ಅಕ್ರಮ ಮರಳುಗಾರಿಕೆ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ
ಉಡುಪಿ, ಮೇ 28: ಉಡುಪಿ ಜಿಲ್ಲೆಯಾದ್ಯಂತ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಯಾವುದೇ ಪರವಾನಿಗೆಯನ್ನು ಪಡೆಯದೆ ರಾತ್ರಿ ಹಗಲೆನ್ನದೇ ಅವೈಜ್ಞಾನಿಕವಾಗಿ ಪಂಪುಗಳನ್ನು ಬಳಸಿ ಮರಳುಗಾರಿಕೆ ನಡೆಸಲಾ ಗುತ್ತಿದೆ. ಈ ಬಗ್ಗೆ ದೂರು ನೀಡಿದರೂ ಕ್ರಮಕೈಗೊಳ್ಳದ ಹಾಗೂ ಅಕ್ರಮ ಗಣಿಗಾರಿಕೆಗೆ ಸಹಕರಿಸುತ್ತಿರುವ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕೆಲ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ಉಡುಪಿ ಜಿಲ್ಲಾ ಸಮಿತಿ ಮುಖ್ಯಮಂತ್ರಿಗ ಳಿಗೆ ಮನವಿ ಅರ್ಪಿಸಿ ಒತ್ತಾಯಿಸಿದೆ.
ಈ ಹಿಂದೆ 2017-18ನೇ ಸಾಲಿನಲ್ಲಿ ಸರಕಾರಕ್ಕೆ, ಇಲಾಖಾ ಹಿರಿಯ ಅಧಿಕಾರಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಮೊನ್ನೆ ಮೇ 16ರಂದು ಹಿರಿಯಡ್ಕದ ಬಳಿ ಸ್ವರ್ಣಾ ನದಿಯಲ್ಲಿ ಅಕ್ರಮ ಮರಳು ಸಂಗ್ರಹಿಸುತಿದ್ದಾಗ ಲೋಕಾಯುಕ್ತ ದಾಳಿ ನಡೆಸಿ ಅಕ್ರಮ ಮರಳು ಸೇರಿದಂತೆ ವಿವಿಧ ಸೊತ್ತುಗಳನ್ನು ವಶಪಡಿಸಿಕೊಂಡಿದೆ.
ಉಡುಪಿಯ ಹಿರಿಯ ಭೂವಿಜ್ಞಾನಿ ರಾನ್ಜಿ ನಾಯ್ಕ ಅವರಿಗೆ ಇಲಾಖೆಯ ಇಬ್ಬರು ಅಧಿಕಾರಿಗಳು ತಪ್ಪು ಮಾಹಿಇತ ನೀಡಿ ಅಕ್ರಮ ಮರಳುಗಾರಿಕೆ ನಡೆಸಲು ಮೂಲ ಕಾರಣರಾಗಿದ್ದಾರೆ. ಅಲ್ಲದೇ ಇವರು ಕಲ್ಲುಕೋರೆಗಳಲ್ಲೂ ಅಕ್ರಮ ನಡೆಯಲು ಕಾರಣರಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಜಿಲ್ಲೆಯಲ್ಲಿ ಅಕ್ರಮಗಳಿಗೆ ಕಾರಣರಾದ ಇಬ್ಬರು ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಎಲ್ಲಾ ದಲಿತ ಸಂಘಟನೆಗಳ ಪರವಾಗಿ ಮನವಿ ಮಾಡುತ್ತೇವೆ. ಅಲ್ಲದೇ ಈ ಅಕ್ರಮಗಳ ಬಗ್ಗೆ ಲೋಕಾಯುಕ್ತರಿಂದ ನ್ಯಾಯಯುತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗು ವಂತೆ ನೋಡಿಕೊಳ್ಳಬೇಕೆಂದು ಮನವಿಯಲ್ಲಿ ಮುಖ್ಯಮಂತ್ರಿಗಳನ್ನು ಆಗ್ರಹಿಸಲಾಗಿದೆ.