ಕಲಬುರಗಿಗೆ ಹೊರ ರಾಜ್ಯಗಳಿಂದ 35,723 ವಲಸಿಗರ ಆಗಮನ: ಡಿಸಿಎಂ ಕಾರಜೋಳ

Update: 2020-05-29 17:22 GMT

ಬೆಂಗಳೂರು, ಮೇ 29: ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ 35,723 ಜನರು ಬಂದಿದ್ದು, ಅವರನ್ನು 547 ಕೇಂದ್ರಗಳಲ್ಲಿ ಕ್ವಾರೆಂಟೈನಲ್ಲಿಡಲಾಗಿದ್ದು, ಅವರಿಗೆ ಅಗತ್ಯ ಸೌಕರ್ಯಗಳನ್ನು ಒದಗಿಸಬೇಕು. ಕೊರೋನ ನಿಯಂತ್ರಣಕ್ಕಾಗಿ ಸರಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚಿಸಿದರು.

ಶುಕ್ರವಾರ ವಿಕಾಸಸೌಧದಲ್ಲಿ ಕಲಬುರಗಿ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಕಲಬುರಗಿ ಜಿಲ್ಲೆಗೆ ಮಹಾರಾಷ್ಟ್ರ, ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ 35,723 ವಲಸಿಗರು ಆಗಮಿಸಿದ್ದು, 13,701 ಮಾದರಿಗಳನ್ನು ಸಂಗ್ರಹಿಸಲಾಗಿದೆ ಎಂದರು.

ಕಲಬುರಗಿಯಲ್ಲಿ ಈವರೆಗೆ 20,743 ಕೋವಿಡ್-19 ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ 4,34,438 ಪ್ರಯಾಣಿಕರ ಸ್ಕ್ರೀನಿಂಗ್ ಮಾಡಲಾಗಿದೆ. ಅಂತರ್‍ರಾಜ್ಯ ಚೆಕ್‍ ಪೋಸ್ಟ್ ಗಳಲ್ಲಿ 35,723 ಜನರನ್ನು ಸ್ಕ್ರೀನಿಂಗ್ ಮಾಡಲಾಗಿದೆ. 174 ಜನರನ್ನು ಐಸೋಲೇಶನ್‍ನಲ್ಲಿಡಲಾಗಿದೆ ಎಂದು ಅವರು ಹೇಳಿದರು.

ಮಹಾರಾಷ್ಟ್ರ ಹಾಗೂ ಆಂಧ್ರಪ್ರದೇಶದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ವಲಸಿಗರು ಬರುವ ನಿರೀಕ್ಷೆ ಇದ್ದು, ತಪಾಸಣೆ ನಡೆಸದೆ ಯಾವುದೆ ಕಾರಣಕ್ಕೂ ಹೊರ ರಾಜ್ಯಗಳಿಂದ ಬರುವವರನ್ನು ಜಿಲ್ಲೆಗೆ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಗೋವಿಂದ ಕಾರಜೋಳ ಸೂಚನೆ ನೀಡಿದರು.

ಜೇವರ್ಗಿಯಲ್ಲಿ ಹೆಚ್ಚು ಜನರು ಭೀಮಾ ನದಿ ತೀರದ ಮೂಲಕ ಜಿಲ್ಲೆಗೆ ಆಗಮಿಸುತ್ತಿರುವ ಮಾಹಿತಿ ಇದೆ. ತಪಾಸಣೆಗೊಳಗಾಗದೆ ನೇರವಾಗಿ ಅವರ ಊರುಗಳಿಗೆ ತೆರಳಿ, ಇತರರಿಗೆ ಹರಡದಂತೆ ಮುಂಜಾಗ್ರತೆ ವಹಿಸಬೇಕು. ಅನಧಿಕೃತವಾಗಿ ಜಿಲ್ಲೆಗೆ ಪ್ರವೇಶಿಸಿ ತಿರುಗಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲಿಸಿ, ಸರಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಡಳಿತ ಹಾಗೂ ಪೊಲೀಸರು ಹೆಚ್ಚು ನಿಗಾವಹಿಸಬೇಕು ಎಂದು ಅವರು ಹೇಳಿದರು.

