×
Ad

ಐದು ನಿಮಿಷದಲ್ಲಿ ಕೋವಿಡ್ ಪರೀಕ್ಷೆ: ಸಂಶೋಧಕರ ಜತೆ ಡಾ.ಅಶ್ವಥ್ ನಾರಾಯಣ ಚರ್ಚೆ

Update: 2020-05-14 22:55 IST

ಬೆಂಗಳೂರು, ಮೇ 14: ಜೈವಿಕ ತಂತ್ರಜ್ಞಾನ ಕ್ಷೇತ್ರದ ಕಂಪನಿಯೊಂದು ಕೇವಲ 5 ನಿಮಿಷದಲ್ಲಿ ಕೋವಿಡ್ ಸೋಂಕು ಪರೀಕ್ಷೆ ಮಾಡುವ ಯಂತ್ರ ಸಿದ್ಧಪಡಿಸಿದ್ದರೆ, ಮತ್ತೊಂದು ಕಂಪನಿ ಸೋಂಕು ಪತ್ತೆ ಜತೆಗೆ ಸ್ಯಾಂಪಲ್‍ಅನ್ನು ತಕ್ಷಣವೇ ವೈಜ್ಞಾನಿಕವಾಗಿ ವಿಲೇವಾರಿ ಮಾಡುವ ಯಂತ್ರ ಸಂಶೋಧಿಸಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.

ರಾಜ್ಯ ಜೈವಿಕ ತಂತ್ರಜ್ಞಾನ ಇಲಾಖೆಯ 'ಬೆಂಗಳೂರು ಬಯೋಇನೋವೇಷನ್ ಸೆಂಟರ್'ನಲ್ಲಿ ಇರುವ 45 ಸ್ಟಾರ್ಟ್ ಆಪ್‍ಗಳು ಕೋವಿಡ್ ಸೋಂಕಿಗೆ ಔಷಧ ಕಂಡುಹಿಡಿಯುವ ಮತ್ತು ತ್ವರಿತವಾಗಿ ಸೋಂಕು ಪತ್ತೆ ಪರೀಕ್ಷೆಗಳನ್ನು ಕೈಗೆತ್ತಿಕೊಳ್ಳುವ ನಿಟ್ಟಿನಲ್ಲಿ ಅವಿರತ ಶ್ರಮ ಹಾಕುತ್ತಿದ್ದು ಅಂತಹ ಕೆಲವು ಸಂಸ್ಥೆಗಳ ಪ್ರತಿನಿಧಿಗಳ ಜತೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಸಂವಾದ ನಡೆಸಿ, ಅವರಿಗೆ ಬೆಂಬಲ ಸೂಚಿಸಿದರು.

ಎಲೆಕ್ಟ್ರಾನಿಕ್ ಸಿಟಿಯಲ್ಲಿ ಇರುವ 'ಬೆಂಗಳೂರು ಬಯೋಇನೋವೇಷನ್ ಸೆಂಟರ್'ಗೆ ಗುರುವಾರ ಭೇಟಿ ನೀಡಿದ ಅವರು ಕೋವಿಡ್ ಟೆಸ್ಟ್ ಹಾಗೂ ಕೋವಿಡ್ ಔಷಧ ಅನ್ವೇಷಣೆ ಕಾರ್ಯದಲ್ಲಿ ತೊಡಗಿರುವ ಸಂಶೋಧಕರ ಜತೆ  ಸಂವಾದ ನಡೆಸಿದರಲ್ಲದೆ, ಎಸ್‍ಎನ್ ಲೈಫ್‍ಸೈನ್ಸಸ್, ಕಫ/ಸ್ವ್ಯಾಬ್ ಮಾದರಿಯಿಂದ ಆರ್‍ಎನ್‍ಎ ಬೇರ್ಪಡಿಸುವ ಪ್ರೋಗ್ರಾಂಬಲ್ ರೊಬೊಟಿಕ್ ಯಂತ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೋವಿಡ್ ಸೋಂಕಿಗೆ ಔಷಧ ಕಂಡುಹಿಡಿಯುವುದರ ಜತೆಗೆ ಕಡಿಮೆ ವೆಚ್ಚದಲ್ಲಿ ಮತ್ತು ತ್ವರಿತವಾಗಿ ಸೋಂಕು ಪತ್ತೆ ಮಾಡುವುದು ನಮ್ಮ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ಕೆಲವು ಸ್ಟಾರ್ಟ್ ಅಪ್‍ಗಳು ಕ್ಲಿನಿಕಲ್ ಟೆಸ್ಟ್ ಹಂತದಲ್ಲಿವೆ. ಇನ್ನು ಕೆಲವು ಸಂಶೋಧನೆ ಮುಗಿಸಿ ನಿಯಂತ್ರಣ ಪ್ರಾಧಿಕಾರಗಳ ಒಪ್ಪಿಗೆಗಾಗಿ ಕಾಯುತ್ತಿವೆ. ಒಟ್ಟಿನಲ್ಲಿ ಕರ್ನಾಟಕದ ಸಂಸ್ಥೆಗಳು ಈ ಸೋಂಕಿನ ವಿರುದ್ಧ ಹೋರಾಡಲು ಜಗತ್ತಿಗೆ ಪರಿಹಾರ ಸೂಚಿಸುತ್ತಿರುವುದು ನಿಜಕ್ಕೂ ಖುಷಿಯ ವಿಚಾರ ಎಂದು ಡಿಸಿಎಂ ಹೇಳಿದರು.

