ರಾಜ್ಯದಲ್ಲಿ ಒಂದೇ ದಿನ 93 ಮಂದಿಗೆ ಕೊರೋನ ಸೋಂಕು ದೃಢ: ಸಾವಿನ ಸಂಖ್ಯೆ 44ಕ್ಕೆ ಏರಿಕೆ

Update: 2020-05-25 12:21 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 24: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 93 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2182ಕ್ಕೆ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನದಿಂದ ತಲಾ ಒಂದು ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 44ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ರವಿವಾರ ಸಂಜೆ 5 ಗಂಟೆಯಿಂದ ಸೋಮವಾರ ಸಂಜೆ 5 ಗಂಟೆವರೆಗೆ 93 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 55 ವರ್ಷದ ಮಹಿಳೆಯೊಬ್ಬರು ಮೇ.24 ರಂದು ಸಾವನ್ನಪ್ಪಿದ್ದಾರೆ. ಜೊತೆಗೆ, ದಕ್ಷಿಣ ಕನ್ನಡ ಜಿಲ್ಲೆಯ 43 ವರ್ಷದ ವ್ಯಕ್ತಿಯೊಬ್ಬರು ಮೇ.23 ರಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇವರ ಕೊರೋನ ವರದಿ ಇಂದು ಪಾಸಿಟಿವ್ ಬಂದಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಉಡುಪಿಯಲ್ಲಿ 32, ಯಾದಗಿರಿ 15, ಕಲಬುರಗಿ 16, ಬೆಂಗಳೂರು ನಗರ 8, ದಕ್ಷಿಣ ಕನ್ನಡ 4, ಧಾರವಾಡ 4, ಬಳ್ಳಾರಿ 3, ಮಂಡ್ಯ 2, ಕೋಲಾರ 2 ಹಾಗೂ ಬೆಳಗಾವಿ, ಬೀದರ್, ವಿಜಯಪುರ, ಉತ್ತರ ಕನ್ನಡ, ಹಾಸನ, ರಾಮನಗರ ತುಮಕೂರಿನಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 2,182 ಕೊರೋನ ಸೋಂಕಿತರ ಪೈಕಿ 705 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 51 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 44 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1431 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News