ರಾಜ್ಯದಲ್ಲಿ ಕೊರೋನ ಸೋಂಕಿಗೆ ಮತ್ತೊಂದು ಬಲಿ: ಒಂದೇ ದಿನ 141 ಮಂದಿಗೆ ಸೋಂಕು ದೃಢ

Update: 2020-05-30 12:00 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಒಂದೇ ದಿನ ಮತ್ತೆ 141 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 2,922ಕ್ಕೆ ಏರಿಕೆಯಾಗಿದೆ. ಬೀದರ್ ಜಿಲ್ಲೆಯಲ್ಲಿ ಕೊರೋನದಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 49ಕ್ಕೆ ಏರಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇಂದು ಸಂಜೆ ಬಿಡುಗಡೆಗೊಳಿಸಿದ ಬುಲೆಟಿನ್ ನಲ್ಲಿ ಶುಕ್ರವಾರ ಸಂಜೆ 5 ಗಂಟೆಯಿಂದ ಶನಿವಾರ ಸಂಜೆ 5 ಗಂಟೆವರೆಗೆ 141 ಕೋವಿಡ್ ಪ್ರಕರಣಗಳು ಪಾಸಿಟಿವ್ ಬಂದಿರುವುದಾಗಿ ಮಾಹಿತಿ ನೀಡಲಾಗಿದೆ.

8 ವರ್ಷಗಳಿಂದ ಪಾರ್ಶವಾಯು ಪೀಡಿತರಾಗಿದ್ದ ಬೀದರ್ ಜಿಲ್ಲೆಯ 47 ವರ್ಷದ ಮಹಿಳೆಯೊಬ್ಬರು ಮೇ.28 ರಂದು ಜಿಲ್ಲೆಯ ನಿಗಧಿತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇವರ ಕೊರೋನ ವರದಿ ಪಾಸಿಟಿವ್ ಬಂದಿದೆ. ಈ ಮೂಲಕ ಕೊರೋನದಿಂದ ಸಾವನ್ನಪ್ಪಿದವರ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ಸೋಂಕು ಖಚಿತಗೊಂಡ ಪ್ರಕರಣಗಳ ಬೆಂಗಳೂರು ನಗರ 33, ಯಾದಗಿರಿ 18, ದಕ್ಷಿಣ ಕನ್ನಡ 14, ಉಡುಪಿ 13, ಹಾಸನ 13, ವಿಜಯಪುರ 11, ಬೀದರ್ 10, ಶಿವಮೊಗ್ಗ 6, ದಾವಣಗೆರೆ ಮತ್ತು ಹಾವೇರಿಯಲ್ಲಿ ತಲಾ 4, ಕೋಲಾರ 3, ಕಲಬುರಗಿ, ಮೈಸೂರು, ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ 2, ಚಿತ್ರದುರ್ಗ, ತುಮಕೂರು, ಬೆಳಗಾವಿ ಮತ್ತು ಬೆಂಗಳೂರು ಗ್ರಾಮೀಣ ಜಿಲ್ಲೆಯಲ್ಲಿ ತಲಾ ಒಂದೊಂದು ಪ್ರಕರಣಗಳು ಪಾಸಿಟಿವ್ ಬಂದಿದೆ.

ಒಟ್ಟಾರೆ ರಾಜ್ಯದಲ್ಲಿ 2,922 ಕೊರೋನ ಸೋಂಕಿತರ ಪೈಕಿ 997 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 103 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 49 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 1874 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News