ಇನ್ನೆರಡು ದಿನಗಳಲ್ಲಿ ಖಾಸಗಿ ಬಸ್ ಸಂಚಾರ ಆರಂಭ, ಪ್ರಯಾಣ ದರ ಹೆಚ್ಚಳಕ್ಕೆ ಅನುಮತಿ: ಸಾರಿಗೆ ಸಚಿವ ಸವದಿ
Update: 2020-05-23 11:53 GMT
ರಾಯಚೂರು, ಮೇ 23: ಖಾಸಗಿ ಬಸ್ಗಳ ಸಂಚಾರ ಇನ್ನೆರಡು ದಿನಗಳಲ್ಲಿ ಆರಂಭವಾಗಲಿದ್ದು, ಪ್ರಯಾಣದ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾಸಗಿ ಬಸ್ಗಳ ಮಾಲಕರು ಬಸ್ ಸಂಚಾರಕ್ಕೆ ಅನುಮತಿ ಕೇಳಿದ್ದಾರೆ. ಎರಡರಿಂದ ಮೂರು ದಿನಗಳಲ್ಲಿ ಸಂಚಾರ ಆರಂಭವಾಗಲಿದೆ. ಸುರಕ್ಷಿತ ಅಂತರ ಕಾಪಾಡಿಕೊಂಡು, ಪ್ರತಿ ಬಸ್ನಲ್ಲಿ 30 ಜನ ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅನುಮತಿ ನೀಡಲು ಸಿದ್ಧತೆ ನಡೆದಿದೆ ಎಂದು ಮಾಹಿತಿ ನೀಡಿದರು.
ಖಾಸಗಿ ಬಸ್ ಮಾಲಕರಿಗೆ ಕಡಿಮೆ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುವುದರಿಂದ ನಷ್ಟವಾಗುತ್ತದೆ ಎಂದು ಖಾಸಗಿ ಮಾಲಕರು ಮನವಿ ಮಾಡಿದ್ದಕ್ಕೆ ಪ್ರಯಾಣದ ದರವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.