‘ಉನ್ನತ ಶಿಕ್ಷಣ’: ಆನ್‍ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು: ಬಿ.ಎಸ್.ಯಡಿಯೂರಪ್ಪ

Update: 2020-05-26 18:21 GMT

ಬೆಂಗಳೂರು, ಮೇ 26: ಆನ್‍ಲೈನ್ ತರಗತಿಗಳು ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ ಕಡಿಮೆ ವೆಚ್ಚದ್ದಾಗಿದ್ದು, ಈ ವ್ಯವಸ್ಥೆಯನ್ನು ಪಿ.ಯು ಮಟ್ಟದಿಂದಲೆ ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಹಿನ್ನೆಲೆಯಲ್ಲಿ ಆನ್ ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೆ ಸಮಸ್ಯೆಯಾಗದಂತೆ ಎಚ್ಚರವಹಿಸುವಂತೆ ತಿಳಿಸಿದರು.

ಲಾಕ್‍ಡೌನ್ ಪೂರ್ವದಲ್ಲಿ ಶೇ.79 ರಷ್ಟು ಪಠ್ಯಕ್ರಮ ಪೂರ್ಣಗೊಂಡಿದ್ದು, ಮೇ 31ರೊಳಗೆ ಇನ್ನುಳಿದ ಶೇ.21ರಷ್ಟು ಪಠ್ಯಕ್ರಮಗಳನ್ನು ಆನ್‍ಲೈನ್ ಬೋಧನೆ ಮೂಲಕ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ವೆಬ್‍ಎಕ್ಸ್, ಸ್ಕೈಪ್ ಹಾಗೂ ಇತರೆ ಆನ್‍ಲೈನ್ ವೇದಿಕೆಗಳ ಮೂಲಕ 30 ಸಾವಿರ ಆನ್‍ಲೈನ್ ತರಗತಿಗಳನ್ನು ನಡೆಸಲಾಗಿದೆ. ವಾಟ್ಸ್‍ಆಪ್ ಮತ್ತು ಟೆಲಿಗ್ರಾಂ ಮೂಲಕ ಶೇ.85 ರಷ್ಟು ವಿದ್ಯಾಥಿಗಳಿಗೆ ಇ-ನೋಟ್ಸ್, ಪಿಪಿಟಿ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ವಿತರಣೆ ಮಾಡಲಾಗಿದೆ. ಜ್ಞಾನನಿಧಿ ಯು-ಟ್ಯೂಬ್ ಚಾನೆಲ್ ಮೂಲಕ 65 ವಿಷಯಗಳ 7074 ಬೋಧನಾ ವಿಡಿಯೋ ಅಪೆÇ್ಲೀಡ್ ಮಾಡಲಾಗಿದ್ದು, 5 ಲಕ್ಷ ವೀಕ್ಷಣೆಯಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಗೆಟ್ ಸಿಇಟಿ ಗೋ ಮೂಲಕ 2 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪಿಸಲಾಗಿದ್ದು, 13,600 ವಿದ್ಯಾರ್ಥಿಗಳು  ಯೂ ಟ್ಯೂಬ್ ಚಂದಾದಾರರಾಗಿದ್ದಾರೆ. 90 ಸಾವಿರ ಲಾಗಿನ್ ಸೃಜನೆ ಆಗಿದೆ. ಸದರಿ ಪೋರ್ಟಲ್‍ಗೆ ನಾಲ್ಕು ಸ್ಟಾರ್‍ಗಳು ದೊರೆತಿದ್ದು, ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ. 10 ಸಾವಿರಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದರು.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರಕಾರಿ ಕಾಲೇಜುಗಳಲ್ಲಿ ಉಚಿತ ಲ್ಯಾಪ್ ಟಾಪ್ ವಿತರಿಸಲಾಗಿರುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕಲಿಕೆ ಅನುಷ್ಟಾನಕ್ಕೆ ಬರಲಿದೆ. ಕೋವಿಡ್-19ರ ಪ್ರರಿಸ್ಥಿತಿಯಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚಿನ ಮಹತ್ವ ಒದಗಿಸಲಾಗಿದ್ದು, ಮೈತ್ರಿ ಸಹಾಯವಾಣಿ ಪೋರ್ಟಲ್‍ನಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಪ್ರಯೋಜನಕಾರಿಯಾಗಿದೆ ಎಂದು ಅವರು ತಿಳಿಸಿದರು.

11 ಕೋಟಿ ರೂ.ಗಳ ವೆಚ್ಚದಲ್ಲಿ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಮಗ್ರ ನಿರ್ವಹಣಾ ವ್ಯವಸ್ಥೆಯನ್ನು ಇ-ಆಡಳಿತ ಇಲಾಖೆಯ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ ನಾರಾಯಣ್ ತಿಳಿಸಿದರು.

ಯುಜಿಸಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳನ್ನು ಜೂನ್ 15ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಬಾರಿ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು. ರಾಜ್ಯದ 13 ವಿಧಾನಸಭಾ ಕ್ಷೇತ್ರಗಳಲ್ಲಿ ಸರಕಾರಿ ಕಾಲೇಜುಗಳು ಇಲ್ಲದೇ ಇರುವುದನ್ನು ಗುರುತಿಸಿದ್ದು, ಹೆಚ್ಚುವರಿ ಕಾಲೇಜುಗಳು ಇರುವ ಕ್ಷೇತ್ರಗಳಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನು ಈ ಭಾಗಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದು ಅವರು ಹೇಳಿದರು.

ಬೆಂಗಳೂರಿನ ಬಾಬಾ ಸಾಹೇಬ್ ಸ್ಕೂಲ್ ಆಫ್ ಎಕಾಮಿಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆ ಲಾಕ್‍ಡೌನ್ ನಂತರದ ದಿನಗಳಲ್ಲಿ ಪ್ರಧಾನ ಮಂತ್ರಿಗಳನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.

ಯುವ ಸಬಲೀಕರಣ ಕೇಂದ್ರಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪೋಟಲ್ ಮೂಲಕ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕೇಂದ್ರಕ್ಕೆ ಪ್ರೌಢಶಾಲಾ ಮಟ್ಟದಿಂದಲೆ ವಿದ್ಯಾರ್ಥಿಗಳ ನೋಂದಣಿಯನ್ನು ಪ್ರಾರಂಭಿಸಲಾಗುವುದು. ಶಾಲೆ, ಕಾಲೇಜಿನಿಂದ ಹೊರಗುಳಿಯುವ ವಿದ್ಯಾರ್ಥಿಗಳನ್ನು ಈ ಮೂಲಕ ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಕೈಗಾರಿಕೆಗಳನ್ನು ಇದರೊಂದಿಗೆ ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಇಂಟರ್ರ್‍ಶಿಪ್ ಹಾಗೂ ಉದ್ಯೋಗ ದೊರಕಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್.ಪ್ರಸಾದ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ  ಪ್ರದೀಪ್, ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News