ಯಾವುದೆ ನಿರಾಶ್ರಿತರು, ವಲಸಿಗರು ಹೊರ ಜಿಲ್ಲೆಗಳಿಂದ ಬಂದು ಕ್ವಾರಂಟೈನ್‍ನಲ್ಲಿರುವವರು ಹಸಿವಿನಿಂದ ಬಳಲಬಾರದು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅಪೇಕ್ಷೆ ಇದಾಗಿದ್ದು, ಈ ಕುರಿತು ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು. ಆಹಾರ ಸಾಮಗ್ರಿಗಳಲ್ಲಿ ದುರುಪಯೋಗವಾಗುತ್ತಿರುವ ಬಗ್ಗೆ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಿ ಪ್ರಕರಣ ದಾಖಲಿಸಬೇಕು ಎಂದು ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚಿಸಿದರು.

ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಅಭಾವ ಇರುವ ಸಾಧ್ಯತೆ ಇದೆ. ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಉದ್ಯೋಗ ಬಯಸುವವರಿಗೆ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಒದಗಿಸಬೇಕು. ಪಟ್ಟಣ ಹಾಗೂ ನಗರ ಪ್ರದೇಶಗಳಲ್ಲಿ ಸ್ಪಚ್ಛತೆಯನ್ನು ಕಾಪಾಡಬೇಕು ಎಂದು ಅವರು ಹೇಳಿದರು.

ನಗರ ಪ್ರದೇಶಗಳಲ್ಲೂ ವಿವಿಧ ಇಲಾಖೆಗಳ ಮೂಲಕ ಉದ್ಯೋಗ ಒದಗಿಸಲು ಕ್ರಮ ಕೈಗೊಳ್ಳಬೇಕು. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್-19ರ ಹಿನ್ನೆಲೆಯಲ್ಲಿ ಘೋಷಿಸಿದ ಎಲ್ಲ ಪರಿಹಾರ ಯೋಜನೆಗಳು ತ್ವರಿತವಾಗಿ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಫಲಾನುಭವಿಗಳ ಖಾತೆ ಪರಿಹಾರ ಧನ ಜಮಾ ಆಗುವಂತೆ ಮೇಲುಸ್ತುವಾರಿ ವಹಿಸಬೇಕು. ಸಾಮಾಜಿಕ ಜಾಲಾತಾಣದಲ್ಲಿ ಕೊರೋನ ವಿಷಯದಲ್ಲಿ ತಪ್ಪು ಸಂದೇಶಗಳು ಹರಡುತ್ತಿರುವುದು ಕಂಡುಬರುತ್ತಿವೆ. ತಪ್ಪು ಸಂದೇಶಗಳನ್ನು ರವಾನೆ ಮಾಡುವ ಸೋಷಿಯಲ್ ಮಿಡಿಯಾ ಖಾತೆದಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಗೋವಿಂದ ಕಾರಜೋಳ ಸೂಚಿಸಿದರು.

ಈಗಾಗಲೇ ಮುಂಗಾರು ಹಂಗಾಮು ಆರಂಭವಾಗಿರುವುದರಿಂದ ರೈತರಿಗೆ ಭಿತ್ತನೆ ಬೀಜ ಹಾಗೂ ರಸಗೊಬ್ಬರದ ಕೊರತೆ ಆಗದಂತೆ ನೋಡಿಕೊಳ್ಳಬೇಕು. ಕಳಪೆ ಗುಣಮಟ್ಟದ ಬಿತ್ತನೆ ಬೀಜ, ನಕಲಿ ಕಂಪನಿಗಳ ರಸಗೊಬ್ಬರ ಪೂರೈಕೆಯಾಗಿರುವುದು ತಿಳಿದುಬಂದಿದ್ದು, ಈ ಬಗ್ಗೆ ತನಿಖೆ ಕೈಗೊಂಡು ಪ್ರಕರಣವನ್ನು ದಾಖಲಿಬೇಕು ಎಂದು ಅವರು ನಿರ್ದೇಶನ ನೀಡಿದರು.

ಈ ವೇಳೆ ಕಲುಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕಪಿಲ್ ಮೋಹನ್, ಡಿಸಿಎಂ ಆಪ್ತಕಾರ್ಯದರ್ಶಿ ವಿ.ಶ್ರೀನಿವಾಸ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News