ಸಚಿವ ಮಾಧುಸ್ವಾಮಿ ಬಂಧನಕ್ಕೆ ಆಗ್ರಹಿಸಿ ಡಿಜಿ ಕಚೇರಿ ಮುಂದೆ ಪ್ರತಿಭಟನೆ

Update: 2020-05-21 15:07 GMT
ಸಚಿವ ಮಾಧುಸ್ವಾಮಿ

ಬೆಂಗಳೂರು, ಮೇ 21: ರೈತ ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿ ಕೆಪಿಸಿಸಿ ಮಹಿಳಾ ಘಟಕ ಸದಸ್ಯರು ಪೊಲೀಸ್ ಮಹಾನಿರ್ದೇಶಕರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಗುರುವಾರ ನಗರದ ನೃಪತುಂಗ ರಸ್ತೆಯ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮುಂಭಾಗ ಜಮಾಯಿಸಿದ ಮಹಿಳಾ ಕಾಂಗ್ರೆಸ್ ಸದಸ್ಯರು, ಈ ಕೂಡಲೇ ಸಚಿವರ ಮೇಲೆ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕಾನೂನು ಸಚಿವರಾಗಿ ಮಾಧುಸ್ವಾಮಿ ಅವರು ಮಹಿಳೆಯರು ಕುರಿತು ಅಶ್ಲೀಲವಾಗಿ ಮಾತನಾಡಿದ್ದು ಖಂಡನೀಯ. ಇಂತಹ ಸಚಿವರನ್ನು ಈ ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು. ಜೊತೆಗೆ, ಕಾನೂನು ಕ್ರಮ ಕೈಗೊಳ್ಳಬೇಕೆಂದು ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ದೂರು ಸಲ್ಲಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಬಿಂದುಶ್ರೀ ಗೌಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News