ಅನರ್ಹ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸಬಾರದು: ಸಿದ್ದರಾಮಯ್ಯ

Update: 2020-05-28 14:24 GMT

ಬೆಂಗಳೂರು, ಮೇ 28: `ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆ ಸ್ಪೀಕರ್ ಅವರಿಗೆ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ಮಾಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ನಿಯಮಗಳ ಮರು ಪರಿಶೀಲನೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆದಿದ್ದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ಪ್ರಜಾಪ್ರಭುತ್ವದ ಬೇರುಗಳಿಗೆ ಪಕ್ಷಾಂತರ ಎಂಬುದು ಮಾರಕ. ಆ ಬೇರುಗಳು ಗಟ್ಟಿಯಾಗಿ ಇರಬೇಕಾದರೆ ಪಕ್ಷಾಂತರವೆಂಬ ಪಿಡುಗು ನಿರ್ಮೂಲನೆ ಆಗಬೇಕು ಎಂದು ಹೇಳಿದರು.

ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಪಕ್ಷಾಂತರ ಮಾಡುವ ಶಾಸಕರನ್ನು ಅನರ್ಹಗೊಳಿಸಿ ಸ್ಪೀಕರ್ ನೀಡುವ ಆದೇಶದ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ. ಅದು ಸ್ಪೀಕರ್ ಅವರಿಗೆ ಇರುವ ಅಧಿಕಾರದ ಮೇಲೆ ಗದಾ ಪ್ರಹಾರ ಮಾಡಿದಂತೆ. ಸ್ಪೀಕರ್ ಅವರಿಗೆ ಇರುವ ಅಧಿಕಾರ ವನ್ನು ಕಸಿದು ಬೇರೆ ಸಂಸ್ಥೆ ಅಥವಾ ವ್ಯಕ್ತಿಗೆ ನೀಡಿದರೆ ನ್ಯಾಯ ಸಿಗುವ ವಿಶ್ವಾಸ ಇಲ್ಲ, ಇದು ಸಂವಿಧಾನಬಾಹಿರವೂ ಆಗುತ್ತದೆ ಎಂದು ಪ್ರತಿಪಾದಿಸಿದರು.

ಆದರೆ, ಅನರ್ಹಗೊಳಿಸುವಂತೆ ಯಾರಾದರೂ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಕಾಲಮಿತಿಯೊಳಗೆ ಇತ್ಯರ್ಥಪಡಿಸುವಂತೆ ನೋಡಿಕೊಳ್ಳ ಬೇಕು. ಎರಡು ಮೂರು ತಿಂಗಳೊಳಗೆ ಅರ್ಜಿ ವಿಲೇವಾರಿ ಆಗುವಂತೆ ನಿಯಮಾವಳಿಗಳಿಗೆ ತಿದ್ದುಪಡಿ ತರಬೇಕಾಗಿದೆ ಎಂದ ಅವರು, ಪಕ್ಷಾಂತರದ ಮೂಲಕ ಚುನಾಯಿತ ಸರಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದು ಮತದಾರರಿಗೆ ಮಾಡುವ ದ್ರೋಹ. ಹೀಗಾಗಿ ಅನರ್ಹ ರಾದವರು ಹತ್ತು ವರ್ಷ, ಅಂದರೆ ಎರಡು ಅವಧಿಗೆ ಚುನಾವಣೆಗೆ ಸ್ಪರ್ಧೆ ಮಾಡದಂತೆ, ಜೊತೆಗೆ ಯಾವುದೇ ರೀತಿಯಲ್ಲೂ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕಿದೆ. ಅನರ್ಹರಾದವರು ಮರು ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾದರೆ ನೈತಿಕತೆ ಎಲ್ಲಿ ಉಳಿಯುತ್ತದೆ. ಹತ್ತು ವರ್ಷಗಳ ಕಾಲ ಅಂಥವರು ಸದನವನ್ನೆ ಪ್ರವೇಶ ಮಾಡಬಾರದು. ನಿಯಮಾವಳಿಗಳಲ್ಲಿ ಬದಲಾವಣೆ ತರುವುದರ ಜೊತೆಗೆ ಚುನಾವಣಾ ಪ್ರಕ್ರಿಯೆಗಳಲ್ಲಿಯೂ ಸುಧಾರಣೆ ತರಬೇಕಿದೆ. ಇಲ್ಲದಿದ್ದರೆ ಪಕ್ಷಾಂತರ ಪಿಡುಗನ್ನು ನಿರ್ಮೂಲನೆ ಮಾಡುವುದು ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News