2021ರ ಮಾರ್ಚ್ ವೇಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣ: ಸಚಿವ ಜಾರಕಿಹೊಳಿ
ಹಾಸನ, ಮೇ 7: ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಂದು ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಯೋಜನೆ ಕಾಮಗಾರಿ ಪರಿಶೀಲನೆ ನಡೆಸಿದರು.
ತಾಲೂಕಿನ ಕುಂಬರಡಿ, ಕಾಡುಮನೆ, ಹೆಬ್ಬನಳ್ಳಿಗಳಲ್ಲಿ ಯೋಜನಾ ಸ್ಥಳಗಳಿಗೆ ಭೇಟಿ ನೀಡಿದ ಸಚಿವರು ಬಯಲು ಸೀಮೆಗೆ ನೀರುಣಿಸುವ ಎತ್ತಿನಹೊಳೆ ಯೋಜನೆ ಕಾಮಗಾರಿಗಳನ್ನು ಚುರುಕುಗೊಳಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು 2021ರ ಮಾರ್ಚ್ ವೇಳೆಗೆ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಿ 37 ಕಿ.ಮೀ.ವರಗೆ ಪ್ರಾಯೋಗಿಕವಾಗಿ ನೀರುಹರಿಸಲಾಗುವುದು ಎಂದರು.
ಕೋವಿಡ್-19 ಹಿನ್ನಲೆಯಲ್ಲಿ ಕಾಮಗಾರಿ ವಿಳಂಬವಾಗಿದೆ. ಇನ್ನುಮುಂದೆ ಕ್ಷಿಪ್ರವಾಗಿ ಕೆಲಸ ನಡೆಸಲಾಗುವುದು.
ಆದಷ್ಟು ಬೇಗ ಬಯಲುಸೀಮೆಗೆ ನೀರು ಹರಿಸಬೇಕೆಂಬುದು ಸರ್ಕಾರದ ಗುರಿಯಾಗಿದೆ ಎಂದರು.
ಯೋಜನೆಯಿಂದ ಬಾಧಿತವಾಗಿರುವ ಸಕಲೇಶಪುರ ಮತ್ತು ಆಲೂರು ತಾಲೂಕುಗಳಲ್ಲಿ ಈಗಾಗಲೇ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಗಮನಹರಿಸಲಾಗಿದ್ದು, ರಸ್ತೆ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದರು.