ರಾಜ್ಯದಲ್ಲಿ ಕೊರೋನ ಕೋಲಾಹಲ: ಒಂದೇ ದಿನ 248 ಮಂದಿಗೆ ಸೋಂಕು ದೃಢ, ಮಹಿಳೆ ಸಾವು

Update: 2020-05-29 13:27 GMT

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 248 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2781ಕ್ಕೆ ಏರಿಕೆಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೋನದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 48 ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಸಂಜೆ 5 ಗಂಟೆವರೆಗೆ 248 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

ಮೇ.24ರಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಚಿಕ್ಕಬಳ್ಳಾಪುರ ಜಿಲ್ಲೆಯ 50 ವರ್ಷದ ಮಹಿಳೆಯೊಬ್ಬರು ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 48ಕ್ಕೆ ಏರಿಕೆಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ರಾಯಚೂರು 62, ಕಲಬುರಗಿ 61, ಯಾದಗಿರಿ 60, ಉಡುಪಿ 15, ಬೆಂಗಳೂರು ನಗರ 12, ಬಳ್ಳಾರಿ 9, ಚಿಕ್ಕಬಳ್ಳಾಪುರ 5, ವಿಜಯಪುರ, ದಾವಣಗೆರೆ, ಹಾಸನದಲ್ಲಿ ತಲಾ 4, ತುಮಕೂರು, ಮಂಡ್ಯ, ಚಿಕ್ಕಮಗಳೂರು ಮತ್ತು ಮೈಸೂರಿನಲ್ಲಿ ತಲಾ 2, ಬೆಂಗಳೂರು ಗ್ರಾಮೀಣ, ಶಿವಮೊಗ್ಗ, ಚಿತ್ರದುರ್ಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತಲಾ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 2,781 ಕೊರೋನ ಸೋಂಕಿತರ ಪೈಕಿ 894 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 60 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 48 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1837 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News