'ಹೂಡಿಕೆದಾರರಿಗೆ ವಿಶೇಷ ಪ್ರೋತ್ಸಾಹಕ ಯೋಜನೆ' ರೂಪಿಸಲು ಕ್ರಮ

Update: 2020-05-21 12:52 GMT

ಬೆಂಗಳೂರು, ಮೇ 21: ಚೈನಾದಲ್ಲಿರುವ ಕೈಗಾರಿಕೋದ್ಯಮಿಗಳು, ಇತರ ದೇಶಗಳಲ್ಲಿ ಹೂಡಿಕೆಗೆ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿಶೇಷ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ಈ ಟಾಸ್ಕ್ ಫೋರ್ಸಿನ ಕಾರ್ಯ ಚಟುವಟಿಕೆಗಳನ್ನು ಪ್ರತಿವಾರ ಪರಿಶೀಲನೆ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ, ಸರಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಾಣಿಜ್ಯ ಮತ್ತು ಕೈಗಾರಿಕೆ, ಎಂಎಸ್‍ಎಂಇ ಹಾಗೂ ಸಕ್ಕರೆ ಮತ್ತು ಕಾರ್ಮಿಕ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ಸಿಎಂ ಬಿಎಸ್‍ವೈ ನಡೆಸಿದರು. ಹೂಡಿಕೆದಾರರನ್ನು ಆಕರ್ಷಿಸಲು ರಾಜ್ಯ ಸರಕಾರ ಈಗಾಗಲೇ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶೇಷ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ಅಲ್ಲದೆ, ಹೂಡಿಕೆದಾರರಿಗೆ ವಿಶೇಷ ಪ್ರೋತ್ಸಾಹಕ ಯೋಜನೆ ರೂಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅಧಿಕಾರಿಗಳು, ಸಿಎಂಗೆ ಮಾಹಿತಿ ನೀಡಿದರು.

ಕೊರೋನ ಸೋಂಕು ತಡೆಗಟ್ಟಲು ಹೇರಿದ್ದ ಲಾಕ್‍ಡೌನ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಕಾರ್ಖಾನೆಗಳ ಪೈಕಿ ಶೇ.70ರಷ್ಟು ಕೈಗಾರಿಕೆಗಳು ಪುನರಾರಂಭಗೊಂಡಿವೆ. ಈ ನಿಟ್ಟಿನಲ್ಲಿ ಕೈಗಾರಿಕಾ ವಲಯದ ಪರಿಣಿತರೊಂದಿಗೆ, ಅಂತರ ರಾಷ್ಟ್ರೀಯ ಕೈಗಾರಿಕೋದ್ಯಮಿಗಳ ಸಂಘಟನೆಗಳೊಂದಿಗೆ ಸರಕಾರ ಸಮಾಲೋಚನೆ ನಡೆಸುತ್ತಿದೆ ಎಂದು ತಿಳಿಸಿದರು.

ಇದಲ್ಲದೆ, ರಾಜ್ಯ ಸರಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಕೈಗಾರಿಕೋದ್ಯಮಿಗಳಿಗೆ ಜಮೀನು ಖರೀದಿಸುವ ಪ್ರಕ್ರಿಯೆ ಸರಳಗೊಂಡಿದೆ. ಇದರಿಂದ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವುದು ಸುಲಭವಾಗಲಿದೆ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು.

ಜಿಲ್ಲಾ ಮಟ್ಟದಲ್ಲಿಯೂ ಕೈಗಾರಿಕೆಗಳನ್ನು ಸ್ಥಾಪಿಸುವ ಪ್ರಕ್ರಿಯೆಯನ್ನು ಸರಳಗೊಳಿಸುವ ನಿಟ್ಟಿನಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೋವಿಡ್-19 ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ತಿಳಿಸಿರುವಂತೆ ಸವಾಲುಗಳನ್ನು ಅವಕಾಶಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಮಹತ್ತರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.

ಸಾಮರ್ಥ್ಯ ಹೆಚ್ಚಳ: ಹೊರ ದೇಶದಿಂದ ಆಮದಾಗುತ್ತಿದ್ದ ಪಿಪಿಇ ಕಿಟ್‍ಗಳನ್ನು ನಮ್ಮ ದೇಶದಲ್ಲಿಯೇ ತಯಾರಿಸಲು ಉತ್ತೇಜನ ನೀಡಲಾಗಿದ್ದು, ರಾಜ್ಯದಲ್ಲಿ 22 ಘಟಕಗಳು ಈ ಪಿಪಿಇ ಕಿಟ್‍ಗಳನ್ನು ಉತ್ಪಾದಿಸುತ್ತಿವೆ. ನಾಲ್ಕು ಸಂಸ್ಥೆಗಳು ವೆಂಟಿಲೇಟರುಗಳ ತಯಾರಿಕೆ ಮಾಡುತ್ತಿವೆ. ಸ್ಯಾನಿಟೈಸರ್ ಕೊರತೆ ನೀಗಿಸಲು 40ಕ್ಕೂ ಹೆಚ್ಚು ಡಿಸ್ಟಿಲರಿಗಳಿಗೆ ಪರವಾನಗೆ ನೀಡಿ, ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.

ರಾಜ್ಯದಲ್ಲಿ ಎಲ್ಲ ಔದ್ಯೋಗಿಕ ಚಟುವಟಿಕೆಗಳು ಪ್ರಾರಂಭವಾಗಿದ್ದು, ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮುಚ್ಚಲಾಗಿದ್ದ ಜ್ಯುಬಿಲಿಯಂಟ್ ಕಾರ್ಖಾನೆಯನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇದೇ ವೇಳೆ ಸ್ಪಷ್ಟನೆ ನೀಡಿದರು.

ಅಭಿಯಾನಕ್ಕೆ ಸೂಚನೆ: ರಾಜ್ಯದಲ್ಲಿ ಅಸಂಘಟಿತ ವಲಯದ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಲ್ಲಿ ಪ್ರಸ್ತುತ ಕೇವಲ 89 ಸಾವಿರ ಕಾರ್ಮಿಕರು ನೋಂದಾಯಿಸಿಕೊಂಡಿದ್ದು, ಈ ವಲಯದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಳ್ಳಲು ಅಭಿಯಾನ ಮಾದರಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಯಡಿಯೂರಪ್ಪ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಕಟ್ಟಡ ಕಾರ್ಮಿಕರಿಗೆ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಈವರೆಗೆ 12.40ಲಕ್ಷ ರೂ. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ತಲಾ 5 ಸಾವಿರ ರೂ.ನಂತೆ ಆರ್ಥಿಕ ನೆರವು ನೀಡಲಾಗಿದೆ. ಅಲ್ಲದೆ, ಅವರಿಗೆ ಆಹಾರದ ಕಿಟ್ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಸರಕಾರ ಕಲ್ಪಿಸಿದೆ ಎಂದು ಅಧಿಕಾರಿಗಳು ವಿವರ ನೀಡಿದರು.

ಸಭೆಯಲ್ಲಿ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News