ಹಲವು ಕಂಪನಿಗಳು ನಾನಾ ರೀತಿಯ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿವೆ. 'ಬೆಂಗಳೂರು ಬಯೋಇನೋವೇಷನ್ ಸೆಂಟರ್' ವ್ಯಾಪ್ತಿಯಲ್ಲಿ ಸ್ಟಾಫ್‍ಗಳು ಇಂತಹ ಯಶಸ್ಸು ಸಾಧಿಸುತ್ತಿರುವುದು ರಾಜ್ಯ ಮತ್ತು ದೇಶದ ದೃಷ್ಟಿಯಿಂದ ಅತ್ಯಂತ ಉತ್ತಮ ಬೆಳವಣಿಗೆ. ಆರೋಗ್ಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೇ ಆರ್ಥಿಕ ವಹಿವಾಟು ಮುಂದುವರಿಸಲು 5 ನಿಮಿಷದ ಪರೀಕ್ಷೆಯಿಂದ ಸಾಧ್ಯವಾಗಲಿದೆ ಎಂದು ಅವರು ಮಾಹಿತಿ ನೀಡಿದರು.

ಈಗಾಗಲೇ ಸೋಂಕು ಪತ್ತೆ ತಂತ್ರಜ್ಞಾನ ಅಭಿವೃದ್ಧಿಪಡಿಸಿರುವ ಕಂಪನಿಗಳು ಪ್ರಾಣಿಗಳ ಮೇಲೆ ಪ್ರಯೋಗ ಮಾಡಿ ಯಶಸ್ಸು ಸಾಧಿಸಿದ್ದು, ಇದೀಗ ಕೋವಿಡ್ ಸೋಂಕು ಪರೀಕ್ಷೆಗೆ ಸೋಂಕಿತರ ಗಂಟಲುದ್ರವ ನೀಡುವಂತೆ ಕೇಳಿಕೊಂಡಿವೆ. ಈ ಪ್ರಯೋಗ ಯಶಸ್ವಿಯಾದರೆ ಸ್ಥಳೀಯವಾಗಿ ಸಿದ್ಧಪಡಿಸಿದ ತಂತ್ರಜ್ಞಾನದಿಂದಲೇ ಸೋಂಕು ಪತ್ತೆ ಮಾಡಬಹುದು ಎಂದು ಹೇಳಿವೆ.

ಆದರೆ, ಪಾಸಿಟಿವ್ ಬಂದಿರುವ ರೋಗಿಯ ಗಂಟಲು ದ್ರವವನ್ನು ಸಂಗ್ರಹಿಸುವುದು ಮತ್ತು ಪ್ರಯೋಗದ ಬಳಿಕ ವಿಲೇವಾರಿ ಮಾಡುವುದು ಅತ್ಯಂತ ಸವಾಲಿನ ಕೆಲಸ. ಇದಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಾಗಿದೆ. ಈ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಕಂಪನಿಗೆ ಅಗತ್ಯವಿರುವ ಗಂಟಲುದ್ರವ ಮಾದರಿಯನ್ನು ಒದಗಿಸುವ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಮಿತಿ ರಚನೆ: ಈ ಸ್ಟಾರ್ಟ್ ಆಪ್ ಕಂಪನಿಗಳು ಇನ್ನಷ್ಟು ಪರಿಣಾಕಾರಿಯಾಗಿ ತಮ್ಮ ಸಂಶೋಧನಾ ಕಾರ್ಯ ಮುಂದುವರಿಸಲು ಸರಕಾರದಿಂದಲೂ ಸಾಕಷ್ಟು ಸಹಕಾರ ಬೇಕು. ಈ ಹಿನ್ನೆಲೆಯಲ್ಲಿ ಕಂಪನಿಗಳು ಮತ್ತು ಸರಕಾರದ ಮಧ್ಯೆ ಸಮನ್ವಯ ಸಾಧಿಸಲು ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲಾಗುವುದು. ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಸ್ಥಳದಲ್ಲೇ ಇದ್ದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ. ರಮಣರೆಡ್ಡಿ ಅವರಿಗೆ ಸೂಚಿಸಿದರು.

ಒಂದೇ ಬಾರಿಗೆ 8 ಮಾದರಿ ಪರೀಕ್ಷೆ: ಎಸ್‍ಎನ್ ಲೈಫ್‍ಸೈನ್ಸ್ ಪ್ರೋಗ್ರಾಂಬಲ್ ರೊಬೊಟಿಕ್ ಯಂತ್ರವು ಕಫ/ಸ್ವ್ಯಾಬ್‍ಗಳ ಕ್ಲಿನಿಕಲ್ ಮಾದರಿಯ ಆರ್‍ಎನ್‍ಎ ಪ್ರತ್ಯೇಕಿಸುವ ಕೆಲಸ ಮಾಡುತ್ತದೆ,  ಏಕಕಾಲದಲ್ಲಿ ಎಂಟು ಮಾದರಿಗಳ ಟೆಸ್ಟ್ ಮಾಡುವುದು ಈ ಯಂತ್ರದ ವಿಶೇಷತೆ. ಜತೆಗೆ ಪ್ರತಿ ಮಾದರಿಯ ಆರ್‍ಎನ್‍ಎ ಪ್ರತ್ಯೇಕಿಸುವ ವೆಚ್ಚವು 500 ರೂ. ನಿಂದ 150ಕ್ಕೆ ಇಳಿಕೆಯಾಗಲಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News