ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುತ್ತಿಗೆ ವೈದ್ಯಕೀಯ ಸಿಬ್ಬಂದಿ ಧರಣಿ
ಬೆಂಗಳೂರು, ಮೇ 12: ಕೊರೋನ ಸೋಂಕಿನ ವಿರುದ್ಧ ಸದಾ ಹೋರಾಟದಲ್ಲಿ ಸಕ್ರಿಯವಾಗಿರುವ ಗುತ್ತಿಗೆ ವೈದ್ಯಕೀಯ ಸಿಬ್ಬಂದಿ ಕಪ್ಪು ಪಟ್ಟಿ ಧರಿಸಿ, ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರ ಈಡೇರಿಸಬೇಕೆಂದು ಪ್ರತಿಭಟನೆ ನಡೆಸಿದರು.
ನಗರದ ವ್ಯಾಪ್ತಿಯ ನಾನಾ ಆರೋಗ್ಯ ಕೇಂದ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕಳೆದೆರಡು ವರ್ಷಗಳಿಂದ ಹೊರ ಹಾಗೂ ಒಳ ಗುತ್ತಿಗೆ ನೌಕರರ ಬೇಡಿಕೆ ಈಡೇರಿಸುವ ಭರವಸೆಯನ್ನು ನೀಡುತ್ತಲೇ ಬಂದಿರುವ ಸರಕಾರಗಳು, ನೌಕರರಿಂದ ಕೆಲಸ ಮಾತ್ರ ಮಾಡಿಸಿಕೊಳ್ಳುತ್ತಿವೆ. ಆದರೆ, ಅವರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಅವರು ದೂರಿದ್ದಾರೆ.
ಎಲ್ಲವೂ ಅಂತಿಮ ಹಂತಕ್ಕೆ ಬಂದಿದೆ, ತಕ್ಷಣ ಬೇಡಿಕೆ ಈಡೇರಿಸಲಾಗುವುದು ಎಂದು ಎರಡು ತಿಂಗಳ ಹಿಂದೆ ತಿಳಿಸಿದ್ದ ಇಲಾಖೆ, ಲಾಕ್ಡೌನ್ ಆದ ಕಾರಣ, ಕೊರೋನ ಸಮಸ್ಯೆ ಇತ್ಯರ್ಥವಾಗುತ್ತಿದ್ದಂತೆಯೇ ಕ್ರಮ ಕೈಗೊಳ್ಳುವುದಾಗಿ ಹೇಳಿತ್ತು. ಎಪ್ರಿಲ್ 30 ರಂದು ನಡೆದ ಸಂಪುಟ ಸಭೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸುವ ಭರವಸೆಯನ್ನೂ ನೀಡಲಾಗಿತ್ತು. ಆದರೆ, ಇದೂ ಸಹ ಹುಸಿಯಾಗಿರುವುದರಿಂದ ಇದೀಗ ಅನಿವಾರ್ಯವಾಗಿ ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ತಿಳಿಸಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ಕರ್ತವ್ಯ ನಿರ್ವಹಿಸುತ್ತಾ, ಸ್ಥಳದಲ್ಲಿಯೇ ಕಪ್ಪು ಪಟ್ಟಿ ಧರಿಸಿ ಸೇವೆಗೆ ಚ್ಯುತಿ ಬರದಂತೆ ಪ್ರತಿಭಟನೆ ನಡೆಸುತ್ತಿದ್ದೇವೆ. ಬಿಡುವಿನ ವೇಳೆಯಲ್ಲಿ ಪ್ರತಿಭಟನಾ ಫಲಕಗಳ ಪ್ರದರ್ಶನ ಮಾಡುವ ಮೂಲಕ ಸರಕಾರದ ಗಮನ ಸೆಳೆಯುತ್ತಿದ್ದೇವೆ. ಇದರ ನಂತರವೂ ಇಲಾಖೆ ಬೇಡಿಕೆಗಳನ್ನು ಈಡೆರಿಸದಿದ್ದರೆ ಅನಿವಾರ್ಯವಾಗಿ ಎರಡನೆ ಹಂತದಲ್ಲಿ ಮುಷ್ಕರವನ್ನು ಅನಿರ್ದಿಷ್ಟಾವಧಿ ಕಾಲಾವಧಿಗೆ ಮುಂದುವರೆಸಲು ತೀರ್ಮಾನಿಸಿರುವುದಾಗಿ ತಿಳಿಸಿದರು.