ಮೊಬೈಲ್ ಸಂದೇಶ ನಂಬಿ ಮೈದಾನದಲ್ಲಿ ಜಮಾಯಿಸಿದ ಈಶಾನ್ಯ ರಾಜ್ಯಗಳ ವಲಸಿಗರು: ಊರಿಗೆ ತೆರಳಲು ನೂಕುನುಗ್ಗಲು

Update: 2020-05-23 12:32 GMT

ಬೆಂಗಳೂರು, ಮೇ 23: ಹೊರರಾಜ್ಯದಿಂದ ವಲಸೆ ಬಂದಿದ್ದ ಕಾರ್ಮಿಕರು ಊಟ, ನೀರಿಲ್ಲದೆ, ಊರಿಗೆ ಹೋಗಲು ಸಾಧ್ಯವಾಗದೇ ಪರಿತಪಿಸುತ್ತಿದ್ದಾರೆ. ಇದರ ನಡುವೆ ಮೊಬೈಲ್ ಸಂದೇಶವೊಂದನ್ನು ನಂಬಿದ ವಲಸೆ ಕಾರ್ಮಿಕರು ಸಾವಿರಾರು ಸಂಖ್ಯೆಯಲ್ಲಿ ಶನಿವಾರ ನಗರದ ಅರಮನೆ ಮೈದಾನದಲ್ಲಿ ಜಮಾಯಿಸಿದ್ದರು. ಇದರಿಂದ ಗೊಂದಲದ ವಾತಾವರಣ ಸೃಷ್ಟಿಯಾಗಿತ್ತು.

ಸೇವಾ ಸಿಂಧು ಆ್ಯಪ್‍ನಲ್ಲಿ ಈಶಾನ್ಯ ರಾಜ್ಯಗಳಿಗೆ ತೆರಳಲು ನೋಂದಾಯಿಸಿಕೊಂಡಿದ್ದ ಜನರಿಗೆ ಕಳುಹಿಸಲಾಗಿದ್ದ ಮೊಬೈಲ್ ಸಂದೇಶ ಅವರವರಲ್ಲೇ ಫಾರ್ವಡ್ ಆಗಿ, ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಅರಮನೆ ಮೈದಾನಕ್ಕೆ ಆಗಮಿಸಿದ್ದರು. ಇಂದು ಪ್ರಯಾಣಕ್ಕೆ ಆಯ್ಕೆಯಾಗದಿದ್ದರೂ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಭಾರೀ ದಟ್ಟಣೆ ಉಂಟಾಗಿತ್ತು.

ಈಶಾನ್ಯ ರಾಜ್ಯದವರು ಭಾರಿ ಸಂಖ್ಯೆಯಲ್ಲಿ ಆಗಮಿಸಿ ಗೊಂದಲ ಉಂಟಾಗಿದ್ದನ್ನು ಗಮನಿಸಿ ವೈದ್ಯಕೀಯ ಶಿಕ್ಷಣ ಸಚಿವರೇ ಖುದ್ದು ಧಾವಿಸಿ ಪರಿಸ್ಥಿತಿ ನಿಯಂತ್ರಿಸಿದ ಘಟನೆ ಶನಿವಾರ ಅರಮನೆ ಮೈದಾನದ ಬಳಿ ನಡೆಯಿತು.

ತಪ್ಪು ಮಾಹಿತಿಯಿಂದಾಗಿ ಮಣಿಪುರ, ಒಡಿಶಾ ರಾಜ್ಯಗಳ ಸಾವಿರಾರು ಮಂದಿ ಜಮಾಯಿಸಿದ್ದರಿಂದ ಈ ಗೊಂದಲ ಉಂಟಾಗಿತ್ತು. ಒಂದೂವರೆ ಸಾವಿರ ಮಂದಿಗೆ ಆಯಾ ರಾಜ್ಯಗಳಿಗೆ ಕಳುಹಿಸಲು ವ್ಯವಸ್ಥೆ ಮಾಡಿಕೊಂಡು ಸೇವಾಸಿಂಧು ಆ್ಯಪ್ ಮೂಲಕ ಮೊಬೈಲ್‍ಗಳಿಗೆ ಸಂದೇಶ ರವಾನಿಸಲಾಗಿತ್ತು. ಚಿಕ್ಕಬಳ್ಳಾಪುರ ಪ್ರವಾಸಕ್ಕೆ ಹೊರಟ್ಟಿದ್ದ ಸಚಿವರು ಭಾರಿದಟ್ಟಣೆ ಗಮನಿಸಿ ಸ್ಥಳಕ್ಕೆ ಧಾವಿಸಿ ಗೊಂದಲಕ್ಕೆ ಕಾರಣಗಳನ್ನು ಅಧಿಕಾರಿಗಳಿಂದ ಪಡೆದರು.

ತಕ್ಷಣವೇ ಮೊಬೈಲ್ ಮೂಲಕ ಮುಖ್ಯ ಕಾರ್ಯದರ್ಶಿ ಸಹಿತ ಹಿರಿಯ ಅಧಿಕಾರಿಗಳ ಜತೆ ಮಾತನಾಡಿ ಗೊಂದಲ ಬಗೆಹರಿಸಲು ಕ್ರಮಕೈಗೊಳ್ಳುವಂತೆ ಆದೇಶ ನೀಡಿದರು. ಈ ಸಂದರ್ಭದಲ್ಲಿ ಮೂರ್ಛೆರೋಗದಿಂದ ಬಳಲುತ್ತಿದ್ದ ಇರ್ಷಾದ್ ಎಂಬಾತ ಕುಸಿದು ಬಿದ್ದಾಗ ಆತನ ಬಳಿ ಧಾವಿಸಿದ, ವೈದ್ಯರೂ ಆಗಿರುವ ಸಚಿವ ಸುಧಾಕರ್ ಅವರು ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟರು.

ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಸರಕಾರದ ವೆಚ್ಚದಲ್ಲಿ ಪ್ರಯಾಣಕ್ಕೆ ವ್ಯವಸ್ಥೆ ಮಾಡಲಾಗುವುದು. ಸಿಎಂ ಅವರು ಅದಕ್ಕೆ ಬೇಕಾದ ಎಲ್ಲಾ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ನೀವು ನಿಮ್ಮ ಊರಿಗೆ ಹೋಗಲು ಹೆಚ್ಚುವರಿ ಬೋಗಿಗಳನ್ನು ಒದಗಿಸಲು ರೈಲ್ವೆ ಸಚಿವರಿಗೂ ಮನವಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕೆಪಿಸಿಸಿ ಅಧ್ಯಕ್ಷ ಭೇಟಿ

ತಮ್ಮ ಊರುಗಳಿಗೆ ವಾಪಸ್ಸಾಗಲು ನೋಂದಾವಣಿಗಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಜಮಾಯಿಸಿದ್ದ ಹೊರ ರಾಜ್ಯಗಳ ವಲಸಿಗರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶನಿವಾರ ಭೇಟಿ ಮಾಡಿ ಅವರ ಕುಂದುಕೊರತೆಗಳನ್ನು ಆಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News