ಮಂಗಳೂರು: ‘ವಿದ್ಯಾಮಿತ್ರ’ ಡಿಜಿ ಲರ್ನ್ ಸ್ಮಾರ್ಟ್ ಕ್ಲಾಸ್ ಆ್ಯಪ್‌ಗೆ ಚಾಲನೆ

Update: 2020-05-23 09:10 GMT

ಮಂಗಳೂರು, ಮೇ 23: ಮಂಗಳೂರು ಉತ್ತರ ಕ್ಷೇತ್ರ ವ್ಯಾಪ್ತಿಯ 15 ಸರಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ದಿ ಪಡಿಸಲಾದ ‘ವಿದ್ಯಾಮಿತ್ರ’ ಡಿಜಿಲರ್ನ್ ಸ್ಮಾರ್ಟ್ ಕ್ಲಾಸ್ ಆ್ಯಪ್ ಬಿಡುಗಡೆ ಇಂದು ನಡೆಯಿತು.

ಉತ್ತರ ಕ್ಷೇತ್ರದ ಶಸಕ ಡಾ.ವೈ.ಭರತ್ ಶೆಟ್ಟಿ ಹಾಗೂ ಬೆಂಗಳೂರು ಪಶ್ಚಿಮ ರೋಟರಿ ಕ್ಲಬ್ ಸಹಭಾಗಿತ್ವದಲ್ಲಿ ಆ್ಯಪ್ ಅಭಿವೃದ್ಧಿಪಡಿಸಲಾಗಿದ್ದು, ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಲಾಯಿತು. .

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿಡಿಯೋ ಕಾನ್ಫರೆನ್ಸ್ ಮೂಲಕ ನೂತನ ಆ್ಯಪ್ ಅನಾವರಣಗೊಳಿಸಿದರು. ಬಳಿಕ ಮಾತನಾಡಿದ ಅವರು, ಖಾಸಗಿ ಶಾಲೆಗಳ ಸ್ಪರ್ಧಾತ್ಮಕ ಚಟುವಟಿಕೆಗಳ ನಡುವೆ ಸರಕಾರಿ ಶಾಲೆ ಮಕ್ಕಳ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರ ಈ ಪ್ರಯತ್ನ ಇಡೀ ದೇಶಕ್ಕೆ ಮಾದರಿಯಾದುದು ಎಂದರು.

ಕೊರೋನ ಸಂಕಷ್ಟದಲ್ಲಿ ಯಾವಾಗ ಶಾಲೆ ಆರಂಭ ಮಾಡಬೇಕು ಎಂಬ ಪ್ರಶ್ನೆಗಿಂತ ಹೇಗೆ ಶಾಲೆ ಆರಂಭ ಮಾಡಬೇಕು ಎಂಬ ಪ್ರಶ್ನೆ ಮುಖ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ತಡವಾದರೂ ಸರಕಾರಿ ಶಾಲೆ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಈ ಹೊಸ ಪರಿಕಲ್ಪನೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ. ಈ ಆ್ಯಪ್ ಹಾಲಿ ಶಿಕ್ಷಣ ವ್ಯವಸ್ಥೆಗೆ ಪೂರಕವೇ ಹೊರತು ಪರ್ಯಾಯ ಅಲ್ಲ ಎಂದವರು ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ರಾಜ್ಯದಲ್ಲಿ ಸುಮಾರು 48 ಸಾವಿರ ಸರಕಾರಿ ಶಾಲೆಗಳಿವೆ. ಅವುಗಳಲ್ಲಿ ಒಂದು ಕೋಟಿಗೂ ಮಿಕ್ಕಿ ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. ಈ ಎಲ್ಲ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದು ಸರಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ಮಂಗಳೂರು ಉತ್ತರ ಶಾಸಕ ಡಾ.ವೈ.ಭರತ್ ಶೆಟ್ಟಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಪ್ರಯತ್ನ ರಾಜ್ಯದ ಇತರೆಲ್ಲ ಕ್ಷೇತ್ರಗಳ ವಿದ್ಯಾರ್ಥಿಗಳಿಗೂ ದೊರೆಯುವಂತಾಗಲಿ ಎಂದರು.

ಸಂಸದ ನಳಿನ್ ಕುಮಾರ್ ಕಟೀಲು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಡಿಜಿ ಲರ್ನ್ ಸ್ಮಾರ್ಟ್ ಕ್ಲಾಸ್‌ನ ಉಪಕರಣಗಳನ್ನು ಸಾಂಕೇತಿಕವಾಗಿ ಶಾಲಾ ಮುಖ್ಯಸ್ಥರಿಗೆ ಹಸ್ತಾಂತರಿಸಿದರು.

ಮೇಯರ್ ದಿವಾಕರ್ ಪಾಂಡೇಶ್ವರ್, ಉಪ ಮೇಯರ್ ವೇದಾವತಿ, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಮುಂತಾದವರು ಭಾಗವಹಿಸಿದ್ದರು.

ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ.ಭರತ್ ಶೆಟ್ಟಿ ಸ್ವಾಗತಿಸಿದರು. ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಧ್ಯಕ್ಷ ತಿಲಕ್‌ರಾಜ್ ವಂದಿಸಿದರು. ಹಿರಿಯ ಪತ್ರಕರ್ತ ಪಿ.ಬಿ.ಹರೀಶ್ ರೈ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News