ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರು ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ: ಸಿದ್ದರಾಮಯ್ಯ

Update: 2020-05-27 13:38 GMT

ಬೆಂಗಳೂರು, ಮೇ 27: ಯಲಹಂಕ ಮೇಲ್ಸೇತುವೆಗೆ ವಿ.ಡಿ.ಸಾವರ್ಕರ್ ಹೆಸರಿಡಲು ಮುಂದಾಗಿರುವ ರಾಜ್ಯ ಸರಕಾರದ ನಿರ್ಧಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕೂಡಲೇ ಈ ತೀರ್ಮಾನವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ, ಯಲಹಂಕ ಮೇಲ್ಸೇತುವೆಗೆ ವಿ.ಡಿ.ಸಾವರ್ಕರ್ ಹೆಸರಿಡುವ ರಾಜ್ಯ ಸರಕಾರದ ನಿರ್ಧಾರ ಈ ಮಣ್ಣಿನ ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಡಿದ ಅವಮಾನ. ತಕ್ಷಣ ಈ ನಿರ್ಧಾರವನ್ನು ಕೈಬಿಟ್ಟು ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರೊಬ್ಬರ ಹೆಸರಿಡಬೇಕು' ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ತೆರೆ ಹಿಂದಿನ ಸೂತ್ರದಾರರೇ ಹೊರತು, ಚುನಾಯಿತ ಸರಕಾರ ಅಲ್ಲ ಎನ್ನುವುದಕ್ಕೆ ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ಹೆಸರಿಡುವ ಅವಸರದ ನಿರ್ಧಾರವೇ ಪುರಾವೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನೀವು ವಿಪಕ್ಷಗಳ ಸಹಕಾರ ಬಯಸುತ್ತಿರುವುದು ಇಂತಹ ಜನವಿರೋಧಿ ನಿರ್ಧಾರಗಳಿಗಾಗಿಯೇ?' ಎಂದು ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದ್ದಾರೆ.

"ಯಲಹಂಕ ಮೇಲ್ಸೇತುವೆಗೆ ಸಾವರ್ಕರ್ ನಾಮಕರಣ ಮಾಡಲು ಮುಂದಾಗಿರುವುದು ರಾಜ್ಯ ಸರಕಾರದ ನಿರ್ಧಾರ ನಾಡಿನ ಅಭ್ಯುದಯಕ್ಕೆ ಹೋರಾಟ ಮಾಡಿದವರಿಗೆ ಮಾಡುತ್ತಿರುವ ಅಪಮಾನ. ಇದು ರಾಜ್ಯ ಸರಕಾರಕ್ಕೆ ಶೋಭೆ ತರದು'' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಟೀಕಿಸಿದ್ದಾರೆ.

ಸ್ವಾತಂತ್ರ್ಯ ಪೂರ್ವ ಮತ್ತು ನಂತರ ನಾಡಿನ ಅಭಿವೃದ್ಧಿಗೆ ಮತ್ತು ಹಿತಕ್ಕಾಗಿ ದುಡಿದ ಹಲವು ಮಹನೀಯರಿದ್ದಾರೆ. ಅವರ ಹೆಸರನ್ನು ಈ ಮೇಲ್ಸೇತುವೆಗೆ ಇಡಬಹುದಿತ್ತು. ರಾಜ್ಯದ ಹೋರಾಟಗಾರರ ಹೆಸರನ್ನು ಬೇರೆ ರಾಜ್ಯಗಳಲ್ಲಿ ನಾಮಕರಣ ಮಾಡುವುದುಂಟೆ? ರಾಜ್ಯ ಸರಕಾರ ಈ ನಿರ್ಧಾರದಿಂದ ಹಿಂದೆ ಸರಿಯುವಂತೆ ನಾಡಿನ ಜನತೆ ಪರವಾಗಿ ಆಗ್ರಹಿಸುತ್ತೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜವಾಹರಲಾಲ್ ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸಂಜಯ್ ಗಾಂಧಿ ಹೆಸರಿನಲ್ಲಿ ಕಾಲೇಜು, ಬಡಾವಣೆಗಳು, ಆಸ್ಪತ್ರೆಗಳು ಮತ್ತು ಕ್ಯಾಂಟೀನ್ ನಾಮಕರಣ ಮಾಡುವಾಗ ಮಣ್ಣಿನ ಮಕ್ಕಳು ನೆನಪಿಗೆ ಬರಲಿಲ್ಲವೇ ಸಿದ್ದರಾಮಯ್ಯನವರೇ? ಅಪ್ಪಟ ದೇಶಭಕ್ತ ವೀರ ಸಾವರ್ಕರ್ ಹೆಸರಿನಲ್ಲಿ ಒಂದು ಮೇಲ್ಸೇತುವೆಯ ನಾಮಕರಣ ಮಾಡುವುದು ನಿಮಗೆ ಸಹಿಸಲು ಆಗುತ್ತಿಲ್ಲವೇ?'

-ಸಿ.ಟಿ.ರವಿ ಕನ್ನಡ ಮತ್ತು ಸಂಸ್ಕೃತಿ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News