ದ್ವಿತೀಯ ಪಿಯು ಮೌಲ್ಯಮಾಪನ ಪ್ರಕ್ರಿಯೆ ನಿಗದಿತ ಅವಧಿಯಲ್ಲಿ ಪೂರ್ಣ: ಸುರೇಶ್ ಕುಮಾರ್

Update: 2020-06-01 17:21 GMT

ಬೆಂಗಳೂರು, ಜೂ.1: ರಾಜ್ಯದಲ್ಲಿ ಎಂಟು ಜಿಲ್ಲೆಗಳ 34 ಕೇಂದ್ರಗಳಲ್ಲಿ ದ್ವಿತೀಯ ಪಿಯು ವಿವಿಧ ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು ಸುಮಾರು 6,500 ಉಪನ್ಯಾಸಕರು ಈ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದು, ನಿಗದಿತ ಅವಧಿಯಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸೋಮವಾರ ನಗರದ ವಿಜಯ ಹಾಗೂ ಎಸ್‍ಎಸ್‍ಎಂಆರ್‍ವಿ ಕಾಲೇಜುಗಳಲ್ಲಿನ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಪಿಸಿಎಂಬಿ ಹಾಗೂ ಇನ್ನೂ ನಡೆದಿರದ ಇಂಗ್ಲಿಷ್ ಪರೀಕ್ಷಾ ಪತ್ರಿಕೆ ಹೊರತುಪಡಿಸಿ ಉಳಿದೆಲ್ಲ ವಿಷಯಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಿದ್ದು, ಇಂತಹ ಸಂದರ್ಭದಲ್ಲಿಯೂ ಉಪನ್ಯಾಸಕರು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ, ಅವರಿಗೆ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಕೋವಿಡ್ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯಗಳು, ಅನಾರೋಗ್ಯ ಪೀಡಿತರು, ಗರ್ಭಿಣಿಯರು ಸೇರಿದಂತೆ ಹಲವು ವ್ಯಕ್ತಿಗಳಿಗೆ ಮೌಲ್ಯಮಾಪನ ಪ್ರಕ್ರಿಯೆಯಿಂದ ಸಂಪೂರ್ಣ ವಿನಾಯಿತಿ ನೀಡಲಾಗಿದ್ದು ಸಾಮರ್ಥ್ಯವುಳ್ಳ ಉಪನ್ಯಾಸಕರು ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸ್ವಯಂಪ್ರೇರಿತರಾಗಿ ಮುಂದಿನ ದಿನಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ಪಿಸಿಎಂಬಿ ವಿಷಯಗಳ ಮೌಲ್ಯಮಾಪನಕ್ಕೆ ಹೆಚ್ಚುವರಿ ಉಪನ್ಯಾಸಕರ ಅಗತ್ಯತೆ ಇದ್ದು, ನಗರ ಕೇಂದ್ರಗಳಲ್ಲಿ ವಸತಿ, ಆಹಾರಸೌಕರ್ಯಗಳ ಲಭ್ಯತೆ ಆಧಾರದ ಮೇಲೆ ಆರಂಭದ ದಿನಾಂಕ ನಿರ್ಧರಿಸಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಜೂನ್ 18 ರಂದು ನಡೆಯಲಿರುವ ಇಂಗ್ಲಿಷ್ ಭಾಷೆ ಪರೀಕ್ಷೆಯ ಉತ್ತರ ಪತ್ರಿಕೆಯ ಮೌಲ್ಯಮಾಪನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಡೆಸಲು ಈಗಾಗಲೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News