ಅಮೆರಿಕಾ-ಕೊಲ್ಲಿ ರಾಷ್ಟ್ರಗಳಲ್ಲಿರುವ ಕನ್ನಡಿಗರ ಸಮಸ್ಯೆ ಬಗೆಹರಿಸಲು ಸಿದ್ದರಾಮಯ್ಯ ಮನವಿ

Update: 2020-05-31 16:21 GMT

ಬೆಂಗಳೂರು, ಮೇ 31: 'ಯುರೋಪ್, ಅಮೆರಿಕಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ತಾಯ್ನಾಡಿಗೆ ಮರಳುವ ವೇಳೆ ಎದುರಾಗಿರುವ ವಿವಿಧ ಸಮಸ್ಯೆಗಳನ್ನು ಬಗೆಹರಿಸಬೇಕು' ಎಂದು ಕೋರಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ, ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಯುರೋಪ್, ಅಮೆರಿಕಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಆ ಪೈಕಿ ಬಹುಪಾಲು ಜನರು ವಿಜ್ಞಾನಿಗಳು, ವೈದ್ಯರು, ಇಂಜಿನಿಯರ್ ಗಳು, ತಂತ್ರಜ್ಞರು ಮತ್ತು ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವವರು ಇದ್ದಾರೆ. ಇವರೆಲ್ಲ ತಾಯ್ನಾಡಿಗೆ ಹಿಂದಿರುಗಲು ಹಲವು ತೊಡಕುಗಳಿವೆ' ಎಂದು ಸಿದ್ದರಾಮಯ್ಯ ಗಮನ ಸೆಳೆದಿದ್ದಾರೆ.

ಅಮೆರಿಕಾ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ರಾಜ್ಯಕ್ಕೆ ಹಿಂದಿರುಗಲು ಉದ್ದೇಶಿಸಿದ್ದು, ಇವರನ್ನು ಕರೆತರಲು ಅಗತ್ಯದಷ್ಟು ಸಂಖ್ಯೆಯ ವಿಮಾನಗಳ ಸೌಲಭ್ಯ ಇರುವುದಿಲ್ಲ. ಈ ಬಗ್ಗೆ ವಿದೇಶಾಂಗ ಸಚಿವಾಲಯದೊಂದಿಗೆ ವ್ಯವಹರಿಸಿ, ಈ ಸಮಸ್ಯೆಗಳನ್ನು ಬಗೆಹರಿಸಬೇಕು. ನೆದರ್‍ಲ್ಯಾಂಡ್ ಮುಂತಾದ ದೇಶಗಳಲ್ಲಿನ ಕನ್ನಡಿಗರಿಗೆ ನೇರವಾಗಿ ಬೆಂಗಳೂರಿಗೆ ಪ್ರಯಾಣಿಸಲು ವಿಮಾನ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಹೊರ ದೇಶಗಳಿಂದ ಬಂದ ಕನ್ನಡಿಗರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಅವರಲ್ಲಿ ಸೋಂಕಿದ್ದರೆ ಸೂಕ್ತ ರೀತಿಯ ಚಿಕಿತ್ಸೆ ನೀಡುವುದು, ಉಳಿದವರನ್ನು ಕ್ವಾರಂಟೈನ್‍ನಲ್ಲಿ ಇರಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಂಡು ಅನಿವಾಸಿ ಕನ್ನಡಿಗರ ಸಮಸ್ಯೆಗಳನ್ನು ತುರ್ತಾಗಿ ಬಗೆಹರಿಸಬೇಕು ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News