಕ್ರಮ ತೆಗೆದುಕೊ್ಳಬೇಕು ಎಂದು ಅವರು ತಿಳಿಸಿದರು.

ಲಾಕ್‌ಡೌನ್ ಅವಧಿಯಲ್ಲಿ ರೈತರು ಮತ್ತು ಅವರು ಬೆಳದ ಬೆಳೆಗಳಿಗೆ ಯಾವುದೇ ತೊಂದರೆಯಾಗದಂತೆ ಕೃಷಿಗೆ ಪೂರಕವಾಗುವ ಕ್ರಮಗಳನ್ನು ಕೈಗೊಳ್ಳ ಲಾಗಿದೆ. ರೈತರು ಕೃಷಿಯನ್ನು ಲಾಭದಾಯಕವನ್ನಾಗಿ ಮಾಡಿಕೊಳ್ಳಬೇಕು ಎಂದು ಅವರು ಸಲಹೆ  ನೀಡಿದರು.

ಕಾಡುಪ್ರಾಣಿಗಳ ಹಾವಳಿಗೆ ಕ್ರಮ

ಉಡುಪಿ ಜಿಲ್ಲೆಗೆ ಸಂಬಂಧಿಸಿದಂತೆ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಮಾತನಾಡಿ, ಕೃಷಿಕರ ಬೆಳೆಗೆ ಕಾಡುಪ್ರಾಣಿಗಳಿಂದ ಹಾವಳಿಯಿಂದ ಸಮಸ್ಯೆ ಯಾಗುತ್ತಿದ್ದು, ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಶಾಸಕ ರಘುಪತಿ ಭಟ್ ತಿಳಿಸಿದಂತೆ ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಪ್ರಾರಂಭಿಸುವ ಬಗ್ಗೆ ಲಾಕ್‌ಡೌನ್ ಮುಗಿದ ಬಳಿಕ ಮುಖ್ಯಮಂತ್ರಿ ಗಳೊಂದಿಗೆ ಚರ್ಚಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ಉಡುಪಿ ಜಿಲ್ಲೆಯ ವಿವಿಧ ರೈತರ ಸಂಘಟನೆಗಳ ಮುಖಂಡರ ಮನವಿಯಂತೆ ಎಪಿಎಂಸಿ ಯಲ್ಲಿ ಶೇ.1.5ರಷ್ಟು ತೆರಿಗೆ ರದ್ದುಗೊಳಿಸುವುದು, ಜಿಲ್ಲೆಯಲ್ಲಿ ಭತ್ತದ ಬೆಂಬಲ ಬೆಲೆಯನ್ನು ಸಾಕಷ್ಟು ಮುಂಚಿತವಾಗಿ ಘೋಷಣೆ ಮಾಡುವುದು, ಕೋಲ್ಡ್ ಸ್ಟೋರೇಜ್ ಸ್ಥಾಪನೆ , ಭತ್ತದ ಬೆಳಗೆ ಮಳೆಯಾಧಾರಿತ ಪ್ರೋತ್ಸಾಹಧನ ನೀಡಲು ಕ್ರಮ ತೆಗೆದುಕೊಳ್ಳ ಲಾಗುವುದು ಎಂದು ಸಚಿವರು ಹೇಳಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮಾತನಾಡಿ, ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಸಮಸ್ಯೆ ಇಲ್ಲ. ಜಿಲ್ಲೆಯಲ್ಲಿ 36000 ಹೆಕ್ಟರ್ ನಲ್ಲಿ ಭತ್ತ ಬೆಳಯಲಾಗುತ್ತಿದ್ದು, ಪಿಎಂ ಕಿಸಾನ್ ಯೋಜನೆಯಲ್ಲಿ ನೊಂದಾ ಯಿಸಿದ 134244 ಮಂದಿಗೆ 2000 ರೂ.ನಂತೆ ಹಣ ವಿರಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಕಾಪು ಶಾಸಕ ಲಾಲಾಜಿ ಆರ್. ಮೆಂಡನ್, ಜಿಪಂ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಜಿಲ್ಲಾಧಿಕಾರಿ ಜಿ.ಜಗದೀಶ್, ಜಿಪಂ ಸಿಇಒ ಪ್ರೀತಿ ಗೆಹ್ಲೋಟ್ ಮೊದ ಲಾದವರು ಉಪಸ್ಥಿತರಿದ್ದರು.

ಮೋಸ ಮಾಡಿದರೆ ಕಪ್ಪುಪಟ್ಟಿಗೆ

ರೈತರಿಗೆ ಸಬ್ಸಿಡಿ ದರದಲ್ಲಿ ವಿತರಿಸಲಾಗುವ ಯಂತ್ರೋಪಕರಣದ ಬೆಲೆ ಮತ್ತು ಮಾರುಟ್ಟೆಯಲ್ಲಿರುವ ಬೆಲೆಯಲ್ಲಿ ವ್ಯತ್ಯಾಸ ಕಂಡುಬಂದಲ್ಲಿ, ಇಲಾಖೆಗೆ ಸಬ್ಸಿಡಿ ದರದಲ್ಲಿ ಸರಬರಾಜು ಮಾಡುವ ಕಂಪೆನಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಎಂದು ಸಚಿವ ಬಿ.ಸಿ.ಪಾಟೀಲ್ ಎಚ್ಚರಿಕೆ ನೀಡಿದರು.

ಯಂತ್ರೋಪಕರಣ ಸಬ್ಸಿಡಿ ಮೊತ್ತವನ್ನು ನೇರವಾಗಿ ಫಲಾನುಭವಿ ರೈತರ ಖಾತೆಗೆ ಹಾಕಿ, ಆ ಮೂಲಕ ಅವರು ಯಾವುದೇ ಕಂಪೆನಿಯ ಯಂತ್ರೋ ಪಕರಣಗಳನ್ನು ಖರೀದಿಸುವಂತೆ ಮಾಡುವ ಕುರಿತು ಪರಿಶೀಲನೆ ನಡೆಸ ಲಾಗುವುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News